ಹೊಸನಗರ: ಗ್ರಾಮ ಪಂಚಾಯ್ತಿಗಳ ಸಬಲೀಕರಣ ಹೆಚ್ಚಾಗಬೇಕು ಎಂದು ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಹೇಳಿದರು. ತಾಲ್ಲೂಕಿನ ಜೇನಿ ಗ್ರಾಮ ಪಂಚಾಯ್ತಿ ಕಾರ್ಯಾಲಯದಲ್ಲಿ ರಾಜೀವ್ ಗಾಂಧಿ ಪಂಚಾಯತ್ ಸಶಕ್ತೀಕರಣ ಅಭಿಯಾನದಡಿ ನಿರ್ಮಿಸಿದ ‘ಪ್ರಕೃತಿ ವಿಕೋಪ ನಿಯಂತ್ರಣ’ ಮೊದಲ ಅಂತಸ್ತಿನ ಕಟ್ಟಡವನ್ನು ಸೋಮವಾರ ಉದ್ಘಾಟಿಸಿ ಅವರು ಮಾತನಾಡಿದರು.
ಅಧಿಕಾರ ವಿಕೇಂದ್ರೀಕರಣದ ನಿಟ್ಟಿನಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಗ್ರಾಮ ಪಂಚಾಯ್ತಿಗೆ ಹೆಚ್ಚು ಅಧಿಕಾರ ಹಾಗೂ ಅನುದಾನ ನೀಡುತ್ತಿದೆ ಎಂದು ಅವರು ಹೇಳಿದರು.
ಜಿಲ್ಲಾ ಪಂಚಾಯ್ತಿ ಸದಸ್ಯ ಕಲಗೋಡು ರತ್ನಾಕರ ಮಾತನಾಡಿ, ಅತ್ಯಂತ ಹಿಂದುಳಿದ ಗ್ರಾಮ ಪಂಚಾಯ್ತಿಗೆ ಸಚಿವರ ಪ್ರಯತ್ನದ ಫಲವಾಗಿ ಸುಮಾರು ₹ 15 ಲಕ್ಷ ವೆಚ್ಚದಲ್ಲಿ ಸುಸಜ್ಜಿತ ಕಟ್ಟಡ ನಿರ್ಮಿಸಲಾಗಿದೆ ಎಂದರು.
ಗ್ರಾಮ ಪಂಚಾಯ್ತಿ ಅಧ್ಯಕ್ಷ ಗುಲಾಬಿ ಉಮೇಶ ಸಭೆಯ ಅಧ್ಯಕ್ಷತೆ ವಹಿಸಿದ್ದರು. ತಾಲ್ಲೂಕು ಪಂಚಾಯ್ತಿ ಸದಸ್ಯ ಬಿ.ಜಿ.ಚಂದ್ರಮೌಳಿ, ಏರಗಿ ಉಮೇಶ, ಕಾರ್ಯನಿರ್ವಾಹಕ ಅಧಿಕಾರಿ ಡಾ.ರಾಮಚಂದ್ರಪ್ಪ, ಕೆಡಿಪಿ ನಾಮನಿರ್ದೇಶಿತ ಸದಸ್ಯ ಕಾಡುವಳ್ಳಿ ಸತೀಶ, ಎಪಿಎಂಸಿ ಸದಸ್ಯರಾದ ದುಮ್ಮಾ ಅಶೋಕ, ಕುನ್ನೂರು ಕುಬೇರಪ್ಪ, ಗ್ರಾಮ ಪಂಚಾಯ್ತಿ ಉಪಾಧ್ಯಕ್ಷ ಗಣೇಶ ಹಾಗೂ ಸದಸ್ಯರು ಹಾಜರಿದ್ದರು. ಪಿಡಿಒ ಗಂಗಾಧರ್ ಸ್ವಾಗತಿಸಿ, ವಂದಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.