ADVERTISEMENT

ಕೃಷಿ ವಿ.ವಿ ಕಾಮಗಾರಿ: ತೆಲಂಗಾಣದ 29 ಜೀತದಾಳುಗಳ ರಕ್ಷಣೆ

​ಪ್ರಜಾವಾಣಿ ವಾರ್ತೆ
Published 16 ಡಿಸೆಂಬರ್ 2020, 19:28 IST
Last Updated 16 ಡಿಸೆಂಬರ್ 2020, 19:28 IST
ಸಾಗರ ತಾಲ್ಲೂಕಿನ ಇರುವಕ್ಕಿ ಗ್ರಾಮದಲ್ಲಿ ಕೃಷಿ ವಿಶ್ವವಿದ್ಯಾಲಯ ಕಾಮಗಾರಿಗೆ ಗುತ್ತಿಗೆದಾರರು ಜೀತದಾಳುಗಳನ್ನಾಗಿ ದುಡಿಸಿಕೊಳ್ಳುತ್ತಿದ್ದ 29 ಕೂಲಿಕಾರರನ್ನು ಅಧಿಕಾರಿಗಳು ರಕ್ಷಿಸಿದರು
ಸಾಗರ ತಾಲ್ಲೂಕಿನ ಇರುವಕ್ಕಿ ಗ್ರಾಮದಲ್ಲಿ ಕೃಷಿ ವಿಶ್ವವಿದ್ಯಾಲಯ ಕಾಮಗಾರಿಗೆ ಗುತ್ತಿಗೆದಾರರು ಜೀತದಾಳುಗಳನ್ನಾಗಿ ದುಡಿಸಿಕೊಳ್ಳುತ್ತಿದ್ದ 29 ಕೂಲಿಕಾರರನ್ನು ಅಧಿಕಾರಿಗಳು ರಕ್ಷಿಸಿದರು   

ಸಾಗರ: ತಾಲ್ಲೂಕಿನ ಇರುವಕ್ಕಿ ಗ್ರಾಮದಲ್ಲಿ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದ ಕಟ್ಟಡ ಕಾಮಗಾರಿಯಲ್ಲಿ ಗುತ್ತಿಗೆದಾರರು ತೆಲಂಗಾಣದ 41 ಕೂಲಿ ಕಾರ್ಮಿಕರನ್ನು ಜೀತದಾಳುಗಳನ್ನಾಗಿ ದುಡಿಸಿಕೊಳ್ಳುತ್ತಿದ್ದಾರೆ ಎಂಬ ಆರೋಪದ ಕಾರಣಕ್ಕೆ ಮಂಗಳವಾರ ರಾತ್ರಿ ದಾಳಿ ನಡೆಸಿದ ತಾಲ್ಲೂಕು ಆಡಳಿತವು 29 ಮಂದಿಯನ್ನು ರಕ್ಷಿಸಿದೆ.

ಕಾರ್ಮಿಕರಿಗೆ ಸಮಾಜ ಕಲ್ಯಾಣ ಇಲಾಖೆಯ ಹಾಸ್ಟೆಲ್‍ನಲ್ಲಿ ಆಶ್ರಯ ಕಲ್ಪಿಸಲಾಗಿದೆ.

ಸ್ವಯಂ ಸೇವಾ ಸಂಘಟನೆಯೊಂದು ನೀಡಿದ ದೂರನ್ನು ಆಧರಿಸಿ ಉಪವಿಭಾಗಾಧಿಕಾರಿ ಪ್ರಸನ್ನ ವಿ. ಸ್ಥಳಕ್ಕೆ ಭೇಟಿ ನೀಡಿದಾಗ ಹುನಿಯಾ ಮತ್ತು ಈಶ್ವರಯ್ಯ ಎಂಬ ಗುತ್ತಿಗೆದಾರರು ದೊಡ್ಡಮೊತ್ತದ ಹಣ ಪಡೆದಿದ್ದರೂ ಕೂಲಿ ಕಾರ್ಮಿಕರಿಗೆ ಕನಿಷ್ಠ ಕೂಲಿಯನ್ನೂ ನೀಡದೆ ಜೀತದಾಳುಗಳನ್ನಾಗಿ ಬಳಸಿಕೊಳ್ಳುತ್ತಿದ್ದರು ಎಂಬ ಅಂಶ ಬೆಳಕಿಗೆ ಬಂದಿದೆ.

ADVERTISEMENT

ರಕ್ಷಿಸಿದ ಕಾರ್ಮಿಕರನ್ನು ತೆಲಂಗಾಣ ರಾಜ್ಯದಲ್ಲಿರುವ ಅವರ ಗ್ರಾಮಗಳಿಗೆ ವಾಪಸ್ ಕಳುಹಿಸುವ ವ್ಯವಸ್ಥೆ ಮಾಡಲಾಗಿದೆ. ಗುತ್ತಿಗೆದಾರರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಉಪವಿಭಾಗಾಧಿಕಾರಿ ಪ್ರಸನ್ನ ವಿ. ತಿಳಿಸಿದ್ದಾರೆ.

ಕಾರ್ಯಾಚರಣೆಯಲ್ಲಿ ತಹಶೀಲ್ದಾರ್ ಚಂದ್ರಶೇಖರ್ ನಾಯ್ಕ್, ಉಪ ತಹಶೀಲ್ದಾರ್ ಕಲ್ಲಪ್ಪ ಮೆಣಸಿನಾಳ್, ಕಂದಾಯ ನಿರೀಕ್ಷಕರಾದ ರಘು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಕುಮಾರ್, ಕಾರ್ಮಿಕ ಇಲಾಖೆ ಹಾಗೂ ಪೊಲೀಸ್‌ ಸಿಬ್ಬಂದಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.