ADVERTISEMENT

ಶಿವಮೊಗ್ಗ: ಎಐಟಿಯುಸಿ ನೇತೃತ್ವದಲ್ಲಿ ಆಶಾ ಕಾರ್ಯಕರ್ತೆಯರ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 21 ಸೆಪ್ಟೆಂಬರ್ 2011, 8:30 IST
Last Updated 21 ಸೆಪ್ಟೆಂಬರ್ 2011, 8:30 IST

ಶಿವಮೊಗ್ಗ: ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರು ಎಐಟಿಯುಸಿ ನೇತೃತ್ವದಲ್ಲಿ ನಗರದಲ್ಲಿ ಮಂಗಳವಾರ ಪ್ರತಿಭಟನಾ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.

ನಗರಸಭೆಯಿಂದ ಬೃಹತ್ ಪ್ರತಿಭಟನೆಯ ಮೂಲಕ ಹೊರಟ ಕಾರ್ಯಕರ್ತೆಯರು ಜಿಲ್ಲಾಧಿಕಾರಿ ಕಚೇರಿ ಎದುರು ಸಭೆ ನಡೆಸಿ, ಮನವಿ ಸಲ್ಲಿಸಿದರು.ಆಶಾ ಕಾರ್ಯಕರ್ತೆಯರನ್ನು ಪೂರ್ಣಕಾಲದ ಸರ್ಕಾರಿ ನೌಕರರೆಂದು ಪರಿಗಣಿಸಬೇಕು, ಪ್ರತಿ ತಿಂಗಳು ಮೂರು ರೂ ಸಾವಿರ ವೇತನ ನಿಗದಿಪಡಿಸಬೇಕು. ಭವಿಷ್ಯ ನಿಧಿ, ಇಎಸ್‌ಐ ಪಿಂಚಣಿ ಮುಂತಾದ ಸಾಮಾಜಿಕ ಭದ್ರತಾ ಯೋಜನೆಗಳನ್ನು ನೀಡಬೇಕು ಎಂದು ಆಗ್ರಹಿಸಿದರು.

ಬಸ್‌ಪಾಸ್, ಇನ್ನಿತರ ಸಾರಿಗೆ ವೆಚ್ಚವನ್ನು ಮುಂಗಡವಾಗಿ ನೀಡಬೇಕು. ಖಾಸಗಿ ಆಸ್ಪತ್ರೆಗಳಲ್ಲಿ ಹೆರಿಗೆ ಮಾಡಿಸಿದರೂ ಪ್ರೋತ್ಸಾಹಧನ ನೀಡಬೇಕು ಎಂದು ಒತ್ತಾಯಿಸಿದರು.ಪ್ರತಿಭಟನೆಯ ನೇತೃತ್ವವನ್ನು ಕರ್ನಾಟಕ ರಾಜ್ಯ ಆಶಾ ಕಾರ್ಯಕರ್ತೆಯರ ಫೆಡರೇಷನ್‌ನ ಅಧ್ಯಕ್ಷ ಎಚ್.ಕೆ. ರಾಮಚಂದ್ರಪ್ಪ, ಜಿಲ್ಲಾ ಸಂಚಾಲಕ ಎನ್. ರವೀಂದ್ರ ಸಾಗರ, ಪದಾಧಿಕಾರಿಗಳಾದ ಭಾರತಿ ಸಿರಿಗೆರೆ, ಮಂಜುಳಾ ನಿಧಿಗೆ, ರೇಣುಕಾ ತುಂಬ್ರಿಕೊಪ್ಪ, ನಿರ್ಮಲಾ, ಜಾನಕಿ ಮತ್ತಿತರರು ವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.