ಶಿಕಾರಿಪುರ: ಕೇಂದ್ರ ಸರ್ಕಾರ ರಾಜ್ಯದ ರೈತರ ಸಾಲವನ್ನು ಮನ್ನಾ ಮಾಡಬೇಕು ಎಂದು ಆಗ್ರಹಿಸಿ ಶನಿವಾರ ಕಾಂಗ್ರೆಸ್ ಪದಾಧಿಕಾರಿಗಳು ತಾಲ್ಲೂಕು ಕಚೇರಿ ಮುಂಭಾಗ ಧರಣಿ ನಡೆಸಿದರು.
ಪ್ರಧಾನಿ ನರೇಂದ್ರ ಮೋದಿಗೆ ರೈತರ ಪರ ಕಾಳಜಿ ಇಲ್ಲ. ರೈತರ ಸಾಲ ಮನ್ನಾ ಮಾಡದೇ ಉದ್ಯಮಿಗಳ ಸಾಲವನ್ನು ಮನ್ನಾ ಮಾಡಿದ್ದಾರೆ ಎಂದು ಟೀಕಿಸಿದ ಪ್ರತಿಭಟನಾಕಾರರು, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ರೈತರ ಸಾಲ ಮನ್ನಾ ಮಾಡಿದಂತೆ, ಕೇಂದ್ರ ಸರ್ಕಾರ ಕೂಡ ರಾಷ್ಟ್ರೀಕೃತ ಬ್ಯಾಂಕ್ಗಳಲ್ಲಿರುವ ರೈತರ ಸಾಲವನ್ನು ಮನ್ನಾ ಮಾಡಬೇಕು’ ಎಂದು ಒತ್ತಾಯಿಸಿದರು.
ಪ್ರಾಮಾಣಿಕವಾಗಿ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸಂಸದ ಯಡಿಯೂರಪ್ಪ ಆರೋಪ ಮಾಡುವು ದನ್ನು ಬಿಟ್ಟು,ರೈತರ ಸಾಲ ಮನ್ನಾ ಮಾಡುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಬೇಕು. ಮುಖ್ಯಮಂತ್ರಿ ಯಾಗಿದ್ದ ಸಂದರ್ಭದಲ್ಲಿ ಭ್ರಷ್ಟಾಚಾರ ಆರೋಪ ಎದುರಿಸಿದ್ದ ಯಡಿಯೂರಪ್ಪ ಪುನಃ ಮುಖ್ಯಮಂತ್ರಿಯಾಗುವ ಕನಸು ಕಾಣುತ್ತಿದ್ದಾರೆ ಎಂದು ಟೀಕಿಸಿದರು.
ಬಗರ್ಹುಕುಂ ರೈತ ಪರ ಹೋರಾಟಗಾರ ಎಂದು ಹೇಳುವ ಯಡಿಯೂರಪ್ಪ,ಮುಖ್ಯಮಂತ್ರಿಯಾದರೂ ರೈತರಿಗೆ ಹಕ್ಕು ಪತ್ರ ನೀಡಲಿಲ್ಲ. ಸಿದ್ದರಾಮಯ್ಯ ಬಗರ್ಹುಕುಂ ಸಾಗುವಳಿದಾರರಿಗೆ ಹಕ್ಕು ಪತ್ರ ನೀಡಿದ್ದಾರೆ ಎಂದು ಶ್ಲಾಘಿಸಿದರು.
‘ಕಾಡಾ’ ಮಾಜಿ ಅಧ್ಯಕ್ಷ ನಗರದ ಮಹಾದೇವಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗೋಣಿ ಮಾಲತೇಶ್, ಜಿಲ್ಲಾ ಪಂಚಾಯ್ತಿ ಸದಸ್ಯ ಎಚ್.ಪಿ. ನರಸಿಂಗನಾಯ್ಕ, ಪುರಸಭೆ ಸದಸ್ಯರಾದ ಹುಲ್ಮಾರ್ ಮಹೇಶ್, ಮಧು, ಬಡಗಿ ಪಾಲಾಕ್ಷ, ಯುವ ಕಾಂಗ್ರೆಸ್ ಅಧ್ಯಕ್ಷ ಉಳ್ಳಿ ದರ್ಶನ್, ಮುಖಂಡರಾದ ತಿಮ್ಮಣ್ಣ, ರವಿ, ಪಚ್ಚಿ ಗಿಡ್ಡಪ್ಪ, ಹಳ್ಳೂರು ಪರಮೇಶ್ವರಪ್ಪ, ಸ.ನಾ. ಮಂಜಪ್ಪ, ಭಂಡಾರಿ ಮಾಲತೇಶ್, ರವಿಕಿರಣ್, ಯು.ಬಿ. ವಿಜಯ್, ಜಿದ್ದು ಮಂಜುನಾಥ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಪದಾಧಿಕಾರಿಗಳು ಪ್ರಧಾನಿ ನರೇಂದ್ರ ಮೋದಿ ಹಾಗೂ ಸಂಸದ ಬಿ.ಎಸ್. ಯಡಿಯೂರಪ್ಪ ಅವರ ಪ್ರತಿಕೃತಿ ದಹನ ಮಾಡಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.