ADVERTISEMENT

ಶಿವಮೊಗ್ಗ–ತುಮಕೂರು ನಡುವೆ ಚತುಷ್ಪಥ ಹೆದ್ದಾರಿ

₨60 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಸಚಿವ ಮಹಾದೇವಪ್ಪ ಶಿಲಾನ್ಯಾಸ

​ಪ್ರಜಾವಾಣಿ ವಾರ್ತೆ
Published 6 ಮಾರ್ಚ್ 2014, 6:16 IST
Last Updated 6 ಮಾರ್ಚ್ 2014, 6:16 IST

ಸಾಗರ: ಶಿವಮೊಗ್ಗ–ತುಮಕೂರು ಹಾಗೂ ಶಿವಮೊಗ್ಗ–ಚಿತ್ರದುರ್ಗ ನಡುವೆ ₨ 2000 ಕೋಟಿ ವೆಚ್ಚದಲ್ಲಿ ಚತುಷ್ಪಥ ಹೆದ್ದಾರಿ ನಿರ್ಮಿಸಲಾಗುವುದು ಎಂದು ಲೋಕೋಪಯೋಗಿ ಸಚಿವ ಡಾ.ಎಚ್.ಸಿ.ಮಹಾದೇವಪ್ಪ ಹೇಳಿದರು.

ಬುಧವಾರ ನಡೆದ ಕಾರ್ಯಕ್ರಮದಲ್ಲಿ ತಾಲ್ಲೂಕಿನಲ್ಲಿ ₨60ಕೋಟಿ ವೆಚ್ಚದಲ್ಲಿ ನಡೆಯಲಿರುವ  ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಿಲಾನ್ಯಾಸ ಹಾಗೂ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ಶಿವಮೊಗ್ಗ ಜಿಲ್ಲೆಯ ವಿವಿಧ ಕಾಮಗಾರಿಗಳಿಗೆ ಲೋಕೋಪಯೋಗಿ ಇಲಾಖೆಗೆ ರಾಜ್ಯ ಸರ್ಕಾರ ₨ 1546ಕೋಟಿ ಮಂಜೂರು ಮಾಡಿದೆ ಎಂದು ತಿಳಿಸಿದರು.

ರಾಜ್ಯದಲ್ಲಿನ ವಿವಿಧ ಭಾಗಗಳ ರಸ್ತೆ ಅಭಿವೃದ್ಧಿಗೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಿ ₨1000 ಕೋಟಿ ಹೆಚ್ಚುವರಿ ಅನುದಾನವನ್ನು ಪಡೆಯಲಾಗುತ್ತಿದೆ. ರಾಜ್ಯ ಸರ್ಕಾರ ಈಗಾಗಲೇ ₨2500ಕೋಟಿ ಮೀಸಲಿಟ್ಟಿದೆ. ರಸ್ತೆಗಳ ಸಮಗ್ರ ಅಭಿವೃದ್ಧಿ ಆಗುವತ್ತ ಮೊದಲ ಆದ್ಯತೆ ನೀಡಲಾಗುವುದು ಎಂದರು.

ಪರಿಶಿಷ್ಟ ಜಾತಿ ಮತ್ತು ಪಂಗಡದವರು ವಾಸವಾಗಿರುವ ಪ್ರದೇಶದಲ್ಲಿ ಆ ವರ್ಗದ ಜನರ ಸಂಖ್ಯೆಗೆ ಅನುಗುಣವಾಗಿ ಅಭಿವೃದ್ಧಿ ಅನುದಾನವನ್ನು ಬಿಡುಗಡೆ ಮಾಡುವ ಕ್ರಾಂತಿಕಾರಕ ಕಾನೂನನ್ನು ರಾಜ್ಯ ಸರ್ಕಾರ ಜಾರಿಗೆ ತಂದಿದೆ.

ಸಾಮಾಜಿಕ ನ್ಯಾಯಕ್ಕೆ ಪೂರಕವಾಗಿರುವ ಈ ಕಾನೂನು ಜಾರಿಗೆ ಬಂದ ಕಾರಣ ದಲಿತರನ್ನು ಮುಖ್ಯವಾಹಿನಿಗೆ ತರಲು ವಿನಿಯೋಗಿಸುವ ಹಣ ₨8000ಕೋಟಿಯಿಂದ 13000ಕೋಟಿಗೆ ಏರಿದೆ ಎಂದು ಹೇಳಿದರು.

ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ಅಧಿಕಾರ ಸ್ವೀಕರಿಸಿದ ಅರ್ಧ ಗಂಟೆಯಲ್ಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನ್ನಭಾಗ್ಯ ಯೋಜನೆ ಜಾರಿಯಾಗುವಂತೆ ಘೋಷಣೆ ಮಾಡಿದ್ದಾರೆ. ಇದು ಅವರ ಏಕ ಪಕ್ಷೀಯ ತೀರ್ಮಾನವಲ್ಲ. ಅವರ ತೀರ್ಮಾನದ ಹಿಂದೆ ಪಕ್ಷದ ಎಲ್ಲಾ ಮುಖಂಡರೂ ಇದ್ದಾರೆ ಎಂದು ಸ್ಪಷ್ಟಪಡಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಿಧಾನಸಭಾಧ್ಯಕ್ಷ ಕಾಗೋಡು ತಿಮ್ಮಪ್ಪ  ಮಾತನಾಡಿ, ನಗರದ ಪ್ರವಾಸಿ ಮಂದಿರದ ಬಳಿ ₨10ಕೋಟಿ ವೆಚ್ಚದಲ್ಲಿ ತಾಯಿ ಮಗು ಆಸ್ಪತ್ರೆ ನಿರ್ಮಿಸಲಾಗುವುದು. ಇದರ ಪ್ರಯೋಜನ ಸಾಗರ ಮಾತ್ರವಲ್ಲದೆ ಸೊರಬ, ಹೊಸನಗರ ತಾಲ್ಲೂಕಿನ ಜನರಿಗೂ ದೊರೆಯಲಿದೆ ಎಂದರು.

ನಗರದ ಅಭಿವೃದ್ಧಿಗೆ ಈಗಾಗಲೇ ₨50ಕೋಟಿ ಮಂಜೂರಾಗಿದೆ. ಲೋಕಸಭಾ ಚುನಾವಣಾ ಪ್ರಕ್ರಿಯೆ ಮುಗಿದ ತಕ್ಷಣ ಟೆಂಡರ್‌ ಕರೆದು ಕಾಮಗಾರಿ ಆರಂಭಿಸಲಾಗುವುದು ಎಂದು ತಿಳಿಸಿದರು.

ವಿಧಾನ ಪರಿಷತ್‌ನ ಮಾಜಿ ಸದಸ್ಯೆ ಪ್ರಫುಲ್ಲಾ ಮಧುಕರ್, ಜಿಲ್ಲಾ ಪಂಚಾಯ್ತಿ ಸದಸ್ಯರಾದ ಲಲಿತಾ ನಾರಾಯಣ್‌, ಹೊನಗೋಡು ರತ್ನಾಕರ್, ಪದ್ಮಾವತಿ ಚಂದ್ರಕುಮಾರ್‌, ಸುಮಂಗಲ ರಾಮಕೃಷ್ಣ, ಕಲಗೋಡು ರತ್ನಾಕರ್, ತಾಲ್ಲೂಕು ಪಂಚಾಯ್ತಿ ಅಧ್ಯಕ್ಷ ಹರೀಶ್‌ ಗಂಟೆ, ಎಪಿಎಂಸಿ ಅಧ್ಯಕ್ಷ ಹೊಳೆಯಪ್ಪ, ಬಗರ್‌ಹುಕುಂ ಸಮಿತಿ ಅಧ್ಯಕ್ಷ ಕಾಗೋಡು ಅಣ್ಣಪ್ಪ, ನಗರಸಭೆ ಹಾಗೂ ತಾಲ್ಲೂಕು ಪಂಚಾಯ್ತಿ ಸದಸ್ಯರು ಹಾಜರಿದ್ದರು.  

ವಿಧಾನ ಪರಿಷತ್‌ನ ಮಾಜಿ ಸದಸ್ಯೆ ಪ್ರಫುಲ್ಲಾ ಮಧುಕರ್, ಜಿಲ್ಲಾ ಪಂಚಾಯ್ತಿ ಸದಸ್ಯರಾದ ಲಲಿತಾ ನಾರಾಯಣ್‌, ಹೊನಗೋಡು ರತ್ನಾಕರ್, ಪದ್ಮಾವತಿ ಚಂದ್ರಕುಮಾರ್‌, ಸುಮಂಗಲ ರಾಮಕೃಷ್ಣ, ಕಲಗೋಡು ರತ್ನಾಕರ್, ತಾಲ್ಲೂಕು ಪಂಚಾಯ್ತಿ ಅಧ್ಯಕ್ಷ ಹರೀಶ್‌ ಗಂಟೆ, ಎಪಿಎಂಸಿ ಅಧ್ಯಕ್ಷ ಹೊಳೆಯಪ್ಪ, ಬಗರ್‌ಹುಕುಂ ಸಮಿತಿ ಅಧ್ಯಕ್ಷ ಕಾಗೋಡು ಅಣ್ಣಪ್ಪ, ನಗರಸಭೆ ಹಾಗೂ ತಾಲ್ಲೂಕು ಪಂಚಾಯ್ತಿ ಸದಸ್ಯರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.