ADVERTISEMENT

ಎಲೆಕ್ಟ್ರಾನಿಕ್ ವೇ ಬ್ರಿಡ್ಜ್ ಉದ್ಘಾಟನಾ ಸಮಾರಂಭ

​ಪ್ರಜಾವಾಣಿ ವಾರ್ತೆ
Published 16 ಆಗಸ್ಟ್ 2012, 7:50 IST
Last Updated 16 ಆಗಸ್ಟ್ 2012, 7:50 IST

ಭದ್ರಾವತಿ: ಜಿಲ್ಲೆಯ ಯಾವುದೇ ತಾಲ್ಲೂಕಿಗೂ ತಾರತಮ್ಯ ಮಾಡದ ರೀತಿಯಲ್ಲಿ ಅಭಿವೃದ್ಧಿ ಕೆಲಸ ಮಾಡಲಾಗುವುದು~ ಎಂದು ಉಪ ಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು.

ಇಲ್ಲಿನ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಪ್ರವೇಶದ್ವಾರ ಹಾಗೂ ಎಲೆಕ್ಟ್ರಾನಿಕ್ ವೇ ಬ್ರಿಡ್ಜ್ ಉದ್ಘಾಟನೆ ನೆರವೇರಿಸಿದ ನಂತರ ಜರುಗಿದ ಸಭೆಯಲ್ಲಿ ಅವರು ಮಾತನಾಡಿದರು.

ಹಿಂದೆ ಬಿ.ಎಸ್. ಯಡಿಯೂರಪ್ಪ, ಜಿಲ್ಲಾ ಸಚಿವರಾದ ಸಂದರ್ಭದಲ್ಲಿ ಯಾವುದೇ ತಾರತಮ್ಯ ಮಾಡದೆ ಜಿಲ್ಲೆಯ ಅಭಿವೃದ್ಧಿಗಾಗಿ ಶ್ರಮಿಸಿದ್ದರು. ಅದೇ ರೀತಿ ಈ ಕ್ಷೇತ್ರಕ್ಕೂ ಹೆಚ್ಚು ಅನುದಾನ ನೀಡಲು ಬದ್ಧನಿದ್ದೇನೆ ಎಂದು ಘೋಷಿಸಿದರು.

ADVERTISEMENT

ಲಾಭ ಹೆಚ್ಚಿಸಿಕೊಳ್ಳಿ: ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳು ಲಾಭ ಹೆಚ್ಚಿಸಿಕೊಳ್ಳುವ ಕಡೆ ಗಮನ ನೀಡುವ ಜತೆಗೆ, ರೈತರು ಇಲ್ಲೇ ಬಂದು ಮಾರಾಟ ಮಾಡಬೇಕು ಎಂಬ ಭಾವನೆ ಮೂಡಿಸುವ ಕೆಲಸ ಮಾಡಬೇಕಿದೆ ಎಂದು ಕರೆ ನೀಡಿದರು.

ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿನ ಸಾಲವನ್ನು ಮನ್ನಾ ಮಾಡಬೇಕೆಂಬ ಬೇಡಿಕೆಯನ್ನು ಕೇಂದ್ರದ ಮುಂದೆ ಇಡಲಾಗುವುದು ಎಂದು ಸಂಸದ ಬಿ.ವೈ. ರಾಘವೇಂದ್ರ ಇದೇ ಸಂದರ್ಭದಲ್ಲಿ ಹೇಳಿದರು.

ಈ ಕುರಿತಾಗಿ ರಾಜ್ಯದ ಸಂಸದರ ನಿಯೋಗ ಮುಂದಿನ ವಾರ ದೆಹಲಿಯಲ್ಲಿ ಸಂಬಂಧಿಸಿದ ಸಚಿವರನ್ನು ಭೇಟಿ ಮಾಡಿ ಒತ್ತಡ ಹೇರುವ ಕೆಲಸ ಮಾಡಲಿದೆ ಎಂದು ಹೇಳಿದ ಅವರು ಕೇಂದ್ರ ಹಾಗೂ ರಾಜ್ಯ ಸರ್ಕಾರದ ನೆರವಿನಿಂದ ಭದ್ರಾ, ತುಂಗಾ ನದಿ ಪಾತ್ರದಲ್ಲಿ ರಕ್ಷಣಾ ಗೋಡೆ ಕಟ್ಟುವ ಕೆಲಸ ನಡೆಯಲಿದೆ ಎಂದರು.

ಶಾಸಕ ಬಿ.ಕೆ. ಸಂಗಮೇಶ್ವರ ಮಾತನಾಡಿ, `ಇಲ್ಲಿನ ಎಪಿಎಂಸಿ ಅಭಿವೃದ್ಧಿಗಾಗಿ ಸುಮಾರು ್ಙ 9.5 ಕೋಟಿ ವೆಚ್ಚದ ವಿವಿಧ ಕೆಲಸಕ್ಕೆ ಮನವಿ ಸಲ್ಲಿಸಿದ್ದು, ಅದನ್ನು ಈಡೇರಿಸುವ ನಿಟ್ಟಿನಲ್ಲಿ ಜಿಲ್ಲಾ ಸಚಿವರು ಮುಂದಾಗಬೇಕು~ ಎಂದರು.

ಎಪಿಎಂಸಿ ಅಧ್ಯಕ್ಷ ಎ.ಜಿ. ಶಿವಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಶಿವಮೊಗ್ಗ ಗ್ರಾಮಾಂತರ ಶಾಸಕ ಕೆ.ಜಿ. ಕುಮಾರಸ್ವಾಮಿ, ಆರ್.ಕೆ. ಸಿದ್ದರಾಮಣ್ಣ, ಜಿ.ಪಂ ಅಧ್ಯಕ್ಷೆ ಶುಭಾ ಕೃಷ್ಣಮೂರ್ತಿ, ಉಪಾಧ್ಯಕ್ಷ ಗಂಗಾಧರಯ್ಯ, ತಾ.ಪಂ ಅಧ್ಯಕ್ಷ ಹಾಲಪ್ಪ, ಜಿಲ್ಲಾಧಿಕಾರಿ ಎಂ.ವಿ. ವೇದಮೂರ್ತಿ, ಶಿವಮೊಗ್ಗ ಎಪಿಎಂಸಿ ಅಧ್ಯಕ್ಷ ಜ್ಯೋತಿ ಪ್ರಕಾಶ್, ಜಿ.ಪಂ ಸದಸ್ಯರಾದ ಹೇಮಾಪಾವನಿ, ಎಚ್.ಎಲ್. ಷಡಾಕ್ಷರಿ ಉಪಸ್ಥಿತರಿದ್ದರು.

ಸರಸ್ವತಿ ಬಾಯಿ ಪ್ರಾರ್ಥಿಸಿದರು, ಹರೋನಹಳ್ಳಿ ಸ್ವಾಮಿ, ಸುಮ ನಾಡಗೀತೆ ಹಾಡಿದರು, ಎಪಿಎಂಸಿ ಉಪಾಧ್ಯಕ್ಷ ಎಲ್.ಸಿ. ದೇವರಾಜ್ ಸ್ವಾಗತಿಸಿದರು, ಎಚ್.ಎಂ. ರವಿಶಂಕರ್ ನಿರೂಪಿಸಿದರು.       

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.