ಶಿವಮೊಗ್ಗ: ಶಿವಮೊಗ್ಗ ತಾಲ್ಲೂಕು 3ನೆಯ ಕನ್ನಡ ಸಾಹಿತ್ಯ ಸಮ್ಮೇಳನ ಜುಲೈ 2ರಂದು ಹೊಳಲೂರಿನ ಕಲ್ಯಾಣ ಮಂದಿರದಲ್ಲಿ ಏರ್ಪಡಿಸಿದ್ದು, ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿರುವ ದಾವಣಗೆರೆಯಲ್ಲಿ ವಾಸವಾಗಿರುವ ಡಾ.ಎಂ.ಜಿ. ಈಶ್ವರಪ್ಪ ಅವರನ್ನು ಸಮ್ಮೇಳನದ ಸ್ವಾಗತ ಸಮಿತಿಯ ಪರವಾಗಿ ಭಾನುವಾರ ಅವರ ನಿವಾಸದಲ್ಲಿ ಅವರನ್ನು ಅಧಿಕೃತವಾಗಿ ಸ್ವಾಗತಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, `ನನ್ನ ಹುಟ್ಟೂರು ಮತ್ತು ಪ್ರಾಥಮಿಕ, ಪ್ರೌಢಶಾಲೆಯನ್ನು ಕಲಿತ ನಮ್ಮೂರಲ್ಲಿ ನಡೆಯುವ ಸಮ್ಮೇಳನದಲ್ಲಿ ಭಾಗವಹಿಸುವುದೇ ನನ್ನ ಭಾಗ್ಯ~ ಎಂದು ಸಂತೋಷ ವ್ಯಕ್ತಪಡಿಸಿದರು.
ಸ್ವಾಗತ ಸಮಿತಿ ಕಾರ್ಯಾಧ್ಯಕ್ಷ ಎಂ.ಎಸ್. ಮಹೇಂದ್ರ ನಾಥ, ಜಿಲ್ಲಾ ಕಸಾಪ ಅಧ್ಯಕ್ಷ ಡಿ. ಮಂಜುನಾಥ, ತಾಲ್ಲೂಕು ಪಂಚಾಯ್ತಿ ಸದಸ್ಯ ಎಚ್.ಕೆ. ದೇವರಾಜ್, ಕಸಾಪ ತಾಲ್ಲೂಕು ಅಧ್ಯಕ್ಷ ಆರ್. ರತ್ನಯ್ಯ, ಜಿಲ್ಲಾ ಕಾರ್ಯದರ್ಶಿ ಎಂ. ನವೀನ್ಕುಮಾರ್, ಜಿಲ್ಲಾ ಕೋಶಾಧ್ಯಕ್ಷ ಮಧುಸೂದನ ಐತಾಳ್, ಪ್ರೊ.ಓಂಕಾರಪ್ಪ, ದಾವಣಗೆರೆ ಜಿಲ್ಲಾ ಕಸಾಪ ಅಧ್ಯಕ್ಷ ಕೆ. ಸದಾಶಿವಪ್ಪ ಶ್ಯಾಗಲೆ, ತಾಲ್ಲೂಕು ಅಧ್ಯಕ್ಷಬಿ. ವಾಸುದೇವಪ್ಪ ಮತ್ತಿತರರು ಉಪಸ್ಥಿತರಿದ್ದರು.
ಜಿಲ್ಲೆಯಲ್ಲಿ ನಡೆಯುತ್ತಿರುವ ಎಲ್ಲಾ ತಾಲ್ಲೂಕುಗಳ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸುವ ಆಯಾಯ ತಾಲ್ಲೂಕುಗಳ ಪ್ರಾಥಮಿಕ, ಪ್ರೌಢಶಾಲೆಗಳ ಮತ್ತು ಪದವಿಪೂರ್ವ ಕಾಲೇಜುಗಳ ಶಿಕ್ಷಕರು, ಉಪನ್ಯಾಸಕರು, ಸಿಬ್ಬಂದಿಗೆ ಆ ದಿನದ ಕರ್ತವ್ಯಕ್ಕೆ ಗೈರುಹಾಜರಿಯನ್ನು ಅನ್ಯಕಾರ್ಯ ನಿಮಿತ್ತ ಎಂದು ಪರಿಗಣಿಸಿ, ಸೂಕ್ತ ಅದೇಶ ಮಾಡಲು ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳಿಗೆ ಮನವಿ ಮಾಡಲಾಗಿದೆ. ಉಳಿದ ಇಲಾಖೆಯವರಿಗೆ ಸರ್ಕಾರದ ಕಾಯಂ ಆದೇಶ ಅನ್ವಯವಾಗಲಿದೆ ಎಂದು ಜಿಲ್ಲಾ ಕಸಾಪ ಅಧ್ಯಕ್ಷ ಡಿ. ಮಂಜುನಾಥ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.