ADVERTISEMENT

ಪೆಟ್ರೋಲ್ ‘100 ನಾಟೌಟ್’: ಇಂಧನ ಬೆಲೆ ಏರಿಕೆ ಖಂಡಿಸಿ ಯುವ ಕಾಂಗ್ರೆಸ್‌ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 14 ಜೂನ್ 2021, 3:19 IST
Last Updated 14 ಜೂನ್ 2021, 3:19 IST
ಕನಕಪುರದ ಸೂರಿ ಪೆಟ್ರೋಲ್‌ ಬಂಕ್‌ ಮುಂಭಾಗ ಯುವ ಕಾಂಗ್ರೆಸ್‌ ಪದಾಧಿಕಾರಿಗಳು ತೈಲ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ ನಡೆಸಿದರು
ಕನಕಪುರದ ಸೂರಿ ಪೆಟ್ರೋಲ್‌ ಬಂಕ್‌ ಮುಂಭಾಗ ಯುವ ಕಾಂಗ್ರೆಸ್‌ ಪದಾಧಿಕಾರಿಗಳು ತೈಲ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ ನಡೆಸಿದರು   

ಕನಕಪುರ: ಇಲ್ಲಿನ ಮೈಸೂರು ರಸ್ತೆಯ ಸೂರಿ ಪೆಟ್ರೋಲ್‌ ಬಂಕ್‌ ಮುಂಭಾಗ ಭಾನುವಾರ ಯೂತ್‌ ಕಾಂಗ್ರೆಸ್‌ ಕಾರ್ಯಕರ್ತರು ಕೇಂದ್ರ ಸರ್ಕಾರದ ತೈಲ ಬೆಲೆ ಏರಿಕೆ ಖಂಡಿಸಿ ಭಾನುವಾರ ಪ್ರತಿಭಟನೆ ನಡೆಸಿದರು.

ಪೆಟ್ರೋಲ್‌ ‘100 ನಾಟೌಟ್‌’ ಪ್ರದರ್ಶನ ನಡೆಸಿದ ಪ್ರತಿಭಟನಾಕಾರರು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪೆಟ್ರೋಲಿಯಂ ಉತ್ಪನ್ನಗಳ ದರ ನಿಯಂತ್ರಿಸುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಘೋಷಣೆಕೂಗಿದರು.

ಯೂತ್‌ ಕಾಂಗ್ರೆಸ್‌ ರಾಜ್ಯ ಪ್ರಧಾನ ಕಾರ್ಯದರ್ಶಿ ಅನಿಲ್‌ ಕುಮಾರ್‌ ಮಾತನಾಡಿ, ಕೊರೊನಾ ಸೋಂಕಿನ ಕಾರಣದಿಂದ ದೇಶದೆಲ್ಲೆಡೆ ಲಾಕ್‌ಡೌನ್‌ ಜಾರಿಗೊಳಿಸಲಾಗಿದೆ. ಇದರಿಂದ ಜನರು ಜೀವನ ನಡೆಸುವುದೇ ಕಷ್ಟಕರವಾಗಿದೆ. ಇಂತಹ ಕಠಿಣ ಪರಿಸ್ಥಿತಿಯಲ್ಲಿ ತೈಲ ಬೆಲೆ ನಿರಂತರವಾಗಿ ಏರಿಕೆಯಾಗುತ್ತಿದೆ. ಇದರಿಂದ ಜನಸಾಮಾನ್ಯರು ಜೀವನ ನಿರ್ವಹಣೆ ಮಾಡಲಾಗದ ಸ್ಥಿತಿ ನಿರ್ಮಾಣವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ADVERTISEMENT

ಪ್ರತಿ ಲೀಟರ್‌ ಪೆಟ್ರೋಲ್‌ ಬೆಲೆ ₹ 100 ಗಡಿ ದಾಟಿದೆ. ಇಂದು ವಾಹನಗಳಿಲ್ಲದೆ ಜನರ ಜೀವನವೇ ನಡೆಯುವುದಿಲ್ಲ. ತಮಗೆ ಸಂಪಾದನೆ ಇರಲಿ, ಇಲ್ಲದಿರಲಿ ಪ್ರತಿ ವ್ಯಕ್ತಿಯೂ ವಾಹನಗಳ ಮೇಲೆ ಅವಲಂಬಿತನಾಗಿದ್ದಾನೆ. ಒಂದೂವರೆ ವರ್ಷದಿಂದ ಕೋವಿಡ್‌ ಸಂಕಷ್ಟದಲ್ಲೇ ಜನರು ಜೀವನ ದೂಡುತ್ತಿದ್ದಾರೆ. ಇಂತಹ ಸ್ಥಿತಿಯಲ್ಲೂ ಪೆಟ್ರೋಲ್‌, ಡೀಸೆಲ್‌, ಎಲ್‌ಪಿಜಿ ಬೆಲೆ ಏರಿಕೆ ನಾಗಾಲೋಟದಲ್ಲಿ ಸಾಗುತ್ತಿದೆ ಎಂದು ದೂರಿದರು.

ಯೂತ್‌ ಕಾಂಗ್ರೆಸ್‌ ತಾಲ್ಲೂಕು ಘಟಕದ ಅಧ್ಯಕ್ಷ ದೀಪು ಮಾತನಾಡಿ, ಕಾಂಗ್ರೆಸ್‌ ಸರ್ಕಾರದಲ್ಲಿ ಪೆಟ್ರೋಲ್‌ ಬೆಲೆ ₹ 60ರಿಂದ ₹ 65 ಆಸುಪಾಸಿನಲ್ಲಿತ್ತು. ಆದರೂ ಅಂದು ಮಹಿಳಾ ಪದಾಧಿಕಾರಿಗಳು ಸೇರಿದಂತೆ ಬಿಜೆಪಿಯವರು ಬೀದಿಗಿಳಿದು ಹೋರಾಟ ನಡೆಸಿದ್ದರು. ಪ್ರತಿಭಟನೆ ಮಾಡಿ ತೈಲ ಬೆಲೆ ಇಳಿಸುವಂತೆ ಒತ್ತಾಯಿಸಿದ್ದರು. ಈಗ ₹ 100ರ ಗಡಿ ದಾಟಿದ್ದರೂ ಯಾರೊಬ್ಬರು ತುಟಿ ಬಿಚ್ಚದೆ ಮೌನಕ್ಕೆ ಶರಣಾಗಿದ್ದಾರೆ ಎಂದು ಕಿಡಿಕಾರಿದರು.

ದೇಶದ ಜನರನ್ನು ಮರುಳು ಮಾಡಿ ಅಚ್ಛೇದಿನಗಳು ಬರುತ್ತವೆ ಎಂದು ಮೋದಿ ಹೇಳುತ್ತಿದ್ದರು. ಇಂದು ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುವ ಮೂಲಕ ಜನರ ಜೇಬಿಗೆ ಕತ್ತರಿ ಹಾಕುತ್ತಿದ್ದಾರೆ. ಯಾವುದು ಜನಸಾಮಾನ್ಯರಿಗೆ ಹೊರೆ ಆಗುತ್ತದೊ ಅಂತಹದ್ದನ್ನು ಸರ್ಕಾರ ಕೂಡಲೇ ಹಿಂಪಡೆದು ಜನರ ಪರವಾಗಿ ನಿಲ್ಲಬೇಕು. ಇಲ್ಲವಾದರೆ ಉಗ್ರ ಹೋರಾಟವನ್ನು ಮುಂದುವರಿಸಲಾಗುವುದು ಎಂದುಆಗ್ರಹಿಸಿದರು.

ಯುವ ಕಾಂಗ್ರೆಸ್‌ ಪದಾಧಿಕಾರಿಗಳಾದ ವಿನೋದ್‌, ಕಿರಣ್‌, ಶಿವು, ಮಂಜು, ಪುಟ್ಟರಾಜು, ಹೇಮಚಂದ್ರ, ಶ್ರೀಧರ್‌, ರಿಜ್ವಾನ್‌ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.