ADVERTISEMENT

ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯ.ಪ್ರೌಢಶಾಲಾ ಸಹಶಿಕ್ಷಕರ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 20 ಫೆಬ್ರುವರಿ 2011, 11:00 IST
Last Updated 20 ಫೆಬ್ರುವರಿ 2011, 11:00 IST

ಶಿವಮೊಗ್ಗ: ವೇತನ ತಾರತಮ್ಯ ಸರಿಪಡಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ತಾಲ್ಲೂಕು ಘಟಕದ ಸದಸ್ಯರು ಶನಿವಾರ ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು. ಶಿಕ್ಷಣ ಇಲಾಖೆ ಆಯುಕ್ತರು 5ನೇ ವೇತನ ಆಯೋಗದಲ್ಲಿ ತಾಂತ್ರಿಕ ಕಾಲೇಜಿನ ಉಪನ್ಯಾಸಕರು, ಪೊಲೀಸ್ ನಿರೀಕ್ಷಕರು, ವಲಯ ಅರಣ್ಯಾಧಿಕಾರಿಗಳಿಗೆ ನೀಡುವಂತೆ ಸಮಾನವಾದ ವೇತನ ನೀಡುವಂತೆ ಶಿಫಾರಸು ಮಾಡಿದ್ದಾರೆ. ಅದನ್ನು ಕೂಡಲೇ ಜಾರಿಗೆ ತರಬೇಕು ಎಂದು ಒತ್ತಾಯಿಸಿದರು.

ಪ್ರೌಢಶಾಲಾ ಸಹ ಶಿಕ್ಷಕರ ವೃಂದವು 30ರಿಂದ 35ವರ್ಷಗಳ ಕಾಲ ಯಾವುದೇ ಮುಂಬಡ್ತಿಯನ್ನು ಪಡೆಯದೆ ನಿವೃತ್ತರಾಗುತ್ತಿದ್ದಾರೆ. ಆದ್ದರಿಂದ ಪ್ರೌಢಶಾಲಾ ಸಹ ಶಿಕ್ಷಕರಿಂದ ಮುಖ್ಯೋಪಾಧ್ಯಾಯರಿಗೆ ನೀಡುವ ಬಡ್ತಿ ಪ್ರಮಾಣವನ್ನು ಶೇ. 75ರಿಂದ 100ಕ್ಕೆ ಹೆಚ್ಚಿಸಬೇಕು ಎಂದು ಆಗ್ರಹಿಸಿದರು. ಸರ್ಕಾರಿ ಶಾಲಾ ಶಿಕ್ಷಕರಿಗೆ ನೀಡುತ್ತಿರುವಂತೆ ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರಿಗೂ ವೈದ್ಯಕೀಯ ಭತ್ಯೆ ಮತ್ತಿತರ ಸೌಲಭ್ಯ ನೀಡಬೇಕು.

ವರ್ಗಾವಣೆ ಪದ್ಧತಿಯಲ್ಲಿನ ನ್ಯೂನತೆ ಸರಿಪಡಿಸಬೇಕು ಎನ್ನುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿದರು. ನಂತರ, ಈ ಸಂಬಂಧ ಜಿಲ್ಲಾಧಿಕಾರಿ ಕಚೇರಿಗೆ ಮನವಿ ಸಲ್ಲಿಸಿದರು. ಪದಾಧಿಕಾರಿಗಳಾದ ಎಸ್.ಎಂ. ಲೋಕೇಶ್ವರಪ್ಪ, ಶಿವಾನಾಯ್ಕ, ಓಂಕಾರಪ್ಪ, ಬಿ. ಸಿದ್ದಬಸಪ್ಪ ಮತ್ತಿತರರು ನೇತೃತ್ವ ವಹಿಸಿದ್ದರು. 

ಸರ್ಕಾರಿ ನೌಕರರ ಕ್ರೀಡಾಕೂಟ
ಜಿಲ್ಲಾಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳು ಮಾರ್ಚ್ 10, 11ರಂದು ನಗರದ ನೆಹರು ಕ್ರೀಡಾಂಗಣದಲ್ಲಿ ನಡೆಯಲಿವೆ. ಪುರುಷರ ವಿಭಾಗದಲ್ಲಿ 45 ವರ್ಷ ಒಳಪಟ್ಟವರು ಹಾಗೂ ಮೇಲ್ಪಟ್ಟವರಿಗೆ ಪ್ರತ್ಯೇಕವಾಗಿ ಸ್ಪರ್ಧೆಗಳು ಮತ್ತು ಮಹಿಳೆಯರ ವಿಭಾಗದಲ್ಲಿ 40 ವರ್ಷ ಒಳಗಿನ ಹಾಗೂ ಮೇಲ್ಪಟ್ಟವರಿಗೆ ಪ್ರತ್ಯೇಕವಾಗಿ ಸ್ಪರ್ಧೆ ಏರ್ಪಡಿಸಲಾಗುವುದು. ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಶಾಸ್ತ್ರೀಯ ಸಂಗೀತ, ಶಾಸ್ತ್ರೀಯ ನೃತ್ಯ, ವಾದ್ಯ ಸಂಗೀತ, ಜಾನಪದ ನೃತ್ಯ, ಗೀತೆಗಳು, ಕರಕುಶಲ ವಸ್ತ್ರುಪ್ರದರ್ಶನ ಹಾಗೂ ಕಿರುನಾಟಕ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ.ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದವರನ್ನು ರಾಜ್ಯಮಟ್ಟದ ಸ್ಪರ್ಧೆಗಳಿಗೆ ಕಳುಹಿಸಿಕೊಡಲಾಗುವುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.