ADVERTISEMENT

ಮಾಜಿ ಸಿಎಂಗಳಿಗೆ ಮುಖಭಂಗ: ಆಯನೂರು

​ಪ್ರಜಾವಾಣಿ ವಾರ್ತೆ
Published 17 ಜನವರಿ 2011, 10:55 IST
Last Updated 17 ಜನವರಿ 2011, 10:55 IST

ಶಿವಮೊಗ್ಗ: ಪಂಚಾಯ್ತಿ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಬಿಜೆಪಿಗೆ ಹಿನ್ನಡೆ ಮಾಡಲು ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಮತ್ತು ಕುಮಾರಸ್ವಾಮಿ ಅವರು ನಡೆಸಿದ ಷಡ್ಯಂತ್ರ ಫಲ ನೀಡಲಿಲ್ಲ. ಇದರಿಂದ ಇಬ್ಬರೂ ಮಾಜಿ ಮುಖ್ಯಮಂತ್ರಿಗಳಿಗೆ ಮುಖಭಂಗವಾಗಿದೆ ಎಂದು ರಾಜ್ಯಸಭೆ ಸದಸ್ಯ ಆಯನೂರು ಮಂಜುನಾಥ್ ಹೇಳಿದರು.

ನಗರದ ದೈವಜ್ಞ ಕಲ್ಯಾಣ ಮಂದಿರದಲ್ಲಿ ಭಾನುವಾರ ಬಿಜೆಪಿ ಗ್ರಾಮಾಂತರ ಘಟಕ ಹಮ್ಮಿಕೊಂಡಿದ್ದ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯ್ತಿ ನೂತನ ಸದಸ್ಯರಿಗೆ ಅಭಿನಂದನೆ ಮತ್ತು ಮತದಾರರಿಗೆ ಕೃತಜ್ಞತೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಬಂಗಾರಪ್ಪ ಬಿರುಗಾಳಿ ಯಾವುದೇ ಪರಿಣಾಮ ಬೀರಿಲ್ಲ ಎಂಬುದಕ್ಕೆ ಪಂಚಾಯ್ತಿ ಚುನಾವಣಾ ಫಲಿತಾಂಶ ಸಾಕ್ಷಿಯಾಗಿದೆ. ಪ್ರಸ್ತುತ ಅವರಿಗೆ ರಾಜಕಾರಣದಲ್ಲಿ ನೆಲೆಯೇ ಇಲ್ಲವಾಗಿದೆ ಎಂದು ವ್ಯಂಗ್ಯವಾಡಿದರು. ಪಕ್ಷದ ಕಾರ್ಯಕರ್ತರು ಗೆಲುವಿನಿಂದ ಮೈಮರೆಯದೆ, ಪಕ್ಷವನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಸಂಘಟಿಸುವತ್ತ ಗಮನಹರಿಸಬೇಕು ಎಂದು ಸಲಹೆ ಮಾಡಿದರು.

ಮಹಿಳೆ ಉಪ ಸಭಾಪತಿ: ವಿಧಾನ ಪರಿಷತ್ ಉಪ ಸಭಾಪತಿ ಹುದ್ದೆಯಿಂದ ಪುಟ್ಟಣ್ಣ ಅವರನ್ನು ಪದಚ್ಯುತಿ ಮಾಡಿದ್ದು ಸರಿಯಾಗಿದೆ. ಇಷ್ಟರಲ್ಲಿಯೇ ಪ್ರಥಮ ಬಾರಿ ಮಹಿಳೆಯೊಬ್ಬರು ಉಪ ಸಭಾಪತಿ ಹುದ್ದೆ ಅಲಂಕರಿಸಲಿದ್ದಾರೆ ಎಂದು ಅವರು ತಿಳಿಸಿದರು. ವಿಧಾನ ಪರಿಷತ್ ಸದಸ್ಯ ಸಿದ್ದರಾಮಣ್ಣ, ಶಾಸಕ ಕೆ.ಜಿ. ಕುಮಾರಸ್ವಾಮಿ, ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಆರ್.ಎಂ. ಮಂಜುನಾಥ್‌ಗೌಡ, ‘ಸೂಡಾ’ ಅಧ್ಯಕ್ಷ ಎಸ್. ಜ್ಞಾನೇಶ್ವರ್, ಪದಾಧಿಕಾರಿಗಳಾದ ಮಹೇಂದ್ರನಾಥ್, ಕೆ.ಬಿ. ಅಶೋಕ್ ನಾಯ್ಕಾ, ಉಣ್ಣಾಮಲೈ, ಕಮಲಾ ರಾಜೇಂದ್ರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.