ಸೊರಬ: ಕ್ರೀಡೆಯಲ್ಲಿ ಸೋಲು- ಗೆಲುವು ಮುಖ್ಯವಲ್ಲ. ಕ್ರೀಡಾಪಟು ತಾಳ್ಮೆಯಿಂದ ಸ್ಪರ್ಧಾ ಮನೋಭಾವದಿಂದ ಭಾಗವಹಿಸುವುದು ಬಹುಮುಖ್ಯ ಎಂದು ಜಿಲ್ಲಾ ಪಂಚಾಯ್ತಿ ಸದಸ್ಯ ಹುಣವಳ್ಳಿ ಗಂಗಾಧರಪ್ಪ ತಿಳಿಸಿದರು.
ತಾಲ್ಲೂಕಿನ ಅಂದವಳ್ಳಿ ಗ್ರಾಮದಲ್ಲಿ ಮಂಗಳವಾರ ನಡೆದ ಚಂದ್ರಗುತ್ತಿ ವಲಯಮಟ್ಟದ ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡಿದರು.
ಗ್ರಾಮೀಣ ಮಕ್ಕಳು ರಾಷ್ಟ್ರ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡುವ ಮೂಲಕ ದೇಶಕ್ಕೆ ಕೀರ್ತಿ ತರಬೇಕು. ಬಹುಹಿಂದಿನಿಂದಲೂ ಪ್ರಾರಂಭವಾದ ಕ್ರೀಡೆ ನಂತರ ವಿವಿಧ ಆಟಗಳ ಮೂಲಕ ಪರಿವರ್ತನೆಗೊಂಡು ಜನಮನ್ನಣೆ ಗಳಿಸಿರುವುದು ಶ್ಲಾಘನೀಯ ಎಂದರು.
ಧ್ವಜಾರೋಹಣ ನೆರವೇರಿಸಿದ ಜಿಲ್ಲಾ ಪಂಚಾಯ್ತಿ ಸದಸ್ಯ ಗುರುಕುಮಾರ್. ಎಸ್. ಪಾಟೀಲ್ ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿ ನಡೆಯುವ ಕ್ರೀಡೆಗಳು ರಾಜ್ಯ ಮತ್ತು ರಾಷ್ಟ್ರಮಟ್ಟಕ್ಕೆ ಸಮನಾಗಿದೆ. ಮಕ್ಕಳ ಪ್ರತಿಭೆ ಗುರುತಿಸಲು ಸಾರ್ವಜನಿಕರು ಹಾಗೂ ಶಿಕ್ಷಕರ ಪಾತ್ರ ಬಹುಮುಖ್ಯ. ಶೈಕ್ಷಣಿಕ ವ್ಯವಸ್ಥೆ ಇಂದು ಬಹಳಷ್ಟು ಬದಲಾವಣೆಯ ಜತೆ ಪ್ರಗತಿ ಸಾಧಿಸುತ್ತಿದೆ. ಜಿಲ್ಲಾ ಪಂಚಾಯ್ತಿ ವತಿಯಿಂದ ಈ ಭಾಗದ ಶೈಕ್ಷಣಿಕ ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡಿ ಸರ್ವತೋಮುಖ ಅಭಿವೃದ್ಧಿಗೆ ಪ್ರಯತ್ನಿಸಲಾಗಿದೆ ಎಂದರು.
ತಾಲ್ಲೂಕು ಪಂಚಾಯ್ತಿ ಅಧ್ಯಕ್ಷೆ ಮೀನಾಕ್ಷಮ್ಮ, ಸದಸ್ಯರಾದ ಮಧುರಾ ಭಟ್, ವನಜಾಕ್ಷಮ್ಮ, ಎಸ್ಡಿಎಂಸಿ ಅಧ್ಯಕ್ಷ ರಾಮಪ್ಪ, ಗ್ರಾಮ ಪಂಚಾಯ್ತಿ ಅಧ್ಯಕ್ಷ ಅಂಗಡಿ ಚಂದ್ರಪ್ಪ, ಸದಸ್ಯರಾದ ದಯಾನಂದ, ಕುಮಾರ, ಪ್ರೇಮಾ ಗಂಗಾಧರ, ಶ್ರೀನಿವಾಸ, ಕೆರಿಯಮ್ಮ, ಶಿಕ್ಷಣ ಸಂಯೋಜಕ ಬಸವರಾಜಪ್ಪ, ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಮಹಾದೇವಪ್ಪ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.