ಹೊಸನಗರ: ‘ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ವಿರುದ್ಧವಾಗಿ ಮಾಜಿ ಶಾಸಕ ಹಾಲಪ್ಪ ಹರತಾಳು ಅವರು ನಿರಾಧಾರ ಆರೋಪ ಮಾಡಿದ್ದಾರೆ. ಇಲ್ಲ ಸಲ್ಲದ ಆರೋಪ ಮಾಡುವುದು ಅವರ ಘನತೆಗೆ ತರವಲ್ಲ’ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಜಿ. ಚಂದ್ರಮೌಳಿ ಗೌಡ ಹೇಳಿದರು.
‘ಬೇಳೂರು ಅವರು ಶಾಸಕರಾಗಿ ಆಯ್ಕೆಯಾದ ದಿನದಿಂದ ಕ್ಷೇತ್ರದ ಅಭಿವೃದ್ಧಿ ವಿಷಯದಲ್ಲಿ ಚಿಂತಿಸಿದ್ದಾರೆ. ಸರ್ಕಾರದಿಂದ ನೂರಾರು ಕೋಟಿ ಅನುದಾನ ತಂದು ಅಭಿವೃದ್ಧಿ ಕಾರ್ಯಗಳಿಗೆ ಶ್ರೀಕಾರ ಬರೆದಿದ್ದಾರೆ. ಸಾಗರ ಕ್ಷೇತ್ರ ಅಭಿವೃದ್ಧಿ ಪಥದಲ್ಲಿ ಸಾಗುತ್ತಿದೆ. ಇದನ್ನು ಸಹಿಸಲು ಸಾಧ್ಯವಾಗದೇ ಮಾಜಿ ಶಾಸಕ ಹರತಾಳು ಹಾಲಪ್ಪ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಸಭೆ ಸೇರಿಸಿ ಸಲ್ಲದ ಆರೋಪ ಮಾಡಿದ್ದಾರೆ. ಅವರಿಗೆ ಮಾಹಿತಿ ಕೊರತೆ ಇದೆ’ ಎಂದು ಪತ್ರಿಕಾಗೋಷ್ಠಿಯಲ್ಲಿ ದೂರಿದರು.
‘ಯಾರೋ ಹೇಳಿದ್ದನ್ನು ಕೇಳಿ ಮಾತನಾಡಬೇಡಿ. ತಮ್ಮ ಬಳಿ ಸಾಕ್ಷಿಇದೆಯೇ? ಶಾಸಕರ ಅಭಿವೃದ್ಧಿ ಕಾರ್ಯಗಳನ್ನು ನಾವು ಪಟ್ಟಿ ಮಾಡಿ ಹೇಳುತ್ತೇವೆ. ಸಾಕ್ಷಿ ಸಮೇತ ಬರುತ್ತೇವೆ. ಪ್ರತಿಭಟನೆಯನ್ನೂ ನಡೆಸುತ್ತೇವೆ’ ಎಂದು ಎಚ್ಚರಿಸಿದರು.
ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ತಾಲ್ಲೂಕು ಘಟಕದ ಅಧ್ಯಕ್ಷ ಚಿದಂಬರ ಹೂವಿನಕೋಣೆ, ಪ್ರಮುಖರಾದ ವಿನಯ ಕುಮಾರ್ ದುಮ್ಮ, ಈಶ್ವರಪ್ಪ ಗೌಡ, ಸಣ್ಣಕ್ಕಿ ಮಂಜು, ಲೋಕೇಶಪ್ಪ, ಶುಭಕರ ಪೂಜಾರಿ, ಸದಾಶಿವ ಶ್ರೇಷ್ಠಿ, ಎಂ.ಪಿ. ಸುರೇಶ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.