ಶಿವಮೊಗ್ಗ: `ಸದ್ಯಕ್ಕೆ ಡಿ.ವಿ. ಸದಾನಂದಗೌಡ ಮುಖ್ಯಮಂತ್ರಿಯಾಗಿದ್ದಾರೆ. ಅವರ ಬದಲಾವಣೆಯ ಬಗ್ಗೆ ಯಾವುದೇ ಸೂಚನೆ ಇಲ್ಲ~ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ.ಎಸ್. ಈಶ್ವರಪ್ಪ ಸ್ಪಷ್ಟಪಡಿಸಿದರು.
ನಗರದಲ್ಲಿ ಮಂಗಳವಾರ ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಬದಲಾವಣೆ ಕುರಿತು ಪಕ್ಷದ ವರಿಷ್ಠರು ಕೈಗೊಳ್ಳುವ ನಿರ್ಧಾರಕ್ಕೆ ತಾವು ಬದ್ಧ ಎಂದೂ ಹೇಳಿದರು.
ಮುಖ್ಯಮಂತ್ರಿ ಹುದ್ದೆಗೆ ನಿಮ್ಮನ್ನೇ ತರುವ ಪ್ರಯತ್ನ ನಡೆದಿದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, `ಕೆಲ ಸಚಿವರು, ಶಾಸಕರು ಸದಾನಂದಗೌಡ ಅವರನ್ನು ಮುಖ್ಯಮಂತ್ರಿ ಹುದ್ದೆಯಿಂದ ಬದಲಾವಣೆ ಮಾಡಲಾಗುತ್ತದೆ ಎಂಬ ಭಾವನೆಯಿಂದ ತಮ್ಮನ್ನು ಭೇಟಿಯಾಗಿ ಚರ್ಚೆ ನಡೆಸುತ್ತಿದ್ದಾರೆ. ನೀವೇ ಮುಖ್ಯಮಂತ್ರಿಯಾಗಿ ಎಂದೂ ಹೇಳುತ್ತಿದ್ದಾರೆ~ ಎಂದು ಅವರು ತಿಳಿಸಿದರು.
`ನಿಮಗೇ ಅವಕಾಶ ಸಿಕ್ಕರೆ~ ಎಂಬ ಪ್ರಶ್ನೆಗೆ ನಗುತ್ತಲೇ ಉತ್ತರಿಸಿದ ಅವರು, `ಸಿಎಂ ಆಗುವ ಅವಕಾಶ ಸಿಕ್ಕರೆ ಯಾರು ಬಿಡುತ್ತಾರೆ ಹೇಳಿ~ ಎಂದು ಪತ್ರಕರ್ತರಿಗೇ ಮರುಪ್ರಶ್ನೆ ಹಾಕಿದರು. ಶಾಸಕಾಂಗ ಪಕ್ಷದ ಸಭೆ ಹಾಗೂ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಈಗಾಗಲೇ ಪಕ್ಷದ ವರಿಷ್ಠರಿಗೆ ಅಭಿಪ್ರಾಯ ತಿಳಿಸಲಾಗಿದೆ. ಈ ಕುರಿತು ವರಿಷ್ಠರೇ ನಿರ್ಧಾರ ಕೈಗೊಳ್ಳುತ್ತಾರೆ ಎಂದು ಹೇಳಿದರು.
ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಡಿ.ಎಚ್. ಶಂಕರಮೂರ್ತಿ ಅವರನ್ನು ಅವಿರೋಧವಾಗಿ ಪುನರಾಯ್ಕೆ ಮಾಡಲು ಚರ್ಚೆಗಳು ನಡೆಯುತ್ತಿವೆ. ಈಗಾಗಲೇ ಈ ಸಂಬಂಧ ಎಚ್.ಡಿ. ಕುಮಾರಸ್ವಾಮಿ ಅವರನ್ನು ಭೇಟಿ ಮಾಡಲಾಗಿದೆ. ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ಅವರು ದೆಹಲಿಯಿಂದ ಹಿಂತಿರುಗಿದ ಕೂಡಲೇ ಅವರೊಂದಿಗೆ ಚರ್ಚಿಸಲಾಗುವುದು ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.