ಶಿವಮೊಗ್ಗ: ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳು ಜಿಲ್ಲೆಯ 6,22,420 ಫಲಾನುಭವಿಗಳಿಗೆ ತಲುಪಿದೆ ಎಂದು ಗೃಹಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.
ಇಲ್ಲಿನ ಪ್ರೀಡಂ ಪಾರ್ಕ್ ಆವರಣದಲ್ಲಿ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯಿತಿ ವತಿಯಿಂದ ಗುರುವಾರ ಆಯೋಜಿಸಿದ್ದ ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳ ಪಲಾನುಭವಿಗಳ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು.
ಯಾವುದೇ ಸರ್ಕಾರಿ ಕಚೇರಿಗೆ ಲಂಚ ನೀಡದೆ ಸಾರ್ವಜನಿಕರಿಗೆ ದೊರೆಯಬೇಕಾದ ಮೂಲಸೌಕರ್ಯಗಳನ್ನು ನೇರವಾಗಿ ದೊರೆಯುವಂತೆ ಮಾಡಲಾಗಿದೆ. ಆಯುಷ್ಮಾನ್ ಭಾರತ್ ಯೋಜನೆ ಅಡಿ ಬಡ ಕುಟುಂಬಕ್ಕೆ ₹ 5 ಲಕ್ಷ ವೆಚ್ಚದವರೆಗೂ ಹೈಟೆಕ್ ಆಸ್ಪತ್ರೆಗಳಲ್ಲಿಯೂ ಉಚಿತ ಚಿಕಿತ್ಸೆ ದೊರೆಯುವಂತಾಗಿದೆ ಎಂದು ಹೇಳಿದರು.
ಗ್ರಾಮೀಣ ಪ್ರದೇಶದಲ್ಲಿ 2,90,000 ಸಾವಿರ ಮನೆಗಳಿಗೆ ಶುದ್ಧ ಕುಡಿಯುವ ನೀರು ಯೋಜನೆಗೆ ಚಾಲನೆ ನೀಡಲಾಗಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು.
ಶಿವಮೊಗ್ಗದಿಂದ ಆನಂದಪುರವರೆಗೆ ಚತುಷ್ಪತ ಹೆದ್ದಾರಿ ನಿರ್ಮಾಣಕ್ಕೆ ₹ 669 ಕೋಟಿ, ಸಾಗರ ತಾಲ್ಲೂಕಿನ ಹೊಸೂರು ಬಳಿ ರೈಲ್ವೆ ಮೇಲ್ಸೇತುವೆ, ತಾಳಗುಪ್ಪ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ₹ 200 ಕೋಟಿ ಸೇರಿ ಒಟ್ಟು ₹ 869 ಕೋಟಿ ಕೇಂದ್ರದ ರಾಷ್ಟ್ರೀಯ ಹೆದ್ದಾರಿ ಇಲಾಖೆಯಿಂದ ಮಂಜೂರಾಗಿದೆ ಎಂದು ಅವರು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಅಂತರ್ಜಾತಿ ವಿವಾಹಿತರು, ಫಸಲ್ ಬಿಮಾ, ವಿದ್ಯಾನಿಧಿ, ಜೀವಜಲ, ಟೂರಿಸ್ಟ್ ಟ್ಯಾಕ್ಸಿ ಖರೀದಿ, ನಿವೇಶನ ಹಕ್ಕುಪತ್ರ, ಗಂಗಾ ಕಲ್ಯಾಣ, ಉನ್ನತ ಶಿಕ್ಷಣಕ್ಕೆ ಸಹಾಯಧನ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್, ಕೃಷಿಕರಿಗೆ ಯಂತ್ರೋಪಕರಣ ಟ್ರ್ಯಾಕ್ಟರ್, ಟಿಲ್ಲರ್, ಅಡಿಕೆ ಕೊಯ್ಯುವ ದೋಟಿ ಸೇರಿ ವಿವಿಧ ಇಲಾಖೆಯ ಫಲಾನುಭವಿಗಳಿಗೆ ಸೌಲಭ್ಯವನ್ನು ವಿತರಿಸಲಾಯಿತು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ. ಮಿಥುನ್ ಕುಮಾರ್, ಜಿಲ್ಲಾಧಿಕಾರಿ ಆರ್. ಸೆಲ್ವಮಣಿ, ಶಾಸಕರಾದ ಕೆ.ಬಿ. ಅಶೋಕ್ ನಾಯ್ಕ, ಕುಮಾರ್ ಬಂಗಾರಪ್ಪ, ವಿಧಾನ ಪರಿಷತ್ ಸದಸ್ಯರಾದ ಆಯನೂರು ಮಂಜುನಾಥ್, ಎಸ್. ರುದ್ರೆಗೌಡ, ಡಿ.ಎಸ್. ಅರುಣ್, ಮಹಾನಗರ ಪಾಲಿಕೆ ಮೇಯರ್ ಎಸ್. ಶಿವಕುಮಾರ್, ಕಾಡಾ ಅಧ್ಯಕ್ಷೆ ಪವಿತ್ರ ರಾಮಯ್ಯ, ಶಿವಮೊಗ್ಗ–ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಎನ್.ಜಿ. ನಾಗರಾಜ್, ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮದ ರಾಜ್ಯ ಅಧ್ಯಕ್ಷ ರಾಜು ಎಂ. ತಲ್ಲೂರು ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.