ಶಿವಮೊಗ್ಗ: ಬೆಂಗಳೂರಿನಲ್ಲಿ ನಡೆದ ಬಿಜೆಪಿ ಕಾರ್ಯಕರ್ತ ಸಂತೋಷ್ ಹತ್ಯೆ ಖಂಡಿಸಿ ಬಿಜೆಪಿ ಜಿಲ್ಲಾ ಘಟಕದ ಸದಸ್ಯರು ನಗರದ ಗೋಪಿ ವೃತ್ತದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.
‘ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ನಿರಂತರವಾಗಿ ಹಿಂದೂಪರ ಸಂಘಟನೆ ಕಾರ್ಯಕರ್ತರು ಮತ್ತು ಬಿಜೆಪಿ ಕಾರ್ಯಕರ್ತರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸ ಲಾಗುತ್ತಿದೆ. ರಾಜಕೀಯ ಕಾರಣಗಳಿಂದ ಹತ್ಯೆ ನಡೆಯುತ್ತಿದ್ದು, ರಾಜ್ಯ ಕಾಂಗ್ರೆಸ್ ಸರ್ಕಾರ ನಿರ್ಲಕ್ಷ್ಯ ವಹಿಸಿದೆ. ಗೃಹ ಸಚಿವರು ತಮ್ಮ ಜವಾಬ್ದಾರಿ ನಿಭಾಯಿಸುವಲ್ಲಿ ವಿಫಲರಾಗಿದ್ದಾರೆ’ ಎಂದು ಆರೋಪಿಸಿದರು.
ಜ.31ರಂದು ಬೆಂಗಳೂರಿನ ಜೆಸಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಚೆನ್ನಪ್ಪ ಗಾರ್ಡನ್ ಬಳಿ ಸಂತೋಷ್ ಎಂಬ ಯುವಕನನ್ನು ದುಷ್ಕರ್ಮಿಗಳು ಇರಿದು ಹತ್ಯೆ ಮಾಡಿದ್ದಾರೆ. ಕಳೆದ 3 ವರ್ಷಗಳಲ್ಲಿ 24 ಬಿಜೆಪಿ ಹಾಗೂ ಹಿಂದೂ ಸಂಘಟನೆ ಕಾರ್ಯಕರ್ತರ ಹತ್ಯೆ ನಡೆದಿದೆ. ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾದಳಕ್ಕೆ ವಹಿಸಬೇಕು ಎಂದು ಆಗ್ರಹಿಸಿದರು.
ತಪ್ಪಿತಸ್ಥ ರ ವಿರುದ್ಧ ಕ್ರಮಕ್ಕೆ ಸರ್ಕಾರ ಮುಂದಾಗಬೇಕು. ಸಮಾಜಘಾತುಕ ಶಕ್ತಿಗಳ ಮೇಲೆ ನಿಗಾ ಇಡಬೇಕು. ಮೃತ ಸಂತೋಷ್ ಕುಟುಂಬಕ್ಕೆ ₹ 50 ಲಕ್ಷ ಪರಿಹಾರ, ಕುಟುಂಬದ ಸದಸ್ಯರಲ್ಲಿ ಒಬ್ಬರಿಗೆ ಸರ್ಕಾರಿ ಉದ್ಯೋಗ ನೀಡಬೇಕು ಎಂದು ಆಗ್ರಹಿಸಿದರು.
ಬಿಜೆಪಿ ಜಿಲ್ಲಾ ಅಧ್ಯಕ್ಷ ಎಸ್.ರುದ್ರೇಗೌಡ ಪ್ರತಿಭಟನೆಯ ನೇತೃತ್ವ ವಹಿಸಿದ್ದರು. ಎಸ್.ಎನ್.ಚನ್ನಬಸಪ್ಪ, ಕೆ.ಜಿ.ಕುಮಾರಸ್ವಾಮಿ, ಸಿ.ಎಚ್. ಮಾಲತೇಶ್, ಎನ್.ಜಿ. ನಾಗರಾಜ್, ಎಂ.ಶಂಕರ್, ಸಂತೋಷ್ ಬಳ್ಳೇಕರೆ, ರೇಣುಕಾ ನಾಗರಾಜ್, ಅರ್ಚನಾ ಬಳ್ಳೇಕೆರೆ, ಸುರೇಖಾ ಮುರಳೀಧರ್, ಹಿರಣ್ಣಯ್ಯ, ವಿಶ್ವಾಸ್, ಹೃಷಿಕೇಶ್ ಪೈ, ವಿಕ್ರಂ, ವಿರೂಪಾಕ್ಷಪ್ಪ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.