ADVERTISEMENT

ತಾರತಮ್ಯದ ದಾಳಿ; ಆಯನೂರು ಆರೋಪ

​ಪ್ರಜಾವಾಣಿ ವಾರ್ತೆ
Published 20 ಜುಲೈ 2013, 10:31 IST
Last Updated 20 ಜುಲೈ 2013, 10:31 IST

ಶಿವಮೊಗ್ಗ: ಕೇಂದ್ರ ಸರ್ಕಾರ, ಹಿಂದೂ ಮಠ, ಶಿಕ್ಷಣ ಸಂಸ್ಥೆಗಳ ಮೇಲೆ ಆದಾಯ ತೆರಿಗೆ ಅಧಿಕಾರಿಗಳಿಂದ ದಾಳಿ ನಡೆಸುವ ಮೂಲಕ ತಾರತಮ್ಯ ನೀತಿ ಅನುಸರಿಸುತ್ತಿದೆ ಎಂದು ಬಿಜೆಪಿ ರಾಜ್ಯ ವಕ್ತಾರ ಹಾಗೂ ರಾಜ್ಯಸಭಾ ಸದಸ್ಯ ಆಯನೂರು ಮಂಜುನಾಥ ಆರೋಪಿಸಿದರು.

ಆದಿಚುಂಚನಗರಿ ಮಠದ ಮೇಲೆ ನಡೆದ ದಾಳಿ ಖಂಡನೀಯ. ತಕ್ಷಣ ಇಂತಹ ದಾಳಿಯನ್ನು ನಿಲ್ಲಿಸಬೇಕು ಎಂದು ಅವರು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು. ಹಿಂದಿನಿಂದಲೂ ಕೇಂದ್ರ ಸರ್ಕಾರ ಅಲ್ಪಸಂಖ್ಯಾತರನ್ನು ಮತಕ್ಕಾಗಿ ಓಲೈಸುವ ಕೆಲಸ ಮಾಡುತ್ತಿದೆ. ಎಂದಿಗೂ ಅಲ್ಪಸಂಖ್ಯಾತರ ಸಂಸ್ಥೆಗಳ ಮೇಲೆ ಆದಾಯ ತೆರಿಗೆ ದಾಳಿ ನಡೆಸಿಲ್ಲ.

ಎಲ್ಲಾ ಧಾರ್ಮಿಕ ಸಂಸ್ಥೆಗಳು, ಕೇಂದ್ರಗಳನ್ನು ಸರ್ಕಾರ ಸಮಾನವಾಗಿ ನೋಡಬೇಕು. ದಾಳಿ ನಡೆಸುವುದಾದರೆ ಚರ್ಚ್ ಹಾಗೂ ಮಸೀದಿಗಳ ಮೇಲೂ ನಡೆಸಲಿ ಎಂದು ಅವರು ಸವಾಲು ಹಾಕಿದರು. ಕೇಂದ್ರ ಸಚಿವ ರೆಹಮಾನ್‌ಖಾನ್ ಅವರು ಜೈಲಿನಲ್ಲಿರುವ ನಿರಪರಾಧಿ ಮುಸಲ್ಮಾನರನ್ನು ರಕ್ಷಿಸಲು ವಿಶೇಷ ಕಾರ್ಯಪಡೆ ರಚಿಸುವ ಬಗ್ಗೆ ಹೇಳಿಕೆ ನೀಡಿದ್ದಾರೆ. ಇತರೆ ಧರ್ಮ, ಜಾತಿಗೆ ಸೇರಿದ ನಿರಪರಾಧಿಗಳನ್ನು ಯಾರು ರಕ್ಷಿಸಬೇಕು ಎಂದು ಅವರು ಪ್ರಶ್ನಿಸಿದರು.

ಹಿಂದೂ ಮಠ ಹಾಗೂ ಶಿಕ್ಷಣ ಸಂಸ್ಥೆಗಳ ಮೇಲೆ ದಾಳಿ ನಿಲ್ಲಿಸದಿದ್ದಲ್ಲಿ ಬಿಜೆಪಿಯಿಂದ ಸಂಘಟಿತ ಹೋರಾಟ ನಡೆಸುವುದಾಗಿ ಅವರು ಎಚ್ಚರಿಕೆ ನೀಡಿದರು. ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾ ಘಟಕದ ಪದಾಧಿಕಾರಿಗಳಾದ ಎಸ್.ದತ್ತಾತ್ರಿ, ಎಸ್.ಎನ್.ಚನ್ನಬಸಪ್ಪ, ಎನ್.ಜೆ.ರಾಜಶೇಖರ್, ಎಚ್.ಸಿ.ಬಸವರಾಜಪ್ಪ, ಎಂ.ಶಂಕರ್, ಶ್ರೀನಾಥ ನಗರಗದ್ದೆ, ಮಧುಸೂದನ್ ಮತ್ತಿತರರು ಉಪಸ್ಥಿತರಿದ್ದರು.

ಐಟಿ ದಾಳಿಗೆ ಖಂಡನೆ
ಭದ್ರಾವತಿ:
ಧಾರ್ಮಿಕ ಪರಂಪರೆ ಹೊಂದಿರುವ ವಿಜಯನಗರ ಆದಿಚುಂಚನಗಿರಿ ಮಠದ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ನಡೆಸಿದ ದಾಳಿ ಖಂಡನೀಯ ಎಂದು ಒಕ್ಕಲಿಗರ ಸಂಘ ಹೇಳಿದೆ.

ಜಾಗತಿಕ ಮಟ್ಟದಲ್ಲಿ ಶಿಕ್ಷಣ ಕ್ಷೇತ್ರಕ್ಕೆ ತನ್ನದೇ ವಿಶಿಷ್ಟ ಕೊಡುಗೆ ನೀಡಿರುವ ಮಠವು ಜಾತ್ಯತೀತವಾಗಿ ಸಾರ್ವಜನಿಕ ಸೇವೆ ಮಾಡುತ್ತಿದ್ದು, ಇಂತಹ ಧಾರ್ಮಿಕ ಕ್ಷೇತ್ರದ ಮೇಲೆ ನಡೆದಿರುವ ದಾಳಿ ರಾಜಕೀಯ ಪ್ರೇರಿತ ಎಂದು ಪದಾಧಿಕಾರಿಗಳು ಕಿಡಿಕಾರಿದ್ದಾರೆ.

ರಾಜ್ಯದ ಅಧಿಕಾರ ಹಿಡಿದಿರುವ ಕಾಂಗ್ರೆಸ್, ಒಕ್ಕಲಿಗ ಸಮುದಾಯದ ರಾಜಕಾರಣಿಗಳು ಹಾಗೂ ಅಧಿಕಾರಿಗಳ ವಿರುದ್ಧ ಸೇಡಿನ ರಾಜಕಾರಣ ಮಾಡುತ್ತಿದ್ದು. ಇದನ್ನು ನಿಯಂತ್ರಿಸದಿದ್ದಲ್ಲಿ ಸಮುದಾಯ ಅನಿವಾರ್ಯವಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಪಕ್ಷಾತೀತವಾಗಿ ಬೃಹತ್ ಪ್ರತಿಭಟನೆ ನಡೆಸಲಿದೆ ಎಂದು ಸಂಘದ ಅಧ್ಯಕ್ಷ ಎಸ್.ಸಿ.ಜಯರಾಮ್ ಈ ಸಂದರ್ಭದಲ್ಲಿ ಎಚ್ಚರಿಕೆ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT