ADVERTISEMENT

ಎರಡನೇ ಹಸಿರು ಕ್ರಾಂತಿ ಅಗತ್ಯ

​ಪ್ರಜಾವಾಣಿ ವಾರ್ತೆ
Published 5 ಫೆಬ್ರುವರಿ 2011, 9:00 IST
Last Updated 5 ಫೆಬ್ರುವರಿ 2011, 9:00 IST


ಶಿವಮೊಗ್ಗ: ಕೃಷಿ ವಸ್ತುಗಳಿಗೆ ಹೆಚ್ಚಿದ ಬೇಡಿಕೆ ಹಿನ್ನೆಲೆಯಲ್ಲಿ ಕೃಷಿ ವಿಜ್ಞಾನಿ ಡಾ.ಸ್ವಾಮಿನಾಥನ್ ಹೇಳಿದಂತೆ ದೇಶದಲ್ಲಿ ಎರಡನೇ ಹಸಿರು ಕ್ರಾಂತಿಯ ಅಗತ್ಯವಿದೆ ಎಂದು ಉಡುಪಿಯ ಕೆ.ಎಸ್. ಹೆಗ್ಡೆ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೆಜ್‌ಮೆಂಟ್‌ನ ಅರ್ಥಶಾಸ್ತ್ರ ಪ್ರಾಧ್ಯಾಪಕ ಡಾ.ಜಿ.ವಿ. ಜೋಷಿ ಅಭಿಪ್ರಾಯಪಟ್ಟರು.ಕುವೆಂಪು ವಿಶ್ವವಿದ್ಯಾಲಯ ಜ್ಞಾನ ಸಹ್ಯಾದ್ರಿಯ ಶಂಕರಘಟ್ಟದಲ್ಲಿ ಅರ್ಥಶಾಸ್ತ್ರ ವಿಭಾಗ ಶುಕ್ರವಾರ ‘ಕೃಷಿ ಮಾರುಕಟ್ಟೆಯ ಪ್ರಸ್ತುತ ಸ್ಥಿತಿ-ಗತಿಗಳು’ ವಿಷಯ ಕುರಿತು ಹಮ್ಮಿಕೊಂಡಿದ್ದ ರಾಷ್ಟ್ರೀಯವಿಚಾರಸಂಕಿರಣ ಉದ್ಘಾಟಿಸಿ ಅವರು ಮಾತನಾಡಿದರು.

ಇತ್ತೀಚೆಗೆ ಕೃಷಿ ವಸ್ತುಗಳಿಗೆ ಬೇಡಿಕೆ ಹೆಚ್ಚಾಗಿದೆ. ಆದರೆ, ಪೂರೈಕೆ ಇಲ್ಲ. ಕೃಷಿ ಉತ್ಪಾದನೆ ಗಣನೀಯ ಪ್ರಮಾಣದಲ್ಲಿ ಕುಂಠಿತವಾಗುತ್ತಿದೆ. ಈ ಎಲ್ಲಾ ಹಿನ್ನೆಲೆಯಲ್ಲಿ ಇನ್ನೊಂದು ಹಸಿರು ಕ್ರಾಂತಿಯ ಅಗತ್ಯವಿದೆ ಎಂದರು.ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆ ಮೂಲಸೌಕರ್ಯಗಳ ಕೊರತೆಯಿಂದ ನರಳುತ್ತಿದೆ. ಈ ನಿಟ್ಟಿನಲ್ಲಿ ಕೃಷಿಉತ್ಪನ್ನ ಮಾರುಕಟ್ಟೆ ಕಾಯ್ದೆಯಲ್ಲಿ ಸುಧಾರಣೆಗಳಾಗಬೇಕು ಎಂದರು.ಬಹಳಷ್ಟು ಕಾಯ್ದೆಗಳು ಮಧ್ಯವರ್ತಿಗಳಿಗೆ ಅನುಕೂಲವಾಗುತ್ತಿವೆ ಹೊರತು ರೈತರಿಗಲ್ಲ. ಈ ನಿಟ್ಟಿನಲ್ಲಿ ಸರ್ಕಾರ ವಿಶೇಷ ಗಮನ ಹರಿಸಬೇಕು ಎಂದರು.

ಬೆಂಗಳೂರಿನ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಾ.ಪಿ.ಜಿ. ಚಂಗಪ್ಪ ಪ್ರಾಸ್ತಾವಿಕವಾಗಿ ಮಾತನಾಡಿದರು. ಡಾ.ಟಿ.ಆರ್. ಮಂಜುನಾಥ್ ಉಪಸ್ಥಿತರಿದ್ದರು. ಕುವೆಂಪು ವಿಶ್ವವಿದ್ಯಾಲಯ ಕುಲಪತಿ ಪ್ರೊ.ಎಸ್.ಎ. ಬಾರಿ ಅಧ್ಯಕ್ಷತೆ ವಹಿಸಿದ್ದರು.ವಿಭಾಗದ ಅಧ್ಯಕ್ಷ ಪ್ರೊ.ಎಸ್.ಎನ್. ಯೋಗೀಶ್ ಸ್ವಾಗತಿಸಿದರು.ಪ್ರೊ.ಬಿ. ಜಯರಾಮ್ ಭಟ್ ವಂದಿಸಿದರು. ವಿನುತಾ ಕಾರ್ಯಕ್ರಮನಿರೂಪಿಸಿದರು. ನಂತರದ ಗೋಷ್ಠಿಗಳಲ್ಲಿ ಪ್ರೊ.ಕೆ.ಸಿ. ಬಸವರಾಜು, ಪ್ರೊ.ಎಂ. ಮಂದಣ್ಣ, ಪ್ರೊ.ವೆಂಕಟರೆಡ್ಡಿ, ಪ್ರೊ.ಬಿ.ಎಂ. ಶಶಿಧರ್ ಮತ್ತಿತರರು ಪ್ರಬಂಧ ಮಂಡಿಸಿದರು.


 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT