ಶಿವಮೊಗ್ಗ: ಬಜೆಟ್ ಮಂಡನೆ ನಂತರ ಪ್ರಥಮ ಬಾರಿಗೆ ಜಿಲ್ಲೆಗೆ ಭೇಟಿ ನೀಡುತ್ತಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಂದ ಕೆಲವೊಂದು ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ಕೊಡಿಸುವ ಹಾಗೂ ಈಗಾಗಲೇ ಪೂರ್ಣಗೊಂಡಿರುವ ಕಾಮಗಾರಿಗಳ ಉದ್ಘಾಟನೆ ಮಾಡಿಸುವ ದಿಸೆಯಲ್ಲಿ ಜಿಲ್ಲಾಡಳಿತ ಕಾರ್ಯಯೋಜನೆ ರೂಪಿಸಿದೆ.ಈ ಸಂಬಂಧ ಜಿಲ್ಲಾಧಿಕಾರಿ ವಿ. ಪೊನ್ನುರಾಜ್ ಗುರುವಾರ ವಿಶೇಷ ಸಭೆ ನಡೆಸಿ ಹೊಸ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ, ಪೂರ್ಣಗೊಂಡಿರುವ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆಗೆ ಆಯಾ ಇಲಾಖೆ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ನಗರದಲ್ಲಿ ಈಗಾಗಲೇ ಪೂರ್ಣಗೊಂಡಿರುವ ವಾಣಿಜ್ಯ ತೆರಿಗೆ ಇಲಾಖೆ ಕಟ್ಟಡ, ಲೋಕೋಪಯೋಗಿ ಇಲಾಖೆ ನೌಕರರ ವಸತಿ ಗೃಹ, ಆಯುರ್ವೇದಿಕ ಆಸ್ಪತ್ರೆ, ಬಿಸಿಎಂ ಹಾಸ್ಟೆಲ್, ಹೆಲಿಪ್ಯಾಡ್, ಜಿಲ್ಲಾ ತರಬೇತಿ ಶಿಕ್ಷಣ ಸಂಸ್ಥೆಗಳ ಉದ್ಘಾಟನೆ ಹಾಗೂ ` 10 ಕೋಟಿ ವೆಚ್ಚದಲ್ಲಿ ಸುಸಜ್ಜಿತವಾಗಿ ನಿರ್ಮಿಸಲು ಉದ್ದೇಶಿಸಿರುವ ಗಾಂಧಿಪಾರ್ಕ್, ಮಹಿಳಾ ಕೈಗಾರಿಕಾ ತರಬೇತಿ ಕೇಂದ್ರ, ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜು ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲು ಸಿದ್ಧತೆ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಆಯಾ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಈ ಕಾರ್ಯಕ್ರಮಗಳ ನಂತರ ಜಿಲ್ಲಾ ಅಭಿವೃದ್ಧಿ ಕುರಿತಂತೆ ಮುಖ್ಯಮಂತ್ರಿ ಸಭೆ ನಡೆಸುತ್ತಿದ್ದು ಅಧಿಕಾರಿಗಳು ಸಜ್ಜಾಗುವುದರ ಜತೆಗೆ ಗಂಭೀರ ಸಮಸ್ಯೆಗಳಿದ್ದಲ್ಲಿ ಮುಖ್ಯಮಂತ್ರಿ ಗಮನಕ್ಕೆ ತಂದು ಅವುಗಳಿಗೆ ಪರಿಹಾರ ಕಂಡುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.ನಗರ ವ್ಯಾಪ್ತಿಯಲ್ಲಿ ಬರುವ ಶಾಲಾ ಕಟ್ಟಡಗಳು ಹಾಗೂ ಆರೋಗ್ಯ ಕೇಂದ್ರಗಳ ಕಟ್ಟಡಗಳು ದುರಸ್ತಿಯಾಗದೆ ಹೀನಾಯ ಸ್ಥಿತಿಯಲ್ಲಿವೆ. ಇವುಗಳ ದುರಸ್ತಿಯನ್ನು ಯಾವ ಇಲಾಖೆ ಮೂಲಕ ಮಾಡಿಸಬೇಕು? ಅವುಗಳಿಗೆ ಅನುದಾನ ಒದಗಿಸುವುದು ಹೇಗೆ? ಎಂಬ ಗೊಂದಲವಿದ್ದು. ಇದಕ್ಕೆ ಪರಿಹಾರ ಕಂಡುಕೊಳ್ಳಬೇಕಾದ ಅನಿವಾರ್ಯತೆ ಇದೆ ಎಂದು ನಗರಸಭೆ ಆಯುಕ್ತ ಬಿ. ಜಯಣ್ಣ ಹಾಗೂ ಜಿಲ್ಲಾ ಆರೋಗ್ಯಾಧಿಕಾರಿ ಚನ್ನಬಸಪ್ಪ ಜಿಲ್ಲಾಧಿಕಾರಿ ಗಮನ ಸೆಳೆದಾಗ, ಈ ವಿಚಾರವನ್ನು ಮುಖ್ಯಮಂತ್ರಿ ಗಮನಕ್ಕೆ ತಂದು, ಪರಿಹಾರ ಕಂಡುಕೊಳ್ಳುವುದಾಗಿ ತಿಳಿಸಿದರು.
ಲೋಕೋಪಯೋಗಿ ಹಾಗೂ ಜಿಲ್ಲಾ ಪಂಚಾಯ್ತಿ ಎಂಜಿನಿಯರಿಂಗ್ ಕಚೇರಿಗಳಲ್ಲಿ ಸಿಬ್ಬಂದಿ ಕೊರತೆ ಹಾಗೂ ವಾಹನಗಳ ಕೊರತೆ ಇದ್ದು, ಮುಖ್ಯಮಂತ್ರಿಗಳ ಗಮನಕ್ಕೆ ತಂದು ಪರಿಹಾರ ಕಲ್ಪಿಸಿಕೊಡುವಂತೆ ಇಲಾಖೆ ಅಧಿಕಾರಿಗಳು, ಜಿಲ್ಲಾಧಿಕಾರಿ ಗಮನ ಸೆಳೆದರು.ಗಾಜನೂರು ಜಲಾಶಯದಿಂದ ಮಂಡ್ಲಿವರೆಗೆ ಕುಡಿಯುವ ನೀರಿನ ಹೆಚ್ಚುವರಿ ಪೈಪ್ಲೈನ್ ಅಳವಡಿಸುವ ಅನಿವಾರ್ಯತೆ ಸೇರಿದಂತೆ ಕೆಲವೊಂದು ಪ್ರಮುಖ ವಿಚಾರಗಳನ್ನು ಮುಖ್ಯಮಂತ್ರಿ ಜತೆ ಚರ್ಚಿಸಲು ಜಿಲ್ಲಾಧಿಕಾರಿ ಸಿದ್ಧತೆಕೈಗೊಂಡಿದ್ದಾರೆ.ಸಭೆಯಲ್ಲಿ ಜಿ.ಪಂ. ಸಿಇಒ ಎ.ಬಿ. ಹೇಮಚಂದ್ರ, ಅಪರ ಜಿಲ್ಲಾಧಿಕಾರಿ ಎಂ.ಕೆ. ಶ್ರೀರಂಗಯ್ಯ, ಉಪ ವಿಭಾಗಾಧಿಕಾರಿ ಎಂ.ಎಲ್. ವೈಶಾಲಿ ಮತ್ತಿತರ ಅಧಿಕಾರಿಗಳು ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.