ಶಿವಮೊಗ್ಗ: ‘ಸರ್ಕಾರಿ ಪ್ರಥಮದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳದೇ ರಾಜ್ಯ ಸರ್ಕಾರ ವಿಳಂಬ ನೀತಿ ಅನುಸರಿಸುತ್ತಿದೆ. ಇದರಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯ ಹಾಳಾಗುತ್ತಿದೆ’ ಎಂದು ಆರೋಪಿಸಿ ಶುಕ್ರವಾರ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
‘ಕಾಲೇಜು ಶಿಕ್ಷಣ ಇಲಾಖೆ ಅಡಿಯ 432 ಪದವಿ ಕಾಲೇಜುಗಳಲ್ಲಿನ 6,000 ಕಾಯಂ ಉಪನ್ಯಾಸಕರಲ್ಲಿ 3,000ಕ್ಕಿಂತ ಹೆಚ್ಚು ಜನ ಈಗಾಗಲೇ ನಿವೃತ್ತಿ ಪಡೆದಿದ್ದಾರೆ. ಅತಿಥಿ ಉಪನ್ಯಾಸಕರ ನೆರವಿನಿಂದ ಪದವಿ ತರಗತಿಗಳು ಜರುಗುತ್ತಿವೆ. ಕಾಲೇಜುಗಳಲ್ಲಿ ಗುಣಮಟ್ಟದ ಶಿಕ್ಷಣ ಪಡೆಯುವುದು ವಿದ್ಯಾರ್ಥಿಗಳ ಹಕ್ಕು. ಆದರೆ ಗುಣಮಟ್ಟದ ಶಿಕ್ಷಣ ನೀಡಬೇಕಾದ ಸರ್ಕಾರ ಕರ್ತವ್ಯಪ್ರಜ್ಞೆ ಮರೆತು ಕಾಯಂ ಉಪನ್ಯಾಸಕರ ನೇಮಕಾತಿಗೆ ಕ್ರಮಕೈಗೊಳ್ಳದಿರುವುದು ಕಳವಳಕಾರಿ ಸಂಗತಿ’ ಎಂದರು.
‘2024–25ನೇ ಸಾಲಿನಲ್ಲಿ ಖಾಲಿ ಇರುವ ಅತಿಥಿ ಉಪನ್ಯಾಸಕರ ನೇಮಕಾತಿಗೆ ಅರ್ಜಿ ಆಹ್ವಾನಿಸಿದ್ದು, 55 ಸಾವಿರ ಅರ್ಜಿ ಸಲ್ಲಿಕೆಯಾಗಿವೆ. ಎಲ್ಲಾ ವಿವಿಗಳಲ್ಲಿ ತರಗತಿ ಪ್ರಾರಂಭವಾಗಿ ಎರಡು ತಿಂಗಳು ಕಳೆದರೂ ಅತಿಥಿ ಉಪನ್ಯಾಸಕರ ನೇಮಕಾತಿಯಾಗಿಲ್ಲ. ತರಗತಿಗಳು ನಡೆಯುತ್ತಿಲ್ಲ. ಹೀಗಾಗಿ ಕೂಡಲೇ ನೇಮಕ ಮಾಡಬೇಕು’ ಎಂದು ಆಗ್ರಹಿಸಿದರು.
ಎಬಿವಿಪಿ ನಗರ ಸಹಕಾರ್ಯದರ್ಶಿ ನಂದನ್ ಎಂ., ಚೇತನ್, ಸಚಿನ್, ಧನಂಜಯ, ವರುಣ್, ಕಾರ್ತಿಕ್, ಪ್ರವೀಣ್ ಇತರರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.