ADVERTISEMENT

ಜೂನ್ ವೇಳೆಗೆ ಕೇಂದ್ರ ಸರ್ಕಾರ ಪತನ: ಈಶ್ವರಪ್ಪ

​ಪ್ರಜಾವಾಣಿ ವಾರ್ತೆ
Published 6 ಫೆಬ್ರುವರಿ 2012, 10:45 IST
Last Updated 6 ಫೆಬ್ರುವರಿ 2012, 10:45 IST

ಶಿವಮೊಗ್ಗ: ಕೇಂದ್ರ ಸರ್ಕಾರ ಮುಂಬರುವ ಜೂನ್ ವೇಳೆಗೆ ಪತನವಾಗಲಿದ್ದು, ನಂತರ ಲೋಕಸಭಾ ಚುನಾವಣೆ ನಡೆಯುವುದು ಶತಸಿದ್ಧ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ.ಎಸ್. ಈಶ್ವರಪ್ಪ ಹೇಳಿದರು.

ನಗರದ ಬಿಜೆಪಿ ಕಾರ್ಯಾಲಯದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ ಜಿಲ್ಲೆಯ ಚನ್ನಗಿರಿ, ಹೊನ್ನಾಳಿ ತಾಲ್ಲೂಕಿನ ನೈರುತ್ಯ ಪದವೀಧರರ ಕ್ಷೇತ್ರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣಾ ಸಿದ್ಧತಾ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.

ಕೇಂದ್ರ ಸರ್ಕಾರ ಹಲವಾರು ಹಗರಣಗಳ ಸುಳಿಯಲ್ಲಿ ಸಿಲುಕಿದ್ದು, ಯಾವುದೇ ಸಂದರ್ಭ, ಕ್ಷಣದಲ್ಲಿಯಾದರೂ ಪತನ ಹೊಂದಬಹುದು. ಹಾಗಾಗಿ ಕಾರ್ಯಕರ್ತರು ಯಾವುದೇ ಕಾರ್ಯಸೂಚಿಗೆ ಸಿದ್ಧತೆ ಮಾಡಿಕೊಳ್ಳುವಂತೆ ಸೂಚಿಸಿದರು.

ಹಗರಣಗಳ ಸುಳಿಯಲ್ಲಿ ಸಿಲುಕಿರುವ ಚಿದಂಬರಂ ಹಾಗೂ ಶೀಲಾ ದೀಕ್ಷಿತ್ ಅವರ ರಾಜೀನಾಮೆ ಪಡೆಯಲು ಕಾಂಗ್ರೆಸ್‌ನವರ ಬಳಿ ಆಗುತ್ತಿಲ್ಲ. ಅದಕ್ಕೆ ಉತ್ತರ ಹೇಳುವ ಸ್ಥಿತಿಯಲ್ಲಿಯೂ ಅವರು ಇಲ್ಲ ಎಂದು ವ್ಯಂಗ್ಯವಾಡಿದರು.

ರಾಜ್ಯದಲ್ಲಿನ ಬಿಜೆಪಿ ಸರ್ಕಾರದ ಬಗೆಗೆ ಜನರಲ್ಲಿ ಒಳ್ಳೆಯ ಭಾವನೆ ಇದೆ. ಹಾಗಾಗಿ ಇಲ್ಲಿ ಚುನಾವಣೆಯ ನಿರೀಕ್ಷೆ ಇಲ್ಲ. ನಮ್ಮಲ್ಲಿ ಕೆಲ ಗೊಂದಲಗಳಿವೆಯಾದರೂ ಉಳಿದ ಒಂದೂವರೆ ವರ್ಷವನ್ನು ಯಶಸ್ವಿಯಾಗಿ ಪೂರೈಸುತ್ತೇವೆ. ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ವೇಳೆ ಕೈಗೊಂಡ ಅಭಿವೃದ್ಧಿ ಕಾಮಗಾರಿಗಳಿಂದಾಗಿ ಕರ್ನಾಟಕ ಇಂದು ರಾಷ್ಟ್ರದಲ್ಲೆೀ ಅಭಿವೃದ್ಧಿಯಲ್ಲಿ 2ನೇ ಸ್ಥಾನದಲ್ಲಿದೆ ಎಂದರು.

ಜಿಲ್ಲಾ ಬಿಜೆಪಿ ಅಧ್ಯಕ್ಷ ಸಿದ್ದರಾಮಣ್ಣ, ರಾಜ್ಯಸಭಾ ಸದಸ್ಯ ಆಯನೂರು ಮಂಜುನಾಥ, ಸಂಸತ್ ಸದಸ್ಯ ಬಿ.ವೈ. ರಾಘವೇಂದ್ರ, ಶಾಸಕರಾದ ಹರತಾಳು ಹಾಲಪ್ಪ, ಬೇಳೂರು ಗೋಪಾಲಕೃಷ್ಣ, ತರೀಕೆರೆಯ ಸುರೇಶ್, ಪದವೀಧರ ಕ್ಷೇತ್ರದ ಅಭ್ಯರ್ಥಿ ಡಿ.ಎಚ್. ಶಂಕರಮೂರ್ತಿ, ರಾಜ್ಯ ಬಿಜೆಪಿ ಉಪಾಧ್ಯಕ್ಷ ಭಾನುಪ್ರಕಾಶ್, ಚಿಕ್ಕಮಗಳೂರು ಜಿಲ್ಲಾ ಬಿಜೆಪಿ ಅಧ್ಯಕ್ಷ ಪ್ರಾಣೇಶ್, ನಗರಸಭಾ ಅಧ್ಯಕ್ಷ ಚನ್ನಬಸಪ್ಪ,  ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಗಣೇಶ್ ಕಾರ್ಣಿಕ್ ಮತ್ತಿತರರು ಉಪಸ್ಥಿತರಿದ್ದರು. 
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.