ADVERTISEMENT

ಸೊಂಡಿಲಿಂದ ವೃದ್ಧ ರೈತನನ್ನು ಎತ್ತಿ ಎಸೆದ ಕಾಡಾನೆ

​ಪ್ರಜಾವಾಣಿ ವಾರ್ತೆ
Published 4 ಮಾರ್ಚ್ 2026, 4:22 IST
Last Updated 4 ಮಾರ್ಚ್ 2026, 4:22 IST
ಚನ್ನಪಟ್ಟಣ ತಾಲ್ಲೂಕಿನ ಸಂತೆ ಮೊಗೇನಹಳ್ಳಿ ಗ್ರಾಮದಲ್ಲಿ ಕಾಡಾನೆ ದಾಳಿ ನಡೆಸಿ ಗಾಯಗೊಂಡಿದ್ದ ರೈತ ನಾರಾಯಣಗೌಡ ಅವರನ್ನು ವಲಯ ಅರಣ್ಯಾಧಿಕಾರಿ ಮಲ್ಲೇಶ್ ಹಾಗೂ ಸಿಬ್ಬಂದಿ ಕಾರಿನಲ್ಲಿ ಸಾರ್ವಜನಿಕ ಆಸ್ಪತ್ರೆಗೆ ಕರೆತಂದರು
ಚನ್ನಪಟ್ಟಣ ತಾಲ್ಲೂಕಿನ ಸಂತೆ ಮೊಗೇನಹಳ್ಳಿ ಗ್ರಾಮದಲ್ಲಿ ಕಾಡಾನೆ ದಾಳಿ ನಡೆಸಿ ಗಾಯಗೊಂಡಿದ್ದ ರೈತ ನಾರಾಯಣಗೌಡ ಅವರನ್ನು ವಲಯ ಅರಣ್ಯಾಧಿಕಾರಿ ಮಲ್ಲೇಶ್ ಹಾಗೂ ಸಿಬ್ಬಂದಿ ಕಾರಿನಲ್ಲಿ ಸಾರ್ವಜನಿಕ ಆಸ್ಪತ್ರೆಗೆ ಕರೆತಂದರು   

ಚನ್ನಪಟ್ಟಣ: ತಾಲ್ಲೂಕಿನ ವಿರುಪಾಕ್ಷಿಪುರ ಹೋಬಳಿಯ ಸಂತೆ ಮೊಗೇನಹಳ್ಳಿ ಗ್ರಾಮದಲ್ಲಿ ಮಂಗಳವಾರ ಬೆಳಗಿನ ಜಾವ ಕಾಡಾನೆ ದಾಳಿಯಲ್ಲಿ ವೃದ್ಧ ರೈತನ ತೀವ್ರವಾಗಿ ಗಾಯಗೊಂಡಿದ್ದಾರೆ.  

ಗ್ರಾಮದ ನಾರಾಯಣಗೌಡ (70) ಗಾಯಗೊಂಡಿರುವ ವೃದ್ಧ.ಬೆಳಗಿನ ಜಾವ 5.30ಕ್ಕೆ ಗ್ರಾಮದ ಕೆರೆ ರಸ್ತೆಯ ಜಮೀನಿಗೆ ತೆರಳುತ್ತಿದ್ದ ವೇಳೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ವೃದ್ಧನನ್ನು ಸೊಂಡಿಲಿನಿಂದ ಎತ್ತಿ ಎಸೆದು ಕತ್ತಲೆಯಲ್ಲಿ ಮರೆಯಾಗಿದೆ. ವೃದ್ಧನ ಬಲಗಾಲಿನ ಮೂಳೆ ಸಂಪೂರ್ಣ ಮುರಿದಿದೆ. ಜೊತೆಗೆ ಮೇಲಿಂದ ಕೆಳಗೆ ಬಿದ್ದಾಗ ಸೊಂಟಕ್ಕೆ ತೀವ್ರ ಪೆಟ್ಟಾಗಿದೆ.

ಸ್ವಲ್ಪಹೊತ್ತಿನ ನಂತರ ನಾರಾಯಣಗೌಡ ಅವರ ಕೂಗಾಟ ಕೇಳಿ ಗ್ರಾಮಸ್ಥರು ಗ್ರಾಮಕ್ಕೆ ಕರೆತಂದಿದ್ದಾರೆ. ನಂತರ ಅರಣ್ಯ ಇಲಾಖೆಗೆ ವಿಷಯ ತಿಳಿಸಿದ್ದಾರೆ. ಸಿಬ್ಬಂದಿ ಜೊತೆ ಸ್ಥಳಕ್ಕೆ ಬಂದ ವಲಯ ಅರಣ್ಯಾಧಿಕಾರಿ ಮಲ್ಲೇಶ್, ನಾರಾಯಣ ಗೌಡ ಅವರಿಗೆ ನಗರದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.


ಜಿಲ್ಲಾ ಉಪ ಅರಣ್ಯ ಸಂರಕ್ಷಣಾಧಿಕಾರಿ ರಾಮಕೃಷ್ಣಪ್ಪ ಹಾಗೂ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪುಟ್ಟಮ್ಮ ಭೇಟಿ ನೀಡಿ ಗಾಯಾಳು  ಆರೋಗ್ಯ ವಿಚಾರಿಸಿದರು. ಚಿಕಿತ್ಸೆಗೆ ತಗಲುವ ವೆಚ್ಚವನ್ನು ಇಲಾಖೆ ವತಿಯಿಂದ ಭರಿಸುವ ಭರವಸೆ ನೀಡಿದರು.

ಸದ್ಯ ಗಾಯಾಳು ನಾರಾಯಣಗೌಡ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ರಾಮನಗರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ತಾಲ್ಲೂಕಿನ ಬಿ.ವಿ.ಹಳ್ಳಿ ಅರಣ್ಯ ವ್ಯಾಪ್ತಿಯ ಕೆಂಪಿಕಟ್ಟೆ ಬಳಿ ಭಾನುವಾರ (ಮಾ.1) ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಮಕ್ನಾ ಕಾಡಾನೆಯೊಂದನ್ನು ಸೆರೆ ಹಿಡಿದಿದ್ದರು. ಇದಾದ ಕೇವಲ ಎರಡು ದಿನಗಳಲ್ಲಿ ಕಾಡಾನೆಯೊಂದು ರೈತನ ಮೇಲೆ ದಾಳಿ ನಡೆಸಿದೆ.

ADVERTISEMENT

ಕಾಡಾನೆಗಳನ್ನು ಕಾಡಿಗೆ ಅಟ್ಟಬೇಕು ಅಥವಾ ಸೆರೆ ಹಿಡಿದು ದೂರದ ಕಾಡುಗಳಿಗೆ ಸಾಗಿಸಬೇಕು ಎಂದು ರೈತರು ಒತ್ತಾಯಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.