ಶಿವಮೊಗ್ಗ: ವಿಧಾನಸಭಾ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆಗೆ ಜಿಲ್ಲಾಡಳಿತ ಸಕಲ ರೀತಿಯಲ್ಲಿ ಸಜ್ಜಾಗಿದೆ. ಯಾವುದೇ ಗೊಂದಲಗಳಿಗೆ ಅವಕಾಶ ನೀಡದಿರಲು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ.
ಮತ ಎಣಿಕೆ ಕಾರ್ಯ ನಡೆಯುವ ನಗರದ ಸಹ್ಯಾದ್ರಿ ಕಲಾ ಕಾಲೇಜಿಗೆ ಭದ್ರತೆ ಕಲ್ಪಿಸಲಾಗಿದೆ. ಮಂಗಳವಾರ ಮತ ಎಣಿಕೆ ನಡೆಯಲಿದೆ. ಈಗಾಗಲೇ ಜಿಲ್ಲಾಧಿಕಾರಿ ಮತ್ತು ಹಿರಿಯ ಅಧಿಕಾರಿಗಳು ಸಹ್ಯಾದ್ರಿ ಕಾಲೇಜಿಗೆ ತೆರಳಿ ಪರಿಶೀಲನೆ ನಡೆಸಿದ್ದಾರೆ.
ಜಿಲ್ಲೆಯ ಏಳೂ ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಕಾರ್ಯ ಒಂದೇ ಕಡೆ ನಡೆಯಲಿದ್ದು, ಕಾಲೇಜಿನ ನೆಲ ಮಹಡಿ ಮತ್ತು ಮೊದಲ ಮಹಡಿಯನ್ನು ಮತ ಎಣಿಕೆ ಕಾರ್ಯಕ್ಕಾಗಿ ಸಜ್ಜುಗೊಳಿಸಲಾಗಿದೆ. ಒಂದು ವಿಧಾನಸಭಾ ಕ್ಷೇತ್ರಕ್ಕೆ 14 ಟೇಬಲ್ಗಳನ್ನು ಹಾಕಲು ಉದ್ದೇಶಿಸಲಾಗಿದೆ. ಪ್ರತಿ ರೌಂಡ್ಗೆ 2 ಟೇಬಲ್ ಬಳಸಲಾಗುವುದು. ಮತ ಎಣಿಕೆಗಾಗಿ 196 ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.
‘ಒಂದು ವಿಧಾನಸಭಾ ಕ್ಷೇತ್ರದ ಮತ ಎಣಿಕೆಗೆ 28 ಮಂದಿ ಕಾರ್ಯನಿರ್ವಹಿಸಲಿದ್ದು, 98 ಮಂದಿ ಸಹಾಯಕ ಸಿಬ್ಬಂದಿ ಇವರಿಗೆ ಸಹಕಾರ ನೀಡಲಿದ್ದಾರೆ. ಅಂದು 8ಕ್ಕೆ ಸರಿಯಾಗಿ ಮತ ಎಣಿಕೆ ಆರಂಭವಾಗಲಿದೆ. ಮೊದಲು ಅಂಚೆ ಮತಪತ್ರಗಳನ್ನು ಎಣಿಕೆ ಮಾಡಲಾಗುವುದು. ನಂತರ ಮತಯಂತ್ರಗಳನ್ನು ತೆರೆದು ಮತಗಳ ಎಣಿಕೆ ಮಾಡಲಾಗುವುದು. ಬೆಳಿಗ್ಗೆ 11ರೊಳಗೆ ಎಲ್ಲ ಕ್ಷೇತ್ರಗಳ ಫಲಿತಾಂಶ ದೊರೆಯುವ ಸಾಧ್ಯತೆಗಳಿವೆ’ ಎಂದು ಜಿಲ್ಲಾಧಿಕಾರಿ ಡಾ.ಎಂ.ಲೋಕೇಶ್ ಮಾಹಿತಿ ನೀಡಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.