ADVERTISEMENT

‘ಮಾದಿಗ ಸಮುದಾಯಕ್ಕೆ ಒಳಮೀಸಲಾತಿ ಕಲ್ಪಿಸಿ’

​ಪ್ರಜಾವಾಣಿ ವಾರ್ತೆ
Published 5 ಡಿಸೆಂಬರ್ 2013, 6:34 IST
Last Updated 5 ಡಿಸೆಂಬರ್ 2013, 6:34 IST

ಶಿವಮೊಗ್ಗ: ನ್ಯಾಯಮೂರ್ತಿ ಎ.ಜೆ. ಸದಾಶಿವ ಆಯೋಗದ ಶಿಫಾರಸ್ಸಿನಂತೆ ಮಾದಿಗ ಸಮುದಾಯಕ್ಕೆ ಒಳ ಮೀಸಲಾತಿ ಕಲ್ಪಿಸಬೇಕೆಂದು ಒತ್ತಾಯಿಸಿ ಮಾದಿಗ ಮೀಸಲಾತಿ ಹೋರಾಟ ಸಮಿತಿ ಬುಧವಾರ ಜಿಲ್ಲಾಧಿಕಾರಿ ಕಚೇರಿ ಎದುರು ಅರೆಬೆತ್ತಲೆ ಪ್ರತಿಭಟನೆ ನಡೆಸಿತು.

ಸದಾಶಿವ ಆಯೋಗ ಸರ್ಕಾರಕ್ಕೆ ವರದಿ ಸಲ್ಲಿಸಿ ಈಗಾಗಲೇ ವರ್ಷ ಕಳೆದಿದೆ. ಈ ವರದಿಯಲ್ಲಿ ಮಾದಿಗ ಸಮಾಜಕ್ಕೆ ಅಥವಾ ಇತರ ಸಮಾಜಕ್ಕೆ ಮೀಸಲಾತಿಯಲ್ಲಿ ಆಗುತ್ತಿದ್ದ ತಾರತಮ್ಯ ಪರಿಶಿಷ್ಟ ಜಾತಿಗಳಲ್ಲಿನ ಇತರೆ ಎಲ್ಲ ಜಾತಿಗಳಿಗಿಂತ ಹೆಚ್ಚಾಗಿದೆ ಎಂದು ತಿಳಿಸಿದೆ.

ಹಾಗೆಯೇ ಶೇ. 6ರಷ್ಟು ಒಳ ಮೀಸಲಾತಿ ಕಲ್ಪಿಸುವಂತೆ ವರದಿಯಲ್ಲಿ ಶಿಫಾರಸು ಮಾಡಲಾಗಿದೆ. ಇದುವರೆಗೂ ಈ ಬಗ್ಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.  ಈ ಹಿಂದಿನ ಸರ್ಕಾರ, ವರದಿಯಲ್ಲಿನ ಶಿಫಾರಸು ಅನುಷ್ಠಾನಕ್ಕೆ ಯಾವುದೇ ಕ್ರಮಕೈಗೊಳ್ಳದೆ, ನಿರ್ಲಕ್ಷ್ಯವಹಿಸಿತ್ತು. ಈ ಕೂಡಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮಿತಿಯ ಶಿಫಾರಸು ಜಾರಿಗೊಳಿಸಬೇಕು. ಈ ಮೂಲಕ ಮಾದಿಗ ಸಮುದಾಯಕ್ಕೆ ಆಗಿರುವ ಅನ್ಯಾಯ ಸರಿಪಡಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಪ್ರತಿಭಟನೆಯ ನೇತೃತ್ವವನ್ನು ಸಮಿತಿಯ ಜಿಲ್ಲಾ ಗೌರವಾಧ್ಯಕ್ಷ ಬಿ.ಎ.ಭಾನುಪ್ರಸಾದ್, ಜಿಲ್ಲಾಧ್ಯಕ್ಷ ಗಂಗಾಧರ್, ಪ್ರಧಾನ ಕಾರ್ಯದರ್ಶಿ ಆರ್.ರಂಗನಾಥ್, ಮುಖಂಡರಾದ ರಾಮಚಂದ್ರ, ವೆಂಕಟೇಶ್, ಯಶವಂತ್, ವೆಂಕಟೇಶ್, ಹರೀಶ್‌ಬಾಬು, ಸೆಂದಿಲ್ ಕುಮಾರ್, ರಾಮು ಮತ್ತಿತರರು ವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.