
ರಾಮನಗರದಲ್ಲಿರುವ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಶಾಖಾ ಮಠದಲ್ಲಿ ನೇಗಿಲಯೋಗಿ ಸಮಾಜ ಸೇವಾ ಟ್ರಸ್ಟ್ ವತಿಯಿಂದ ಹಮ್ಮಿಕೊಂಡಿದ್ದ ಒಕ್ಕಲಿಗ ವಧು–ವರರ ಸಮಾವೇಶವನ್ನು ಮಠದ ಅನ್ನದಾನೇಶ್ವರನಾಥ ಸ್ವಾಮೀಜಿ ಉದ್ಘಾಟಿಸಿದರು.
ರಾಮನಗರ: ನೇಗಿಲಯೋಗಿ ಸಮಾಜ ಸೇವಾ ಟ್ರಸ್ಟ್ನ ಬೆಂಗಳೂರು ದಕ್ಷಿಣ ಜಿಲ್ಲಾ ಶಾಖೆ ವತಿಯಿಂದ ನಗರದ ಹೊರವಲಯದಲ್ಲಿರುವ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ರಾಮನಗರ ಶಾಖಾ ಮಠದಲ್ಲಿ ಇತ್ತೀಚೆಗೆ ಒಕ್ಕಲಿಗ ವಧು–ವರರ ಸಮಾವೇಶ ನಡೆಯಿತು.
ಸಮಾವೇಶ ಉದ್ಘಾಟಿಸಿ ಆಶೀರ್ವಚನ ನೀಡಿದ ಮಠದ ಅನ್ನದಾನೇಶ್ವರನಾಥ ಸ್ವಾಮೀಜಿ, ‘ಈಗಿನ ಕಾಲದಲ್ಲಿ ವಧು–ವರರನ್ನು ಹುಡುಕುವುದೇ ಪೋಷಕರಿಗೆ ದೊಡ್ಡ ಸವಾಲಾಗಿದೆ. ಅಂತಹ ಸಂದರ್ಭದಲ್ಲಿ ನೇಗಿಲಯೋಗಿ ಟ್ರಸ್ಟ್ನವರು ವಧು–ವರರ ಹುಡುಕಾಟಕ್ಕೆ ವೇದಿಕೆ ಕಲ್ಪಿಸುವ ಮೂಲಕ ಉತ್ತಮ ಕೆಲಸ ಮಾಡಿದ್ದಾರೆ’ ಎಂದರು.
ಟ್ರಸ್ಟ್ ಸಂಸ್ಥಾಪಕ ಅಧ್ಯಕ್ಷ ರವಿಕುಮಾರ್ ಮಾತನಾಡಿ, ‘ಒಕ್ಕಲಿಗ ಕುಲಭಾಂದವರ ಮಕ್ಕಳ ಮದುವೆ ವಿಚಾರದಲ್ಲಿ ಮಧ್ಯವರ್ತಿಗಳ ಹಾವಳಿ ತಪ್ಪಿಸಲು ಹಾಗೂ ಗ್ರಾಮೀಣ ಭಾಗದವರಿಗೆ ಅನುಕೂಲವಾಗಲೆಂದು ಒಕ್ಕಲಿಗ ವಧು-ವರರ ಸಮಾವೇಶ ನಡೆಸಲಾಗುತ್ತಿದೆ. ಇಲ್ಲಿ ಪಾರದರ್ಶಕವಾಗಿ ವಧು-ವರರ ಆಯ್ಕೆಗೆ ಟ್ರಸ್ಟ್ ಅವಕಾಶ ಕಲ್ಪಿಸುತ್ತಿದೆ’ ಎಂದರು.
ಟ್ರಸ್ಟ್ ಜಿಲ್ಲಾಧ್ಯಕ್ಷ ಪಟೇಲ್ ಸಿ. ರಾಜು, ‘ಗ್ರಾಮೀಣ ಪ್ರದೇಶದ ಒಕ್ಕಲಿಗ ಸಮುದಾಯದ ಅವಿವಾಹಿತರಿಗೆ ಮದುವೆ ಭಾಗ್ಯ ಸಿಗಬೇಕೆಂಬ ಉದ್ದೇಶದಿಮದ ಟ್ರಸ್ಟ್ ಈ ಸಮಾವೇಶ ನಡೆಸಿದೆ. ಜಿಲ್ಲೆಯ 5 ತಾಲ್ಲೂಕಿನ 200ಕ್ಕೂ ಹೆಚ್ಚು ವಧು-ವರರು ಸಮಾವೇಶದಲ್ಲಿ ಭಾಗವಹಿಸಿದ್ದಾರೆ’ ಎಂದು ತಿಳಿಸಿದರು.
ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿಜಿ ಜಿಲ್ಲಾಧ್ಯಕ್ಷ ಕೆ. ರಾಜು, ರಾಮನಗರ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಎ.ಬಿ. ಚೇತನ್ ಕುಮಾರ್, ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಎರೇಹಳ್ಳಿ ಮಂಜು, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಕೆ. ಸತೀಶ್, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಕೆಂಪಯ್ಯ, ತಾಲ್ಲೂಕು ಜೆಡಿಎಸ್ ಅಧ್ಯಕ್ಷ ಸಬ್ಬಕೆರೆ ಶಿವಲಿಂಗಪ್ಪ, ಟ್ರಸ್ಟ್ ಕಾರ್ಯದರ್ಶಿ ತಿಮ್ಮೇಗೌಡ ಹಾಗೂ ಇತರರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.