ADVERTISEMENT

₹ 236 ಕೋಟಿ ವೆಚ್ಚದ ಕಾಮಗಾರಿ ಉದ್ಘಾಟನೆ

6ಕ್ಕೆ ಸಿ.ಎಂ: ₹ 174.66 ಕೋಟಿ ವೆಚ್ಚದ ಕಾಮಗಾರಿಗಳಿಗೆ ಭೂಮಿಪೂಜೆ

​ಪ್ರಜಾವಾಣಿ ವಾರ್ತೆ
Published 4 ಜನವರಿ 2018, 7:08 IST
Last Updated 4 ಜನವರಿ 2018, 7:08 IST

ಶಿವಮೊಗ್ಗ: ಮುಖ್ಯಮಂತ್ರಿ ಸಿದ್ದರಾಮಯ್ಯ ಜ. 6ಕ್ಕೆ ಶಿವಮೊಗ್ಗಕ್ಕೆ ಬರುತ್ತಿದ್ದಾರೆ. ಅಂದು ವಿವಿಧ ಕಾಮಗಾರಿಗಳ ಉದ್ಘಾಟನೆ, ಹಲವು ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ಅಂದು ಸಂಜೆ 4.30ಕ್ಕೆ ನೆಹರೂ ಕ್ರೀಡಾಂಗಣದ ಆವರಣದಲ್ಲಿ ನಡೆಯಲಿರುವ ಸಮಾರಂಭದಲ್ಲಿ ₹ 236.24 ಕೋಟಿ ವೆಚ್ಚದಲ್ಲಿ ಪೂರ್ಣಗೊಂಡಿರುವ ವಿವಿಧ ಕಾಮಗಾರಿಗಳ ಲೋಕಾರ್ಪಣೆ, ಅನುಮೋದನೆಯಾಗಿರುವ ₹ 174.66 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಲಿದ್ದಾರೆ ಎಂದು ಶಾಸಕ ಕೆ.ಬಿ. ಪ್ರಸನ್ನಕುಮಾರ್ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಲೋಕಾರ್ಪಣೆಯ ಕಟ್ಟಡಗಳು: ನೂತನ ಜಿಲ್ಲಾ ಕಾರಾಗೃಹ, ಕೋಟೆ ಪೊಲೀಸ್ ಠಾಣೆಯ ನೂತನ ಕಟ್ಟಡ, ವಾಜಪೇಯಿ →ಬಡಾವಣೆಯಲ್ಲಿನ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿಲಯ, ತುಂಗಾ ಏತ ನೀರಾವರಿ →ಯೋಜನೆ ಸೇರಿದಂತೆ ಹಲವು ಯೋಜನೆಗಳನ್ನು ಲೋಕಾರ್ಪಣೆ ಮಾಡಲಿದ್ದಾರೆ.

ADVERTISEMENT

ಶಂಕುಸ್ಥಾಪನೆ: ₹ 3 ಕೋಟಿ ವೆಚ್ಚದ ದೇವರಾಜ ಅರಸು ಭವನ, ₹ 1.50 ಕೋಟಿ ವೆಚ್ಚದ ತುಂಗಾ ನದಿ ಪ್ರವಾಹ ಸಂರಕ್ಷಣಾ ಗೋಡೆ, ₹ 4.85 ಕೋಟಿ ವೆಚ್ಚದಲ್ಲಿ ನೆಹರೂ ಕ್ರೀಡಾಂಗಣ ಅಭಿವೃದ್ಧಿ, ₹ 2.95 ಕೋಟಿ ವೆಚ್ಚದ ನವುಲೆ ಬಾಲಕಿಯರ ವಿದ್ಯಾರ್ಥಿನಿಲಯ, ₹ 6.13 ಕೋಟಿ ವೆಚ್ಚದ ನಗರೋತ್ಥಾನ ಮೂರನೇ ಹಂತದ 133 ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

₹ 8.50 ಕೋಟಿ ವೆಚ್ಚದಲ್ಲಿ ಪಾಲಿಕೆ ವ್ಯಾಪ್ತಿಯ 9 ಕೊಳಚೆ ಪ್ರದೇಶಗಳಲ್ಲಿ 1,590 ಮನೆಗಳ ನಿರ್ಮಾಣ, ₹ 4.52 ಕೋಟಿ ವೆಚ್ಚದಲ್ಲಿ ಪೊಲೀಸ್ ಸಿಬ್ಬಂದಿ ಹಾಗೂ ಅಧಿಕಾರಿಗಳ ವಸತಿ ಗೃಹ ನಿರ್ಮಾಣ, ₹ 7.50 ಕೋಟಿ ವೆಚ್ಚದಲ್ಲಿ ಮಾಚೇನಹಳ್ಳಿ ಕೈಗಾರಿಕಾ ಪ್ರದೇಶ ಹಾಗೂ ಆಟೊಕಾಂಪ್ಲೆಕ್ಸ್ ರಸ್ತೆ ಮತ್ತು ಚರಂಡಿ ನಿರ್ಮಾಣ, ₹ 5 ಕೋಟಿ ವೆಚ್ಚದಲ್ಲಿ ವೈದ್ಯಕೀಯ ಕಾಲೇಜಿನ ಆವರಣದಲ್ಲಿ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯ ಹಾಸ್ಟೆಲ್‌, ₹ 6.50 ಕೋಟಿ ವೆಚ್ಚದಲ್ಲಿ ಸೋಮಿನಕೊಪ್ಪ ಕೆರೆ ಅಭಿವೃದ್ಧಿ ಸೇರಿದಂತೆ ಒಟ್ಟು ₹ 236.24 ಕೋಟಿ ವೆಚ್ಚದ ಕಾಮಗಾರಿಗಳಿಗೆ ಅಡಿಗಲ್ಲು ಹಾಕಲಿದ್ದಾರೆ ಎಂದು ವಿವರ ನೀಡಿದರು.

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತೀ.ನಾ. ಶ್ರೀನಿವಾಸ್, ‘ಸೂಡಾ’ ಅಧ್ಯಕ್ಷ ಇಸ್ಮಾಯಿಲ್‌ ಖಾನ್, ಜೀವ ವೈವಿಧ್ಯ ಮಂಡಳಿ ಅಧ್ಯಕ್ಷ ಎಸ್.ಪಿ. ಶೇಷಾದ್ರಿ, ‘ಸೂಡಾ’ ಮಾಜಿ ಅಧ್ಯಕ್ಷ ಎನ್. ರಮೇಶ್, ನೈರುತ್ಯ ಪದವೀಧರರ ಕ್ಷೇತ್ರದ ಅಭ್ಯರ್ಥಿ ಎಸ್.ಪಿ. ದಿನೇಶ್, ಪಾಲಿಕೆ ಸದಸ್ಯ ಪಂಡಿತ್ ವಿ. ವಿಶ್ವನಾಥ್, ವಿಜಯಲಕ್ಷ್ಮಿ ಪಾಟೀಲ್, ದೀಪಕ್ ಸಿಂಗ್, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಎಸ್.ಕೆ. ಶಿವಾನಂದ್‌, ನಾಗರಾಜ್ ಉಪಸ್ಥಿತರಿದ್ದರು.

ತುಂಗಾ ಏತ ನೀರಾವರಿ ಕಾಂಗ್ರೆಸ್ ಸಾಧನೆ

₹ 87 ಕೋಟಿ ವೆಚ್ಚದ ತುಂಗಾ ಏತ ನೀರಾವರಿ ಯೋಜನೆಗೆ 2013ರಲ್ಲಿ ಟೆಂಡರ್ ಕರೆಯಲಾಗಿತ್ತು. 2014ರಲ್ಲಿ ಕಾಮಗಾರಿ ಆರಂಭವಾಯಿತು. ಈ ಯೋಜನೆ ಪೂರ್ಣಗೊಳ್ಳಲು ಕಾಂಗ್ರೆಸ್ ಸರ್ಕಾರ ಕಾರಣ. ಆದರೆ, ಬಿಜೆಪಿ ಹಾಗೂ ಜೆಡಿಎಸ್ ತಮ್ಮಿಂದ ಈ ಯೋಜನೆ ಎಂದು ಹೇಳುತ್ತಿರುವುದು ಹಾಸ್ಯಾಸ್ಪದ ಎಂದು ವಿಧಾನ ಪರಿಷತ್ ಸದಸ್ಯ ಆರ್. ಪ್ರಸನ್ನಕುಮಾರ್‌ ಕುಟುಕಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.