ADVERTISEMENT

ಕುಡಿಯುವ ನೀರು ಸಮಸ್ಯೆ ಪರಿಹಾರಕ್ಕೆ ಕೈಜೋಡಿಸಿ

ಸಭೆಯಲ್ಲಿ ಕಾಗೋಡು ತಿಮ್ಮಪ್ಪ ಸೂಚನೆ

​ಪ್ರಜಾವಾಣಿ ವಾರ್ತೆ
Published 9 ಮೇ 2014, 8:59 IST
Last Updated 9 ಮೇ 2014, 8:59 IST
ಶಿವಮೊಗ್ಗದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ಕುಡಿಯುವ ನೀರು ಪೂರೈಕೆ ಸೇರಿದಂತೆ ವಿವಿಧ ಮೂಲ ಸೌಕರ್ಯಗಳ ಕುರಿತ ಹಮ್ಮಿಕೊಂಡಿದ್ದ ಸಭೆಯಲ್ಲಿ ವಿಧಾನಸಭಾಧ್ಯಕ್ಷ ಕಾಗೋಡು ತಿಮ್ಮಪ್ಪ ಮಾತನಾಡಿದರು. ಜಿಲ್ಲಾ ಪಂಚಾಯ್ತಿ ಸಿಇಒ ಎಸ್.ಸಸಿಕಾಂತ್ ಸೆಂಥಿಲ್, ಜಿಲ್ಲಾಧಿಕಾರಿ ವಿಪುಲ್ ಬನ್ಸಲ್ ಉಪಸ್ಥಿತರಿದ್ದರು.
ಶಿವಮೊಗ್ಗದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ಕುಡಿಯುವ ನೀರು ಪೂರೈಕೆ ಸೇರಿದಂತೆ ವಿವಿಧ ಮೂಲ ಸೌಕರ್ಯಗಳ ಕುರಿತ ಹಮ್ಮಿಕೊಂಡಿದ್ದ ಸಭೆಯಲ್ಲಿ ವಿಧಾನಸಭಾಧ್ಯಕ್ಷ ಕಾಗೋಡು ತಿಮ್ಮಪ್ಪ ಮಾತನಾಡಿದರು. ಜಿಲ್ಲಾ ಪಂಚಾಯ್ತಿ ಸಿಇಒ ಎಸ್.ಸಸಿಕಾಂತ್ ಸೆಂಥಿಲ್, ಜಿಲ್ಲಾಧಿಕಾರಿ ವಿಪುಲ್ ಬನ್ಸಲ್ ಉಪಸ್ಥಿತರಿದ್ದರು.   

ಶಿವಮೊಗ್ಗ: ಜಿಲ್ಲೆಯ ಜನರಿಗೆ ಕುಡಿಯುವ ನೀರು ಪೂರೈಕೆಗೆ ತೊಂದರೆಯಾಗದಂತೆ ಅಗತ್ಯ ಕ್ರಮಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದು, ಅಧಿಕಾರಿಗಳು ಹಾಗೂ ಚುನಾಯಿತ ಪ್ರತಿನಿಧಿಗಳು ಕುಡಿಯುವ ನೀರು ಪೂರೈಕೆಗೆ ಕ್ರಿಯಾ ಯೋಜನೆ ರೂಪಿಸಬೇಕು ಎಂದು ವಿಧಾನಸಭಾಧ್ಯಕ್ಷ ಕಾಗೋಡು ತಿಮ್ಮಪ್ಪ ತಿಳಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ಕುಡಿಯುವ ನೀರು ಪೂರೈಕೆ ಸೇರಿದಂತೆ ವಿವಿಧ ಮೂಲ ಸೌಕರ್ಯಗಳ ಕುರಿತ ಹಮ್ಮಿಕೊಂಡಿದ್ದ ಸಭೆಯಲ್ಲಿ ಅವರು ಮಾತನಾಡಿದರು. ಕುಡಿಯುವ ನೀರು ಪೂರೈಕೆಗೆ ಶಿವಮೊಗ್ಗ ಜಿಲ್ಲಾ ಪಂಚಾಯ್ತಿಗೆ ಸರ್ಕಾರ ₨3 ಕೋಟಿ ಅನುದಾನ ಬಿಡುಗಡೆ ಮಾಡಿದೆ. ಅನುದಾನವನ್ನು ಪರಿಣಾಮಕಾರಿ ಯಾಗಿ ಬಳಸಿಕೊಂಡು, ಸಮಸ್ಯೆ ಪರಿಹಾರಕ್ಕೆ ಮುಂದಾಗಬೇಕು ಎಂದು ಸೂಚಿಸಿದರು.

ಸಾಗರ ತಾಲ್ಲೂಕು ಸೇರಿದಂತೆ ಮಲೆನಾಡು ಭಾಗದಲ್ಲಿ ಕುಡಿಯುವ ನೀರು ಸಮಸ್ಯೆ ಸೃಷ್ಟಿಯಾಗಿದೆ. ಬೋರ್ ವೆಲ್,  ಬತ್ತಿ ಹೋಗಿದ್ದು, ಸಮಸ್ಯೆಯ ಶಾಶ್ವತ ಪರಿಹಾರಕ್ಕೆ ಕ್ರಿಯಾ ಯೋಜನೆ ರೂಪಿಸಬೇಕಿದೆ. ಈ ನಿಟ್ಟಿನಲ್ಲಿ ಜಿಲ್ಲಾ ಪಂಚಾಯ್ತಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಮುಂದಾಗಬೇಕು ಎಂದರು. 

ಮುಖ್ಯಮಂತ್ರಿ ಸಿದ್ದರಾಮಯ್ಯ, ಆಡಳಿತದಲ್ಲಿ ಪಾರದರ್ಶಕತೆ ತರುವುದಾಗಿ ಹೇಳುತ್ತಾರೆ. ಆದರೆ, ಇಂದಿನ ದಿನಗಳಲ್ಲಿ ಪಾರದರ್ಶಕವಾದ ಆಡಳಿತ ಇಲ್ಲವಾಗಿದ್ದು, ಅನುಷ್ಠಾನ ಮಾಡುವುದು ಕಷ್ಟ–ಸಾಧ್ಯವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಶಾಸಕರು ವಿದೇಶ ಪ್ರವಾಸಕ್ಕೆ ತೆರಳುವುದು ಈ ಹಿಂದಿನಿಂದಲೂ ನಡೆದುಕೊಂಡು ಬಂದಿದೆ.

ತಾವು ವಿಧಾನಸಭಾಧ್ಯಕ್ಷರಾದ ನಂತರ ಶಾಸಕರ ಎರಡು ತಂಡಕ್ಕೆ ವಿದೇಶ ಪ್ರವಾಸಕ್ಕೆ ಕಳುಹಿಸಿಕೊಡಲಾಗಿದೆ. ಇಂದು, ಶಾಸಕರ ವಿದೇಶ ಪ್ರವಾಸಕ್ಕೆ ಟೀಕೆ–ಟಿಪ್ಪಣಿಗಳು ಕೇಳಿಬರುತ್ತಿದ್ದು, ಈ ಹಿನ್ನೆಲೆಯಲ್ಲಿ ಶಾಸಕರ ವಿದೇಶಿ ಪ್ರವಾಸ ಕೈಗೊಳ್ಳುವ ಕುರಿತಂತೆ ಮಾರ್ಗದರ್ಶಿ ಸೂತ್ರ ಸಿದ್ದಪಡಿಸುವುದಕ್ಕೆ ಸಮಿತಿ ಯೊಂದನ್ನು ರಚಿಸಲಾಗಿದೆ ಎಂದು ಮಾಹಿತಿ ನೀಡಿದರು.

ಉದ್ಯೋಗ ಖಾತ್ರಿ ಯೋಜನೆ (ಎನ್ಆರ್ಇಜಿ)ಯು ಜನರಿಗೆ ಉದ್ಯೋಗದ ಹಕ್ಕು ನೀಡುವ ಯೋಜನೆಯಾಗಿದೆ. ಆದರೆ, ಈ ಯೋಜನೆ ಅನುಷ್ಠಾನ ಪರಿಣಾಮ ಕಾರಿಯಾಗಿ ಆಗುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ ಅವರು, ಜಿಲ್ಲೆಗೆ ಎನ್ಆರ್ಇಜಿ ಯೋಜನೆಯ ಅಡಿ ಪ್ರಸ್ತುತ ಸಾಲಿನಲ್ಲಿ ₨175ಕೋಟಿ ರೂ. ಅನುದಾನ ಮಂಜೂರಾಗಿದೆ.

ಆದರೆ, ಕೇವಲ ₨60ಕೋಟಿ ಮಾತ್ರ ಬಳಕೆ ಯಾಗಿದೆ. ಇದಕ್ಕೆ ಆಯಾ ಗ್ರಾಮ ಪಂಚಾಯ್ತಿ ಅಧ್ಯಕ್ಷರು ಹಾಗೂ ಪಿಡಿಒಗಳ ನಿರ್ಲಕ್ಷ್ಯತನವೇ ಕಾರಣ ಎಂದು ವಿಷಾದ ವ್ಯಕ್ತಪಡಿಸಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ವಿಪುಲ್ ಬನ್ಸಲ್, ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್.ಸಸಿಕಾಂತ್ ಸೆಂಥಿಲ್, ಹೆಚ್ಚುವರಿ ಜಿಲ್ಲಾಧಿಕಾರಿ ನಾಗರಾಜ್ ಉಪಸ್ಥಿತರಿದ್ದರು.

ನೂತನ ವಿವಿಗೆ ಜಾಗ

ನೂತನ ಕೃಷಿ ವಿಶ್ವವಿದ್ಯಾಲಯಕ್ಕೆ ಸಾಗರ ತಾಲ್ಲೂಕಿನ ಆನಂದಪುರಂ ಬಳಿಯ ಮಾನಕ್ಕಿ -ಹಾಗೂ ಇರುವಕ್ಕಿ ಗ್ರಾಮದ ಸುತ್ತಮುತ್ತ ಜಾಗ ಗುರುತಿಸಲಾಗಿದೆ ಎಂದು ವಿಧಾನಸಭಾಧ್ಯಕ್ಷ  ಕಾಗೋಡು ತಿಮ್ಮಪ್ಪ ತಿಳಿಸಿದರು.

ADVERTISEMENT

ಕೃಷಿ ವಿವಿಗೆ 1,000 ಎಕರೆ ಜಾಗದ ಅವಶ್ಯಕತೆಯಿದ್ದು, ಆನಂದಪುರಂ ಬಳಿಯ ಮಾನಕ್ಕಿ –ಇರುವಕ್ಕಿ ಸುತ್ತಮುತ್ತಲು ಸುಮಾರು 600 ಎಕರೆ ಭೂಮಿ ಲಭ್ಯವಿದೆ. 

ಉಳಿದ ಭೂಮಿಯ ಲಭ್ಯತೆಯ ಕುರಿತಂತೆ ಮುಂದಿನ ದಿನಗಳಲ್ಲಿ ಅಧಿಕಾರಿಗಳು ಪರಿಶೀಲಿಸಲಿದ್ದಾರೆ ಎಂದರು. ಕೃಷಿ ವಿ.ವಿ.ಗೆ ಗುರುತಿಸಲಾಗಿರುವ ಸ್ಥಳದಲ್ಲಿಯೇ ಸಣ್ಣ ಪ್ರಮಾಣದ ಹಳ್ಳವೊಂದಿದ್ದು, ಇದಕ್ಕೆ ಬ್ಯಾರೇಜ್ ನಿರ್ಮಿಸಿ, ವಿ.ವಿ. ಚಟುವಟಿಕೆಗಳಿಗೆ ನೀರು ಪೂರೈಕೆ ಮಾಡುವ ಯೋಜನೆ ರೂಪಿಸಲಾಗುವುದು ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.