ADVERTISEMENT

ಶರಾವತಿ ಸಂತ್ರಸ್ತರ ಸಮಸ್ಯೆ ಇತ್ಯರ್ಥಕ್ಕೆ ನೂತನ ಸಮಿತಿ: ಎಚ್. ಹಾಲಪ್ಪ ಹರತಾಳು

​ಪ್ರಜಾವಾಣಿ ವಾರ್ತೆ
Published 1 ಮೇ 2022, 5:29 IST
Last Updated 1 ಮೇ 2022, 5:29 IST
ಎಚ್.ಹಾಲಪ್ಪ ಹರತಾಳು
ಎಚ್.ಹಾಲಪ್ಪ ಹರತಾಳು   

ಹೊಸನಗರ: ಶರಾವತಿ ಮುಳುಗಡೆ ಸಂತ್ರಸ್ತರಿಗೆ ಪುನರ್ವಸತಿ ಸೌಲಭ್ಯಕಲ್ಪಿಸುವ ನಿಟ್ಟಿನಲ್ಲಿ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು, ಕಾಲಮಿತಿಯಲ್ಲಿ ಬಾಕಿ ಇರುವ ಪ್ರಕರಣಗಳನ್ನು ಇತ್ಯರ್ಥಗೊಳಿಸಲಾಗುವುದು ಎಂದು ಶಾಸಕ ಎಚ್. ಹಾಲಪ್ಪ ಹರತಾಳು ಹೇಳಿದರು.

‘ದಶಕಗಳ ಕಾಲದಿಂದಲೂ ಶರಾವತಿಸಂತ್ರಸ್ತರ ಸಮಸ್ಯೆ ಬಗೆಹರಿಯದೇ ನನೆಗುದಿಗೆ ಬಿದ್ದಿದೆ. ಅಂದು ಯೋಜನೆಗಾಗಿ ಭೂಮಿ ಕಳೆದುಕೊಂಡ ಸಂತ್ರಸ್ತರು ಇಂದಿಗೂ ಕಷ್ಟ ಅನುಭವಿಸುತ್ತಿದ್ದಾರೆ. ಇದನ್ನು ಮನಗಂಡಿರುವ ರಾಜ್ಯಸರ್ಕಾರ ಈಗಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ನೂತನ ಸಮಿತಿ ರಚನೆಗೆ ಆದೇಶ ಮಾಡಿದೆ’ ಎಂದು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದ್ದು, 9 ಸದಸ್ಯರನ್ನು ಒಳಗೊಂಡಿರುವ ಈ ಸಮಿತಿಯ ಶರಾವತಿ ಸಂತ್ರಸ್ತರ ಸಮೀಕ್ಷೆ ನಡೆಸಿ, ಪ್ರಕರಣಗಳನ್ನು ವಿಲೇವಾರಿ ಮಾಡುವಲ್ಲಿ ಕಾರ್ಯೋನ್ಮುಖವಾಗಲಿದೆ. ಜಿಲ್ಲೆಯ ಹೊಸನಗರ, ಸಾಗರ, ಸೊರಬ, ಶಿಕಾರಿಪುರ ತಾಲ್ಲೂಕುಗಳ ವ್ಯಾಪ್ತಿಯಲ್ಲಿ ಹೆಚ್ಚಿನ ಸಂತ್ರಸ್ತರಿದ್ದು, ದಾಖಲಾತಿಗಳನ್ನು ಕಲೆಹಾಕಲಾಗುವುದು. ವಿಶೇಷ ಜಿಲ್ಲಾಧಿಕಾರಿ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ, ಸರ್ವೆ ಸೂಪರ್‌ವೈಸರ್‌ ಸೇರಿ ಸಿಬ್ಬಂದಿ ಒಳಗೊಂಡ ತಂಡ ನಿರಂತರವಾಗಿ ಕಾರ್ಯನಿರ್ವಸಹಿಲಿದೆ ಎಂದರು.

ADVERTISEMENT

ಸಂಸದ ಬಿ.ವೈ.ರಾಘವೇಂದ್ರ ಅವರು ಈಗಾಗಲೇ ಕೇಂದ್ರ ಸರ್ಕಾರದ ಗಮನಕ್ಕೂ ಈ ವಿಷಯ ತಂದಿದ್ದಾರೆ. ಸಮಸ್ಯೆಗೆ ತಾರ್ಕಿಕ ಅಂತ್ಯ ಕಾಣಿಸಲು ಎಲ್ಲ ರೀತಿಯ ಪ್ರಯತ್ನ ನಡೆಸಲಾಗುವುದು ಎಂದು ತಿಳಿಸಿದರು.

ಅಂಬೇಡ್ಕರ್ ಅಭಿವೃದ್ಧಿ ನಿಗಮದ ನಿರ್ದೇಶಕ ಎನ್.ಆರ್.ದೇವಾನಂದ, ಎಂಸಿಎ ನಿರ್ದೇಶಕ ಎಚ್.ಆರ್. ತೀರ್ಥೇಶ, ಪ್ರಮುಖರಾದ ಬೆಳೆಗೋಡು ಗಣಪತಿ, ಮನೋಧರ, ಜಯಪ್ರಕಾಶ ಶೆಟ್ಟಿ, ನಿರ್ಮಲ ಗಣೇಶಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.