ADVERTISEMENT

‘ಸರ್ಕಾರದ ಯೋಜನೆ ಯಶಸ್ಸಿಗೆ ಒಗ್ಗಟ್ಟು ಅಗತ್ಯ’

​ಪ್ರಜಾವಾಣಿ ವಾರ್ತೆ
Published 7 ಜನವರಿ 2018, 6:02 IST
Last Updated 7 ಜನವರಿ 2018, 6:02 IST

ಹೊಳೆಹೊನ್ನೂರು: ಸರ್ಕಾರ ಹಮ್ಮಿಕೊಳ್ಳುವ ಯಾವುದೇ ಸಮುದಾಯಾಧಾರಿತ ಕಾರ್ಯಕ್ರಮ ಯಶಸ್ವಿ ಆಗಬೇಕೆಂದರೆ  ಸ್ಥಳೀಯ ಸಂಘ ಸಂಸ್ಥೆಗಳು, ಯುವ ಮಂಡಳಿಗಳು ಮತ್ತು ದಾನಿಗಳು ಕೈಜೋಡಿಸಬೇಕು ಎಂದು  ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಜಿಲ್ಲಾ ಉಪ ನಿರ್ದೇಶಕರಾದ ಶೇಷಪ್ಪ ಹೇಳಿದರು.

ಅರಹತೊಳಲು ಗ್ರಾಮ ಪಂಚಾಯ್ತಿ ಆವರಣದಲ್ಲಿ ಅಂಗನವಾಡಿ ಮಕ್ಕಳಿಗೆ ಸಮವಸ್ತ್ರ ವಿತರಿಸಿ ಮಾತನಾಡಿದರು. ಶಿಕ್ಷಣ ವ್ಯಾಪಾರೀಕರಣವಾಗಿದೆ. ಸರ್ಕಾರಿ ಸಂಸ್ಥೆಗಳಲ್ಲಿ ಕಲಿಯುವ ಮಕ್ಕಳ ಸಂಖ್ಯೆ ಕಡಿಮೆಯಾಗುತ್ತಿದೆ. ಖಾಸಗಿ ಶಿಕ್ಷಣ ಶಾಲೆಗಳಿಗೆ ಹೋಗುವವರ ಸಂಖ್ಯೆ ಜಾಸ್ತಿಯಾಗಿದೆ. ಅವರಿಗೆ ಪೈಪೋಟಿ ನೀಡುವಂತೆ ಮಕ್ಕಳನ್ನು ತಯಾರು ಮಾಡಬೇಕಾದ ಅನಿವಾರ್ಯತೆ ಇದೆ ಎಂದು ಹೇಳಿದರು.

ಶಿವಮೊಗ್ಗ ಜಿಲ್ಲಾ ಪಂಚಾಯ್ತಿ ಸ್ಥಾಯಿ ಸಮಿತಿ ಅಧ್ಯಕ್ಷೆ ರೇಖಾ ಉಮೇಶ್ ಮಾತನಾಡಿ, ಗ್ರಾಮ ಪಂಚಾಯ್ತಿಗಳು ತಮಗೆ ಇರುವ ಅಲ್ಪ ಆದಾಯದಲ್ಲಿ ಈ ಪ್ರಕಾರದ ಶಿಕ್ಷಣವನ್ನು ಉತ್ತೇಜಿಸುವ ಕಾರ್ಯಕ್ರಮಗಳನ್ನು ನಡೆಸುತ್ತಿರುವುದು ಶ್ಲಾಘನೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ನಾಲ್ಕು ಅಂಗನವಾಡಿಗಳ 116 ಮಕ್ಕಳಿಗೆ ಗ್ರಾಮ ಪಂಚಾಯ್ತಿಯಿಂದ ಉಚಿತ ಸಮವಸ್ತ್ರ ವಿತರಣೆ ಮಾಡಲಾಯಿತು.

ADVERTISEMENT

ಅಂಜಲಮ್ಮ ಅಧ್ಯಕ್ಷತೆಯನ್ನು ವಹಿಸಿದ್ದರು. ತಾಲ್ಲೂಕು ಪಂಚಾಯ್ತಿ ಸದಸ್ಯೆ ಆಶಾ ಶ್ರೀಧರ್, ಚಂದ್ರಪ್ಪ, ಎನ್.ಸಂಗನಾಥ್, ರೇಖಮ್ಮ, ಪುರಲೆ ಚಂದ್ರಪ್ಪ, ಪಿಡಿಒ ಮುಕುಂದ್, ನಾಲ್ಕೂ ಅಂಗನವಾಡಿಯ ಕಾರ್ಯಕರ್ತೆಯರು ಮತ್ತು ಸಹಾಯಕಿಯರು, ಮಕ್ಕಳು, ಪೋಷಕರು, ಗ್ರಾಮ ಪಂಚಾಯ್ತಿ ಸಿಬ್ಬಂದಿ ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು. ಗ್ರಾಮ ಪಂಚಾಯ್ತಿ ಸದಸ್ಯ ಆರ್.ರಾಜಪ್ಪ ಕಾರ್ಯಕ್ರಮ ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.