ADVERTISEMENT

ಕೊಡಚಾದ್ರಿ ಗ್ರಾಮೀಣಾಭಿವೃದ್ಧಿ ಟ್ರಸ್ಟ್ ಕಾರ್ಯ ಶ್ಲಾಘನೀಯ

​ಪ್ರಜಾವಾಣಿ ವಾರ್ತೆ
Published 13 ಜನವರಿ 2012, 7:35 IST
Last Updated 13 ಜನವರಿ 2012, 7:35 IST

ಶಿವಮೊಗ್ಗ: ಸಾಂಸ್ಕೃತಿಕವಾದ ನಮ್ಮ ಕಲೆ, ಕರಕುಶಲ ಉತ್ಪನ್ನಗಳನ್ನು ಯುವಜನತೆಗೆ ಪರಿಚಯಿಸಿ ಅವರನ್ನು ನಮ್ಮ ಸಂಸ್ಕೃತಿಯ ಕಡೆಗೆ ಸೆಳೆಯುವ ನಿಟ್ಟಿನಲ್ಲಿ ಕಾರ್ಯಕ್ರಮ ಹಮ್ಮಿಕೊಂಡಿರುವ ಕೊಡಚಾದ್ರಿ ಗ್ರಾಮೀಣಾಭಿವೃದ್ಧಿ ಟ್ರಸ್ಟ್‌ನ ಕಾರ್ಯ ಶ್ಲಾಘನೀಯ ಎಂದು ವಿಧಾನ ಪರಿಷತ್ ಸಭಾಪತಿ ಡಿ.ಎಚ್. ಶಂಕರಮೂರ್ತಿ ತಿಳಿಸಿದರು.

ನಗರದ ಕುವೆಂಪು ರಂಗಮಂದಿರ ಸಮೀಪದ ಎನ್‌ಇಎಸ್ ಕ್ರೀಡಾಂಗಣದಲ್ಲಿ ಕೊಡಚಾದ್ರಿ ಗ್ರಾಮೀಣಾಭಿವೃದ್ಧಿ ಟ್ರಸ್ಟ್ ಹಮ್ಮಿಕೊಂಡಿರುವ ಕೊಡಚಾದ್ರಿ ವೈಭವದ ಆರನೇ ದಿನದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕೊಡಚಾದ್ರಿ ವೈಭವ ಎನ್ನುವ ಕಲ್ಪನೆಯೇ ವಿಭಿನ್ನವಾದುದು. ಈ ಮೂಲಕ ಸ್ಥಳೀಯ ಪ್ರತಿಭೆಗಳಿಗೆ ವೇದಿಕೆಯನ್ನು ಕಲ್ಪಿಸಿ ಅವರ ಪ್ರತಿಭೆಯನ್ನು ಅನಾವರಣಗೊಳಿಸುವ ಮೂಲಕ, ಸ್ವಸಹಾಯ ಗುಂಪುಗಳ ಸದಸ್ಯರ ಉತ್ಪನ್ನಗಳಿಗೆ ಸೂಕ್ತ ಮಾರುಕಟ್ಟೆ ಒದಗಿಸುತ್ತಿರುವುದು ಅಭಿನಂದನೀಯ ಎಂದರು.

ಗ್ರಾಮೀಣ ಪ್ರದೇಶದ ಜನರ ಆರ್ಥಿಕ ಸ್ಥಿತಿಯನ್ನು ಸುಧಾರಿಸಬೇಕು ಎಂಬ ಉದ್ದೇಶದಿಂದ ಅನೇಕ ಸಮಾಜ ಸುಧಾರಕರು ಶ್ರಮಿಸಿದ್ದಾರೆ. ಜತೆಗೆ ಸರ್ಕಾರವೂ ಹಲವು ಯೋಜನೆಗಳನ್ನು ರೂಪಿಸಿದೆ. ಆದರೆ, ಮಂಜುನಾಥಗೌಡರು ಕೊಡಚಾದ್ರಿ ಗ್ರಾಮೀಣಾಭಿವೃದ್ಧಿ ಟ್ರಸ್ಟ್ ಮೂಲಕ ಕಾಂತ್ರಿಯನ್ನೇ ಮಾಡಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು.

ಅತಿಥಿಗಳಾಗಿದ್ದ ವಿಧಾನ ಪರಿಷತ್ ಸದಸ್ಯ ಹಾಗೂ ರಾಜ್ಯ ಅಪೆಕ್ಸ್ ಬ್ಯಾಂಕ್ ನಿರ್ದೇಶಕ ಪಟೇಲ್ ಶಿವರಾಂ ಮಾತನಾಡಿ, ಮಹಿಳೆಯರು ಈ ಉತ್ಸವದಲ್ಲಿ ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡಿ ಆರ್ಥಿಕವಾಗಿ, ಸಾಮಾಜಿಕವಾಗಿ ಸಬಲರಾಗಿ ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣವನ್ನು ನೀಡಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ರಾಜ್ಯ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರೂ ಹಾಗೂ ಕೊಡಚಾದ್ರಿ ಗ್ರಾಮೀಣಾಭಿವೃದ್ಧಿ ಟ್ರಸ್ಟ್ ಅಧ್ಯಕ್ಷ ಆರ್.ಎಂ. ಮಂಜುನಾಥಗೌಡ ಸ್ವಾಗತಿಸಿದರು. ಅಪೆಕ್ಸ್ ಬ್ಯಾಂಕ್ ಉಪಾಧ್ಯಕ್ಷ ಚೊಕ್ಕ ಬಸವನಗೌಡ, ನಿರ್ದೇಶಕರಾದ ಬಸವೇಗೌಡ, ತಿಮ್ಮೇಗೌಡ, ಎನ್‌ಇಎಸ್ ಅಧ್ಯಕ್ಷ ಜಿ. ನಂಜುಂಡಪ್ಪ, ಜೆಡಿಎಸ್ ಮುಖಂಡ ಪ.ರಾ. ಶ್ರೀನಿವಾಸ್ ಮತ್ತಿತರರು ಉಪಸ್ಥಿತರಿದ್ದರು.

ಕೊಡಚಾದ್ರಿ ದೇಹದಾರ್ಢ್ಯ ಸ್ಪರ್ಧೆಯ ಫಲಿತಾಂಶ
ದೇಹದಾರ್ಢ್ಯ ಸ್ಪರ್ಧೆಯಲ್ಲಿ ಶಿವಮೊಗ್ಗದ ಷಣ್ಮುಗಂ `ಬೆಸ್ಟ್ ಪೋಸರ್~, ಸಾಗರದ ಡಿ. ನಾಗೇಶ್ `ಮೋಸ್ಟ್ ಮಸ್ಕ್ಯುಲರ್‌ಮ್ಯೋನ್~ ಹಾಗೂ ಸಂದೀಪ್ ಕುಮಾರ್ `ಕೊಡಚಾದ್ರಿ ಶ್ರೀ~ ಪ್ರಶಸ್ತಿ ಪಡೆದವರನ್ನು ಸನ್ಮಾನಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.