ಶಿಕಾರಿಪುರ: ‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಜೈಲಿಗೆ ಕಳುಹಿಸುತ್ತೇನೆ ಎಂದು ಹೇಳಿದ ಸಂಸದ ಯಡಿಯೂರಪ್ಪಗೆ ತಮ್ಮ ಕ್ಷೇತ್ರದ ಪುರಸಭೆ ನಿವಾಸಿಗಳಿಗೆ ಹಕ್ಕು ಪತ್ರ ಕೊಡಿಸಲು ಸಾಧ್ಯವಾಗಿಲ್ಲ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕಾಗೋಡು ತಿಮ್ಮಪ್ಪ ಟೀಕಿಸಿದರು. ಪಟ್ಟಣದ ಕುಂಬಾರಗುಂಡಿ ಬಡಾವಣೆಯಲ್ಲಿ ಸೋಮವಾರ ತಾಲ್ಲೂಕು ಕಾಂಗ್ರೆಸ್ ಆಯೋಜಿಸಿದ್ದ ಮನೆಮನೆಗೆ ಕಾಂಗ್ರೆಸ್ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
‘ಕೆಲವರಿಗೆ ಮಾತಿನಲ್ಲಿ ಮಾತ್ರ ಬಡವರ ಬಗ್ಗೆ ಕಾಳಜಿ ಇರುತ್ತದೆ,ಆದರೆ ಹೃದಯದಲ್ಲಿ ಬಡವರ ಬಗ್ಗೆ ಕಾಳಜಿ ಇರುವುದಿಲ್ಲ. ಆದರೆ ತೆರೆದ ಮನಸ್ಸಿನಿಂದ ರಾಜ್ಯದ ಜನರ ಅಭಿವೃದ್ಧಿ ಪೂರಕ ಯೋಜನೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ್ದಾರೆ. ಜಾತಿ, ಭಾಷೆ ಹಾಗೂ ಧರ್ಮ ಭೇದವಿಲ್ಲದೇ ಸಾಮಾಜಿಕ ನ್ಯಾಯದ ತತ್ವದ ಆಧಾರದ ಮೇಲೆ ಸಿದ್ದರಾಮಯ್ಯ ಆಡಳಿತ ನಡೆಸುತ್ತಿದ್ದಾರೆ’ ಎಂದು ಶ್ಲಾಘಿಸಿದರು.
ದೇಶದ ಯಾವುದೇ ರಾಜ್ಯದಲ್ಲಿ ಆಡಳಿತ ನಡೆಸುವ ಸರ್ಕಾರಗಳು ಉಚಿತ ಅಕ್ಕಿ ನೀಡಿಲ್ಲ. ಉಚಿತವಾಗಿ ತುತ್ತು ಅನ್ನ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಜನ ಮರೆಯಬಾರದು. ಗೌರವ ನೀಡಬೇಕು, ಆಶೀರ್ವಾದ ಮಾಡಬೇಕು ಎಂದು ಮನವಿ ಮಾಡಿದರು.
ಕಾರ್ಯಕರ್ತರು ಮನೆ ಮನೆಗೆ ಕಾಂಗ್ರೆಸ್ ಕಾರ್ಯಕ್ರಮಗಳ ಮೂಲಕ ಸಿದ್ದರಾಮಯ್ಯ ನೀಡಿದ ಯೋಜನೆಗಳ ಬಗ್ಗೆ ಜನರಿಗೆ ತಿಳಿಸುವ ಮೂಲಕ ಕಾಂಗ್ರೆಸ್ ಸಂಘಟಿಸಬೇಕು. ರಾಜ್ಯದ ಜನರಿಗೆ ಸಾಮಾಜಿಕ ನ್ಯಾಯ ಸಿಗಲು, ಬಡತನ ದೂರವಾಗಲು ಕಾಂಗ್ರೆಸ್ ಪುನಃ ಅಧಿಕಾರಕ್ಕೆ ಬರಬೇಕು,ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಮುಂದುವರಿ ಯಬೇಕು ಎಂದರು.
ವಿಧಾನ ಪರಿಷತ್ ಸದಸ್ಯ ಆರ್. ಪ್ರಸನ್ನಕುಮಾರ್ ಮಾತನಾಡಿ, ’ಮನೆಗೆ ಮನೆಗೆ ಕಾಂಗ್ರೆಸ್ ಮೂಲಕ ರಾಜ್ಯ ಸರ್ಕಾರದ ಸಾಧನೆ ಹಾಗೂ ಕೇಂದ್ರ ಬಿಜೆಪಿ ಸರ್ಕಾರದ ವೈಫಲ್ಯಗಳನ್ನು ಕಾರ್ಯಕರ್ತರು ಜನರಿಗೆ ತಿಳಿಸುವ ಮೂಲಕ ಕಾಂಗ್ರೆಸ್ ಸಧೃಡಗೊಳಿಸಬೇಕು’ ಎಂದು ಹೇಳಿದರು.
‘ಕಾಡಾ’ ಮಾಜಿ ಅಧ್ಯಕ್ಷ ನಗರದ ಮಹಾದೇವಪ್ಪ, ಕಾಂಗ್ರೆಸ್ ಜಿಲ್ಲಾ ಘಟಕ ಅಧ್ಯಕ್ಷ ತೀ.ನಾ. ಶ್ರೀನಿವಾಸ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗೋಣಿ ಮಾಲತೇಶ್, ಪುರಸಭೆ ಸದಸ್ಯರಾದ ವೀಣಾ ವಿಜಯ್ ಯಮಾರ್, ಪಾರಿವಾಳ ಶಿವರಾಮ್, ಮಧುಸೂದನ್, ಮುಖಂಡರಾದ ಹಬೀಬುಲ್ಲಾ, ಭಂಡಾರಿ ಮಾಲತೇಶ್, ಹಳ್ಳೂರು ಪರಮೇಶ್ವರಪ್ಪ, ಜಯಪ್ರಕಾಶ್, ಸ.ನ. ಮಂಜಪ್ಪ, ಉಮೇಶ್ ಮಾರವಳ್ಳಿ, ದರ್ಶನ್, ಸುರೇಶ್ ಧಾರಾವಾಡ, ರಾಜಪ್ಪ, ಜಿದ್ದು ಮಂಜು, ಪುನೀತ್ ಉಪಸ್ಥಿತರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.