ADVERTISEMENT

‘ಕಾಂಗ್ರೆಸ್ ಮುಕ್ತ ಭಾರತ ಬಿಜೆಪಿ ಗುರಿ’

ಬಿಜೆಪಿ ಕಾರ್ಯಾಗಾರದಲ್ಲಿ ಪ್ರಹ್ಲಾದ ಜೋಷಿ ಅಭಿಮತ

​ಪ್ರಜಾವಾಣಿ ವಾರ್ತೆ
Published 1 ಜನವರಿ 2014, 6:36 IST
Last Updated 1 ಜನವರಿ 2014, 6:36 IST

ಶಿವಮೊಗ್ಗ: ಕಾಂಗ್ರೆಸ್ ಮುಕ್ತ ಭಾರತ ನಿರ್ಮಾಣದ ಗುರಿ ಬಿಜೆಪಿಯ ಮೂಲಮಂತ್ರ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಪ್ರಹ್ಲಾದ್ ಜೋಷಿ ಕರೆ ನೀಡಿದರು. 

ನಗರದ ಶುಭಮಂಗಳ ಸಮುದಾಯ ಭವನದಲ್ಲಿ ಮಂಗಳವಾರ ಬಿಜೆಪಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಶಕ್ತಿ ಕೇಂದ್ರದ ಪ್ರಮುಖರ ಕಾರ್ಯಾಗಾರ ಉದ್ಘಾಟಿಸಿ ಅವರು, ಮಾತನಾಡಿದರು.

ಕಾಂಗ್ರೆಸ್ ಮುಕ್ತ ಭಾರತಕ್ಕೆ ಪ್ರತಿಯೊಬ್ಬರು ಕೈಜೋಡಿಸಬೇಕಿದೆ. ಅಂದರೆ, ಭಯೋತ್ಪಾದನೆ, ಭ್ರಷ್ಟಾಚಾರ, ನಿರದ್ಯೋಗ, ಬಡತನ ರಹಿತ ಸಮಾಜ ನಿರ್ಮಾಣಕ್ಕೆ ಬಿಜೆಪಿ ಕಾರ್ಯಕರ್ತರು ಪಣತೊಡಬೇಕಿದೆ ಎಂದು ತಿಳಿಸಿದರು.

ವಿಧಾನಸಭೆ ಚುನಾವಣೆಯಲ್ಲಿ ಆದ ಸೋಲನ್ನು ಮರೆತು, ಮುಂಬರುವ ಲೋಕಸಭಾ ಚುನಾವಣೆಗೆ ಪಕ್ಷ ಸಂಘಟಿಸುವುದಕ್ಕೆ ಕಾರ್ಯಕರ್ತರು ತಯಾರಾಗಬೇಕಿದೆ ಎಂದರು.

ಮುಂದಿನ ಏಪ್ರಿಲ್ ನಲ್ಲಿ ಚುನಾವಣೆಗಳು ನಡೆಯುವ ಸಾಧ್ಯತೆಗಳಿದ್ದು, ಕಾರ್ಯಕರ್ತರು ಸಜ್ಜುಗೊಳ್ಳಬೇಕಿದೆ. ಪ್ರತಿಯೊಬ್ಬ ಕಾರ್ಯಕರ್ತ, ಮನೆ–ಮನೆಗೆ ತೆರಳಿ ಕೇಂದ್ರ ಸರ್ಕಾರದ ವೈಫಲ್ಯ ತಿಳಿಸಿ ಮತದಾರರನ್ನು ಸೆಳೆಯುವ ಪ್ರಯತ್ನ ಮೊದಲಾಗಬೇಕಿದೆ ಎಂದರು.

ಭಿನ್ನಾಭಿಪ್ರಾಯಗಳನ್ನು ಮರೆತು, ಮತ್ತೆ ಒಟ್ಟಾಗಿ ಮೋದಿ ಪ್ರಧಾನಿ ಮಾಡಬೇಕಾದ ಅಗತ್ಯತೆ ಇದೆ. ಹಿಂದೆ ನಡೆದ ಹಲವು ರಾಜಕೀಯ ಗೊಂದಲಗಳಿಂದಾಗಿ ಸಾಕಷ್ಟು ಕಳೆದುಕೊಂಡಿದ್ದು, ಮುಂದಿನ ದಿನಗಳಲ್ಲಿ ಇಂಥ ಘಟನೆಗಳು ನಡೆಯದ ರೀತಿಯಲ್ಲಿ ಸನ್ನದ್ಧಗೊಳ್ಳಬೇಕಿದೆ ಎಂದು ಸೂಚಿಸಿದರು.

ಜಿಲ್ಲಾ ಘಟಕದ ಅಧ್ಯಕ್ಷ ಆಯನೂರು ಮಂಜುನಾಥ ಮಾತನಾಡಿ, ದೇಶದ ಭವಿಷ್ಯ ರೂಪಿಸುವ ಹಾಗೂ ಆಲೋಚನೆ ಮಾಡುವ ಪ್ರಧಾನಿ ಬೇಕು. ಅಂತಹ ಗುಣ ನರೇಂದ್ರ ಮೋದಿ ಅವರಲ್ಲಿದೆ ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯರಾದ ಎಂ.ಬಿ. ಭಾನುಪ್ರಕಾಶ್, ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಸೋಮಣ್ಣ ಬೇವಿನಮರದ, ಮಾಜಿ ಶಾಸಕರಾದ ಕೆ.ಜಿ. ಕುಮಾರಸ್ವಾಮಿ, ಆರಗ ಜ್ಞಾನೇಂದ್ರ, ಮುಖಂಡರಾದ ದೇವದಾಸ್ ನಾಯಕ್, ಗಿರೀಶ್ ಪಟೇಲ್, ಗುರುರಾಜ್ ಉಪ್ಪುಂದ, ಪಾಣಿ ರಾಜಪ್ಪ, ಶಿವಪ್ರಸಾದ್, ಆರ್.ಎಸ್. ಶೋಭಾ, ಪರಂಧಾಮ ರೆಡ್ಡಿ ಮತ್ತಿತರರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.