ADVERTISEMENT

ವ್ಯಕ್ತಿತ್ವ ವಿಕಸನಕ್ಕೆ ನಿರಂತರ ಅಧ್ಯಯನ ಅಗತ್ಯ

​ಪ್ರಜಾವಾಣಿ ವಾರ್ತೆ
Published 8 ಅಕ್ಟೋಬರ್ 2011, 9:50 IST
Last Updated 8 ಅಕ್ಟೋಬರ್ 2011, 9:50 IST

ಶಿವಮೊಗ್ಗ: ನಿರಂತರ ಅಧ್ಯಯನದಿಂದ ಮಾತ್ರ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನವಾಗಲು ಸಾಧ್ಯ ಎಂದು ಸಹ್ಯಾದ್ರಿ ವಿಜ್ಞಾನ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಪ್ರೊ.ಡಿ.ಎಂ. ಬಸವರಾಜ್ ಅಭಿಪ್ರಾಯಪಟ್ಟರು.

ನಗರದ ಸಹ್ಯಾದ್ರಿ ವಿಜ್ಞಾನ ಕಾಲೇಜಿನ ಪ್ರೊ.ಸಿ.ಎನ್.ಆರ್. ರಾವ್ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬೋಧನಾ ವಿಧಾನ ಸುಧಾರಣೆಯ ಒಂದು ದಿನದ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಪ್ರತಿಯೊಬ್ಬ ವಿದ್ಯಾರ್ಥಿಯೂ ಸಹ ನಿರಂತರ ಅಧ್ಯಯನದಲ್ಲಿ ತೊಡಗಿದಾಗ ಮಾತ್ರ ಬದಲಾಗುತ್ತಿರುವ ವಿದ್ಯಮಾನಗಳಿಗೆ ಅನುಗುಣವಾಗಿ ಶಿಕ್ಷಣದಲ್ಲಿ ಪ್ರಗತಿ ಕಾಣಲು ಸಾಧ್ಯ. ಹಾಗೆಯೇ ಶಿಕ್ಷಣ ಕ್ಷೇತ್ರದಲ್ಲಿ ಮಹತ್ತರ  ಬದಲಾವಣೆ ತರುವ ಉದ್ದೇಶದಿಂದ ಅನೇಕ ವರ್ಷಗಳಿಂದ ಪಾಠ-ಪ್ರವಚನ ಮಾಡುತ್ತಿರುವ ಶಿಕ್ಷಕರು ತರಬೇತಿ ಪಡೆದು, ಹಲವು ಪ್ರಯೋಗಗಳ ಮೂಲಕ ಶಿಕ್ಷಣ ನೀಡಲು ಮುಂದಾಗುತ್ತಿರುವುದು ಒಳ್ಳೆಯ ಬೆಳವಣಿಗೆ. ಇಂತಹ ಕಾರ್ಯಾಗಾರಗಳು ಶೈಕ್ಷಣಿಕ ಕ್ಷೇತ್ರದಲ್ಲಿ ಕ್ರಾಂತಿಕಾರಕ ಬದಲಾವಣೆಗೆ ಸಹಕಾರಿಯಾಗಲಿವೆ ಎಂದರು.

ಶಿಕ್ಷಕರು ಬದಲಾಗುತ್ತಿರುವ ತಂತ್ರಜ್ಞಾನಕ್ಕೆ ತಕ್ಕಂತೆ ತಮ್ಮ ಶಿಕ್ಷಣ ಕ್ರಮವನ್ನು ಬದಲಾಯಿಸಿಕೊಳ್ಳಬೇಕು. ಇಂದು ಮಾಹಿತಿ ತಂತ್ರಜ್ಞಾನ ಬೆಳವಣಿಗೆಯಿಂದ ವಿದ್ಯಾರ್ಥಿಗಳು ತರಗತಿಯ ಹೊರಗೆ ಅನೇಕ ಮಾಹಿತಿ ಕಲೆಹಾಕಿರುತ್ತಾರೆ. ಹಾಗಾಗಿ ಇಂತಹ ವಿದ್ಯಾರ್ಥಿಗಳಿಗೆ ಬೋಧಿಸಲು ಶಿಕ್ಷಕರು ಇನ್ನೂ ಹೆಚ್ಚಿನ ಅಧ್ಯಯನದಲ್ಲಿ ತೊಡಗಬೇಕಿದೆ ಎಂದರು.

ಕಾಲೇಜಿನ ಪ್ರಾಂಶುಪಾಲ ಪ್ರೊ.ಬಿ.ಆರ್. ಸಿದ್ದರಾಮಪ್ಪ, ಬೆಂಗಳೂರು ಸಿ.ಐ.ಐ.ನ ಪ್ರಧಾನ ಸಲಹೆಗಾರ ಡಾ.ಎ. ಸೆಂದಿಲ್‌ಕುಮಾರನ್, ಕಾರ್ಯಾಗಾರ ಸಂಯೋಜಕ ಡಾ.ಬಸವರಾಜ್ ಪದ್ಮಸಾಲಿ, ಡಾ.ಕೆ. ಕೃಷ್ಣಮೂರ್ತಿ ಮತ್ತಿತರರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.