ADVERTISEMENT

`ಮುಜರಾಯಿ ಆಸ್ತಿ ಒತ್ತುವರಿ ತೆರವಿಗೆ ಕ್ರಮ'

​ಪ್ರಜಾವಾಣಿ ವಾರ್ತೆ
Published 8 ಜುಲೈ 2013, 8:36 IST
Last Updated 8 ಜುಲೈ 2013, 8:36 IST

ಬೇಲೂರು: ಒತ್ತುವರಿಯಾಗಿರುವ ಮುಜರಾಯಿ ಇಲಾಖೆ ವ್ಯಾಪಿಗೆ ಆಸ್ತಿ ತೆರವು ಮಾಡಲು ಕ್ರಮ ಕೈಗೊಳ್ಳುವುದರ ಜೊತೆಗೆ ಆಸ್ತಿ ಒತ್ತುವರಿ ಮಾಡಿರುವವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಮುಜರಾಯಿ ಇಲಾಖೆಯ ಆಯುಕ್ತ ನಂದಕುಮಾರ್ ಹೇಳಿದರು.

ಇಲ್ಲಿನ ಚನ್ನಕೇಶವಸ್ವಾಮಿ ದೇವಾಲಯಕ್ಕೆ ಭಾನುವಾರ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದರು. ಬೇಲೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಮುಜರಾಯಿ ಇಲಾಖೆಗೆ ಸೇರಿದ ಆಸ್ತಿ ಒತ್ತುವರಿಯಾಗಿದೆ. ಬೇಲೂರಿನ ಚನ್ನಕೇಶವಸ್ವಾಮಿ ದೇವಾಲಯಕ್ಕೆ ಸೇರಿದ ಆಸ್ತಿಯೂ ಒತ್ತುವರಿ ಯಾಗಿದೆ. ಈ ಆಸ್ತಿ ಒತ್ತುವರಿ ತೆರವಿಗೆ ಕೆಲವರು ಅಡ್ಡಿಪಡಿಸುತ್ತಿದ್ದಾರೆ.

ಇದನ್ನು ಗಣನೆಗೆ ತೆಗೆದು ಕೊಳ್ಳದೆ ಇನ್ನೂ 15 ದಿನದಲ್ಲಿ ಒತ್ತುವರಿ ತೆರವು ಮಾಡಲಾಗುವುದು. ಈ ಸಂಬಂಧ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ಮುಖ್ಯಾಧಿಕಾರಿ ಗಳೊಂದಿಗೆ ಚರ್ಚಿಸಿ ತೆರವು ಕಾರ್ಯಾಚರಣೆಗೆ ಅಗತ್ಯ ಬಂದೋಬಸ್ತ್ ನೀಡುವಂತೆ ತಿಳಿಸಲಾಗಿದೆ. ಈ ಸಂಬಂಧ ಸ್ಥಳೀಯ ಶಾಸಕ ವೈ.ಎನ್. ರುದ್ರೇಶ್‌ಗೌಡ ಅವರೊಂದಿಗೂ ಮಾತುಕತೆ ನಡೆಸಲಾಗಿದೆ ಎಂದರು.

ಬೇಲೂರು ದೇವಾಲಯಕ್ಕೆ ಆಗಮಿಸುವ ಭಕ್ತರ ಅನುಕೂಲಕ್ಕಾಗಿ 16 ಕೊಠಡಿಗಳ ವಸತಿ ಗೃಹ ಮತ್ತು ಶೌಚಾಲಯ ನಿರ್ಮಿಸಲಾಗುವುದ. ದೇವಾಲಯದ ಹಿಂಭಾಗ ಇರುವ ಜಾಗವನ್ನು ಅಭಿವೃದ್ಧಿಪಡಿಸಲು ಆರಂಭಿಕವಾಗಿ ಒಂದು ಕೋಟಿ ಬಿಡುಗಡೆ ಮಾಡಲಾಗಿದೆ. ಅತಿಥಿ ಗೃಹ, ಪಾರ್ಕಿಂಗ್, ಝರಿ, ಮಕ್ಕಳ ಆಟಿಕೆಗಳನ್ನು ಅಳವಡಿಲಾಗುವುದು ಎಂದು ನುಡಿದರು.

ಅಸಮಾಧಾನ: ದೇವಾಲಯ ಸುತ್ತಲಿನ ಜಾಗಕ್ಕೆ ಭೇಟಿ ನೀಡಿದ ಆಯುಕ್ತ ನಂದಕುಮಾರ್ ಸ್ವಚ್ಛತೆ ಇಲ್ಲದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿದರು. ದೇವಾಲಯದ ಗೋಪುರದಲ್ಲಿ ಪಾಚಿ ಮತ್ತು ಗಿಡಗಳು ಬೆಳೆದಿರುವುದು, ನೆಲಹಾಸು ಜರುಗಿರುವುದಕ್ಕೆ ಬೇಸರ ವ್ಯಕ್ತಪಡಿಸಿ ಪ್ರಾಚ್ಯವಸ್ತು ಸಂರಕ್ಷಣಾ ಇಲಾಖೆಯ ಅಧಿಕಾರಿಗೆ ದೂರವಾಣಿ ಕರೆ ಮಾಡಿ ದುರಸ್ತಿಪಡಿಸುವಂತೆ ಒತ್ತಾಯಿಸಿದರು.

ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಜಿ.ಕೆ.ಕುಮಾರ್, ಉಪ ಸಮಿತಿ ಅಧ್ಯಕ್ಷ ಎನ್.ಆರ್.ಸಂತೋಷ್, ಸದಸ್ಯರಾದ ಶ್ರೀಹರಿ, ಶೈಲೇಶ್, ವೆಂಕಟೇಗೌಡ, ಕಾರ್ಯ ನಿರ್ವಾಹಕ ಅಧಿಕಾರಿ ವೆಂಕಟರಮಣ ಗುರುಪ್ರಸಾದ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.