ಶಿಕಾರಿಪುರ: ತಾಲ್ಲೂಕಿನಲ್ಲಿ ಶಂಕಿತ ಡೆಂಗೆ ಪ್ರಕರಣಗಳು ಪತ್ತೆಯಾಗಿರುವುದರಿಂದ ಅಧಿಕಾರಿಗಳು ಜಾಗೃತೆಯಿಂದ ಕಾರ್ಯ ನಿರ್ವಹಿಸಬೇಕು ಎಂದು ಸಾಗರ ಉಪ ವಿಭಾಗಧಿಕಾರಿ ಡಾ.ಉದಯ್ಕುಮಾರ್ ಶೆಟ್ಟಿ ಹೇಳಿದರು.
ಪಟ್ಟಣದಲ್ಲಿ ಶಂಕಿತ ಡೆಂಗೆ ಸಾವು ಸಂಭವಿಸಿದ ಹಿನ್ನೆಲೆಯಲ್ಲಿ ತಹಶೀಲ್ದಾರ್ ಕಚೇರಿಯಲ್ಲಿ ಶುಕ್ರವಾರ ಡೆಂಗೆ ಜ್ವರ ಮುಂಜಾಗೃತಾಕ್ರಮಗಳ ಬಗ್ಗೆ ಚರ್ಚಿಸಲು ನಡೆದ ತಾಲ್ಲೂಕುಮಟ್ಟದ ಅಧಿಕಾರಿಗಳ ತುರ್ತು ಸಭೆಯಲ್ಲಿ ಅವರು ಮಾತನಾಡಿದರು.
ತಾಲ್ಲೂಕಿನಲ್ಲಿ ಡೆಂಗೆ ಜ್ವರ ತಡೆಗಟ್ಟುವ ನಿಟ್ಟಿನಲ್ಲಿ ಪುರಸಭೆ, ಪಟ್ಟಣ ಪಂಚಾಯ್ತಿ, ಗ್ರಾಮ ಪಂಚಾಯ್ತಿ ಅಧಿಕಾರಿಗಳು ಹೆಚ್ಚಿನ ಕಾರ್ಯ ನಿರ್ವಹಿಸಬೇಕಾಗಿದೆ. ಅಂಗನವಾಡಿ ಮಕ್ಕಳ ಸುರಕ್ಷತೆಗಾಗಿ ಪ್ರತಿ ಅಂಗನವಾಡಿ ಕೇಂದ್ರಗಳಿಗೆ ಸಂಜೆ ಸಮಯದಲ್ಲಿ ಫಾಗಿಂಗ್ ಮಾಡಬೇಕು ಹಾಗೂ ಸೊಳ್ಳೆ ಬತ್ತಿ, ಲಿಕ್ವಿಡ್ಗಳನ್ನು ಉಚಿತವಾಗಿ ವಿತರಿಸಬೇಕು. ತಾಲ್ಲೂಕಿನ ಎಲ್ಲಾ ಶಾಲೆಗಳಲ್ಲಿ ಹತ್ತು ನಿಮಿಷ ಕಾಲ ಮಕ್ಕಳಿಗೆ ಡೆಂಗೆ ಜ್ವರ ತಡೆಗಟ್ಟಲು ಅನುಸರಿಸಬೇಕಾದ ಕ್ರಮಗಳ ಬಗ್ಗೆ ಶಿಕ್ಷಕರು ಮಾಹಿತಿ ನೀಡುವಂತೆ ಆದೇಶ ಹೊರಡಿಸಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗೆ ಸೂಚನೆ ನೀಡಿದರು.
ಅಂಗನವಾಡಿ, ಆಶಾ ಕಾರ್ಯಕರ್ತೆಯರ ಸಹಾಯದಿಂದ ತಾಲ್ಲೂಕಿನ ಪ್ರತಿ ಮನೆಗಳಿಗೆ ಭೇಟಿ ನೀಡಿ ನೀರನ್ನು ಶೇಖರಿಸದಂತೆ ಹಾಗೂ ಸ್ವಚ್ಛತೆ ಬಗ್ಗೆ ಗಮನ ಹರಿಸುವಂತೆ ಜಾಗೃತಿ ಮೂಡಿಸಬೇಕು.
ಮಣಿಪಾಲ ಆಸ್ಪತ್ರೆಯಲ್ಲಿ ಮೃತಪಟ್ಟ ಪಟ್ಟಣದ ಮಗು ಧರಣಿಗೆ ಏಲಿಸ್ಸಾ ಟೆಸ್ಟ್ ಮಾಡದ ಕಾರಣ ಮಗವಿನ ಸಾವು ಡೆಂಗೆ ಶಂಕಿತ ಎಂದು ಹೇಳಬಹುದೇ ಹೊರತು, ಡೆಂಗೆ ಎಂದು ಖಚಿತವಾಗಿ ಹೇಳಲಾಗುವುದಿಲ್ಲ' ಎಂದು ಜಿಲ್ಲಾ ಸರ್ಜನ್ ಡಾ.ತಿಪ್ಪೇಶ್ ಸ್ಪಷ್ಟನೆ ನೀಡಿದರು.
ತಾಲ್ಲೂಕು ವೈದ್ಯಾಧಿಕಾರಿ ಡಾ.ನಾಗರಾಜ್ನಾಯ್ಕ ಮಾತನಾಡಿ, ತಾಲ್ಲೂಕಿನಲ್ಲಿ ಡೆಂಗೆಗೆ ಯಾವುದೇ ಸಾವು ಸಂಭವಿಸಿಲ್ಲ ಎಂದರು.
ತಹಶೀಲ್ದಾರ್ ಪ್ರಕಾಶ್ ಗಣಚಾರಿ, ಕ್ಷೇತ್ರ ಶಿಕ್ಷಣಾಧಿಕಾರಿ ಎಲ್.ಸಿದ್ದಲಿಂಗಪ್ಪ, ಸಿಡಿಪಿಒ ಲಿಂಗಾನಾಯ್ಕ, ಡಾ.ಹರ್ಷವರ್ಧನ, ಉಪ ತಹಶೀಲ್ದಾರ್ ನಾಗರಾಜ್, ಆನಂದ ಗರಡಿ, ರಾಜೀವ್, ಆರ್ಐ ಮಂಜುನಾಥ್, ಪುರಸಭೆ ಆರೋಗ್ಯ ನಿರೀಕ್ಷರಾದ ನವಾಜ್, ಹಿರೇಮಠ್ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.