ಶಿವಮೊಗ್ಗ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜೆಡಿಯು ಪಕ್ಷದಿಂದ 100 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುವುದು ಎಂದು ಜೆಡಿಯು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಮಹಿಮ ಪಟೇಲ್ ಹೇಳಿದರು.
‘ಚುನಾವಣೆಯಲ್ಲಿ ಸ್ಪರ್ಧಿಸಲು ಜೆಡಿಯುನಿಂದ ಈಗಾಗಲೇ 20 ಅಭ್ಯರ್ಥಿಗಳನ್ನು ಗುರುತಿಸಲಾಗಿದೆ. ಸಾಗರ, ಸೊರಬ ಮತ್ತು ಶಿವಮೊಗ್ಗ ನಗರ ಕ್ಷೇತ್ರದಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಉದ್ದೇಶಿಸಲಾಗಿದ್ದು, ಶೂನ್ಯದಿಂದ ಹೊರಟಿರುವ ತಮಗೆ ಈ ಬಾರಿ ಎಷ್ಟು ಸೀಟು ಲಭಿಸಿದರೂ ಅದು ಲಾಭವೇ. ರಾಜ್ಯದಲ್ಲಿ ಯಾವುದೇ ಸರ್ಕಾರಕ್ಕೆ ಬೆಂಬಲ ನೀಡುವ ಪರಿಸ್ಥಿತಿ ಎದುರಾದರೆ ಆದ್ಯತೆ ಮೇರೆಗೆ ಮೈತ್ರಿ ಮಾಡಿಕೊಳ್ಳಲಿದ್ದೇವೆ’ ಎಂದು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
‘ಚುನಾವಣಾ ಆಯೋಗ ನಿಗದಿಪಡಿಸಿದ ₹ 28 ಲಕ್ಷ ವೆಚ್ಚದ ಮಿತಿಯಲ್ಲಿ ಚುನಾವಣೆ ನಡೆಸುತ್ತೇವೆ. ಹಣ, ಹೆಂಡ ಹಂಚಿ ಚುನಾವಣೆ ಮಾಡುವುದಕ್ಕೆ ನಮ್ಮ ವಿರೋಧವಿದ್ದು, ಕೆಲಸ ಮಾಡುವ ಭರವಸೆ ಮೂಡಿಸಿ ಜನರ ಮತ ಪಡೆಯುತ್ತೇವೆ ಎಂದರು.
‘ಪಕ್ಷದ ರಾಷ್ಟ್ರೀಯ ಅಧ್ಯಕ್ಷ ನಿತೀಶ್ ಕುಮಾರ್ ಅವರ ಸೂಚನೆ ಮೇರೆಗೆ ರಾಜ್ಯದಲ್ಲಿ ಜೆಡಿಯು ಸಂಘಟನೆಯ ಜವಾಬ್ದಾರಿ ಹೊತ್ತಿದ್ದೇನೆ. ರಾಜ್ಯದಲ್ಲಿ
ಪಕ್ಷ ಬೆಳೆಸಲು ಸಂಪೂರ್ಣ ಸ್ವಾತಂತ್ರ್ಯವನ್ನು ಅವರು ನೀಡಿರುವುದರಿಂದ ಮೂಲ ಜನತಾ ಪಕ್ಷದ ಆದರ್ಶಗಳನ್ನಿಟ್ಟುಕೊಂಡು ಪಕ್ಷ ಸಂಘಟನೆ ಮಾಡುತ್ತೇನೆ’ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಪಕ್ಷದ ಜಿಲ್ಲಾ ಸಂಚಾಲಕ ಸೋಮಶೇಖರ್, ಪ್ರಮುಖರಾದ ಜಯಪ್ರಕಾಶ್, ತ್ಯಾಜವಳ್ಳಿ ಮಂಜುನಾಥ್, ಲೋಕಪಾಲ್ ಜೈನ್, ನವೀನ ದಳವಾಯಿ ಉಪಸ್ಥಿತರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.