ADVERTISEMENT

ಸಾಗರ: 303 ಹಕ್ಕುಪತ್ರ ನೀಡಲು ತೀರ್ಮಾನ

​ಪ್ರಜಾವಾಣಿ ವಾರ್ತೆ
Published 22 ಫೆಬ್ರುವರಿ 2012, 5:40 IST
Last Updated 22 ಫೆಬ್ರುವರಿ 2012, 5:40 IST

ಸಾಗರ: ಇಲ್ಲಿನ ತಾಲ್ಲೂಕು ಕಚೇರಿಯಲ್ಲಿ ಮಂಗಳವಾರ ನಡೆದ ಬಗರ್‌ಹುಕುಂ ಸಮಿತಿ ಸಭೆಯಲ್ಲಿ 303 ಬಗರ್‌ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರ ನೀಡಲು ತೀರ್ಮಾನಿಸಲಾಯಿತು.

ಸಭೆಯ ನಂತರ ಸುದ್ದಿಗಾರರಿಗೆ ಈ ವಿಷಯ ತಿಳಿಸಿದ ಶಾಸಕ ಗೋಪಾಲಕೃಷ್ಣ ಬೇಳೂರು ಕಳೆದ ನಾಲ್ಕು ವರ್ಷಗಳಿಂದ ಬಗರ್‌ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರ ನೀಡುವ ಕಾರ್ಯ ಬೇರೆ ಬೇರೆ ಕಾರಣಗಳಿಗಾಗಿ ನೆನೆಗುದಿಗೆ ಬಿದ್ದಿದ್ದು, ಈಗ ಈ ಕೆಲಸವನ್ನು ಚುರುಕುಗೊಳಿಸಲಾಗಿದೆ ಎಂದರು.

ತಾಲ್ಲೂಕಿನಲ್ಲಿ ಬಗರ್‌ಹುಕುಂ ಸಾಗುವಳಿದಾರರು ತಮ್ಮ ಸಾಗುವಳಿಯನ್ನು ಸಕ್ರಮಗೊಳಿಸುವಂತೆ ಕೋರಿ ಸಲ್ಲಿಸಿರುವ ಎರಡು ಸಾವಿರಕ್ಕೂ ಹೆಚ್ಚು ಅರ್ಜಿ ವಿಲೇ ಆಗಬೇಕಿದೆ. ಮೊದಲ ಹಂತದಲ್ಲಿ 303 ಅರ್ಜಿದಾರರಿಗೆ ಹಕ್ಕುಪತ್ರ ನೀಡಲು ತೀರ್ಮಾನಿಸಲಾಗಿದ್ದು, ಮುಂದಿನ ದಿನಗಳಲ್ಲಿ ಉಳಿದ ಅರ್ಜಿಗಳನ್ನು ಶೀಘ್ರವಾಗಿ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ದಾಖಲೆಗಳು ಸಮರ್ಪಕವಾಗಿದ್ದಲ್ಲಿ ಮಾತ್ರ ಅರ್ಜಿ ಸಲ್ಲಿಸಿರುವವರಿಗೆ ಹಕ್ಕುಪತ್ರ ದೊರೆಯಲಿದೆ. ಬಗರ್‌ಹುಕುಂ ಹೆಸರಿನಲ್ಲಿ ಅರಣ್ಯಭೂಮಿ ಒತ್ತುವರಿ ಮಾಡಿರುವ ಹಾಗೂ ಇತ್ತೀಚೆಗೆ ಸರ್ಕಾರಿ ಭೂಮಿಯನ್ನು ಒತ್ತುವರಿ ಮಾಡಿರುವವರಿಗೆ ಹಕ್ಕುಪತ್ರ ನೀಡಲು ಕಾನೂನಿನಲ್ಲಿ ಅವಕಾಶವಿಲ್ಲ ಎಂದು ಸ್ಪಷ್ಟಪಡಿಸಿದರು.

ಇದೇ ಸಂದರ್ಭದಲ್ಲಿ ರಾಷ್ಟ್ರೀಯ ಕುಟುಂಬ ಪರಿಹಾರ ಯೋಜನೆಯಡಿ ಆರು ಫಲಾನುಭವಿಗಳಿಗೆ ತಲಾ ್ಙ ಹತ್ತು ಸಾವಿರ ಸಹಾಯಧನದ ಚೆಕ್‌ಅನ್ನು ಶಾಸಕ ಬೇಳೂರು ವಿತರಿಸಿದರು. ತಹಶೀಲ್ದಾರ್ ಯೋಗೇಶ್ವರ್, ಭೂನ್ಯಾಯ ಮಂಡಳಿ ಸದಸ್ಯ ಆರ್.ಸಿ. ಮಂಜುನಾಥ್ ಇನ್ನಿತರರು ಹಾಜರಿದ್ದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.