ADVERTISEMENT

ಹುಣಸೋಡು ಜಿಲೆಟಿನ್ ಸ್ಫೋಟ ಪ್ರಕರಣ: ಮೂವರು ವಶಕ್ಕೆ, ಬಾಂಬ್ ನಿಷ್ಕ್ರಿಯ ದಳ ಭೇಟಿ

​ಪ್ರಜಾವಾಣಿ ವಾರ್ತೆ
Published 22 ಜನವರಿ 2021, 6:35 IST
Last Updated 22 ಜನವರಿ 2021, 6:35 IST
   

ಶಿವಮೊಗ್ಗ: ಹುಣಸೋಡು ಬಳಿಯ ಕ್ರಶರ್‌ನಲ್ಲಿ ಜಿಲೆಟಿನ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ವಶಕ್ಕೆ ಪಡೆದಿರುವುದಾಗಿ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಂ ಶಾಂತರಾಜು ಪ್ರಜಾವಾಣಿಗೆ ತಿಳಿಸಿದ್ದಾರೆ.

ಕಲ್ಲು ಗಣಿಗಾರಿಕೆಗೆ ಭೂಮಿ ನೀಡಿದ್ದ ಅವಿನಾಶ್ ಕುಲಕರ್ಣಿ, ನಿರ್ವಹಣೆ ಮಾಡುತ್ತಿದ್ದ ನರಸಿಂಹ ಗಂಧದಮನೆ, ಸುಧಾಕರ್ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

ಬೆಳಿಗ್ಗೆ 11ರ ಸುಮಾರಿಗೆ ಘಟನಾ ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳ, ಗಣಿ ಮತ್ತು ಭೂ ವಿಜ್ಞಾನ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಸಜೀವ ಜಿಲೆಟಿನ್ ಇರುವ ಶಂಕೆ ಹಿನ್ನೆಲೆ ಪರಿಶೀಲನೆ ನಡೆಸಲಾಗುತ್ತಿದೆ. ಪರಿಶೀಲನೆ ಬಳಿಕ ಮೃತರ ಸಂಖ್ಯೆ ಬಗ್ಗೆ ಖಚಿತ ಮಾಹಿತಿ ಲಭ್ಯವಾಗಲಿದೆ.

ADVERTISEMENT

ಈ ಮಧ್ಯೆ, ಸ್ಫೋಟದಿಂದ ಸಿಡಿದು ಹೊರಬಿದ್ದಿದ್ದ ಎರಡು ಮೃತದೇಹಗಳನ್ನು ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ.

ಹುಣಸೋಡು, ಕಲ್ಲುಗಂಗೂರು, ಅಬ್ಬಲೆಗೆರೆ ಮತ್ತು ಗೆಜ್ಜೇನಹಳ್ಳಿಗಳ ಸುತ್ತಮುತ್ತ 100ಕ್ಕೂ ಹೆಚ್ಚು ಕ್ರಶರ್‌ಗಳಿದ್ದು ಎಲ್ಲ ಗಣಿಗಾರಿಕೆಗಳನ್ನು ಸ್ಥಗಿತಗೊಳಿಸಲಾಗಿದೆ. ಘಟನಾ ಸ್ಥಳ ಸೇರಿ ಗಣಿಗಾರಿಕೆ ಪ್ರದೇಶಕ್ಕೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿದ್ದು, ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

ಘಟನಾ ಸ್ಥಳಕ್ಕೆ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ, ಸಂಸದ ಬಿ.ವೈ. ರಾಘವೇಂದ್ರ, ವಿಧಾನಪರಿಷತ್ ಸದಸ್ಯ ಆಯನೂರು ಮಂಜುನಾಥ್ ಭೇಟಿ ನೀಡಿದ್ದು, ಸ್ಥಳದಲ್ಲೇ ಮೊಕ್ಕಾ ಹೂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.