ADVERTISEMENT

ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಕರೆತರಲು ಕ್ರಮ: ಜಿಲ್ಲಾಧಿಕಾರಿ

ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್

​ಪ್ರಜಾವಾಣಿ ವಾರ್ತೆ
Published 6 ಜನವರಿ 2020, 10:46 IST
Last Updated 6 ಜನವರಿ 2020, 10:46 IST
ಕೆ.ಬಿ.ಶಿವಕುಮಾರ್
ಕೆ.ಬಿ.ಶಿವಕುಮಾರ್   

ಶಿವಮೊಗ್ಗ: ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಾಲೆಗೆ ಸೇರಿಸಲು ಶಿಕ್ಷಣ ಇಲಾಖೆಯು ಸಾಧ್ಯವಿರುವ ಎಲ್ಲಾ ತಂತ್ರಗಳನ್ನು ಅನುಸರಿಸುತ್ತಿದೆ. ಆದರೂ ಅನೇಕ ಮಕ್ಕಳು ಶೈಕ್ಷಣಿಕ ಚಟುವಟಿಕೆಯಿಂದ ದೂರ ಉಳಿದಿರುವುದು ಬೇಸರದ ಸಂಗತಿ ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಹೇಳಿದರು.

ಮಲೆನಾಡು ಅಭಿವೃದ್ಧಿ ಪ್ರಾಧಿಕಾರದ ಸಭಾಂಗಣದಲ್ಲಿ ಶನಿವಾರ 6-14 ವರ್ಷದವರೆಗಿನ ಶಾಲೆ ಬಿಟ್ಟ ಮಕ್ಕಳ ಸಮೀಕ್ಷೆಗೆ ಸಂಬಂಧಿಸಿದಂತೆ ಏರ್ಪಡಿಸಿದ್ದ ಸಭೆಯಲ್ಲಿ ಮಾತನಾಡಿದರು.

ಶಿಕ್ಷಣ ಇಲಾಖೆಯು ಉಚಿತ ಸಮವಸ್ತ್ರ, ಉಚಿತ ಪಠ್ಯಪುಸ್ತಕಗಳು, ಮಧ್ಯಾಹ್ನದ ಬಿಸಿಯೂಟ ಇತ್ಯಾದಿ ಸೌಲಭ್ಯಗಳನ್ನು ಒದಗಿಸುತ್ತಿದೆ. ಆದರೂ ಮಕ್ಕಳು ಶಾಲೆಯಿಂದ ದೂರ ಉಳಿಯುತ್ತಿದ್ದಾರೆ. ಜಿಲ್ಲೆಯಲ್ಲಿ ಶಾಲೆ
ಯಿಂದ ಹೊರಗುಳಿದ 68 ಮಕ್ಕಳನ್ನು ಗುರುತಿಸಲಾಗಿದ್ದು, ಅವರನ್ನು ಶಿಕ್ಷಣದ ಮುಖ್ಯವಾಹಿನಿಗೆ ಕರೆತರಲು ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.

ADVERTISEMENT

ಆರ್.ಟಿ.ಇ. ನಿಯಮಗಳ ಪ್ರಕಾರ ಕಡ್ಡಾಯವಾಗಿ ಶಾಲಾ ಮುಖ್ಯಸ್ಥರಿಗೆ ಮಾಹಿತಿ ನೀಡದೆ ಸತತ ಏಳು ದಿನಗಳಿಗಿಂತ ಹೆಚ್ಚು ಕಾಲ ಗೈರುಹಾಜರಾದ ವಿದ್ಯಾರ್ಥಿಗಳ ವಿವರಗಳನ್ನು ವಾರಕ್ಕೊಮ್ಮೆ ಸಂಗ್ರಹಿಸಿ, ನಂತರ ಮಕ್ಕಳ ಪೋಷಕರು ಮಕ್ಕಳಿಗೆ ತಿಳಿವಳಿಕೆ ನೀಡಲಾಗುವುದು ಮತ್ತು ಸಮಾಲೋಚನೆ ನಡೆಸಲಾಗುವುದು. ನಂತರವೂ ಬಾರದ ಮಕ್ಕಳ ಪೋಷಕರಿಗೆ ನೋಟಿಸ್ ನೀಡಲಾಗುವುದು ಎಂದು ತಿಳಿಸಿದರು.

ಜ. 6ರಿಂದ 13ರ ವರೆಗೆ ಜಿಲ್ಲೆಯಾದ್ಯಂತ ಸಮೀಕ್ಷೆ ನಡೆಸಲು ಉದ್ದೇಶಿಸಲಾಗಿದೆ. ವಿಶೇಷವಾಗಿ 25 ತಾಂಡಾಗಳು, 67 ಕೊಳಚೆ ಪ್ರದೇಶಗಳು, 12 ಕಾರ್ಖಾನೆಗಳು, 11 ಗಣಿಗಾರಿಕೆ ನಡೆಯುವ ಸ್ಥಳಗಳು ಸೇರಿ 186 ಪ್ರದೇಶಗಳನ್ನು ಗುರುತಿಸಲಾಗಿದ್ದು, ಈ ಪ್ರದೇಶಗಳ ಸಮೀಕ್ಷೆಗೆ ಹೆಚ್ಚು ಒತ್ತು ನೀಡಲಾಗುತ್ತಿದೆ. ವ್ಯವಸ್ಥಿತ ಸಮೀಕ್ಷೆ ನಡೆಸಲು 1,520 ತಂಡಗಳನ್ನು ರಚಿಸಲಾಗಿದೆ ಎಂದರು.

ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕಎಚ್. ಮಂಜುನಾಥ್, ಶಿಕ್ಷಣಾಧಿಕಾರಿ ಶಂಕರಪ್ಪ, ಡಯಟ್ ಉಪನ್ಯಾಸಕ ವೀರಭದ್ರಪ್ಪ,ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ರೇಖಾ ಜಿ.ಎಂ., ಕುಮಾರ್, ಹರೀಶ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.