ಶಿವಮೊಗ್ಗ: ಮಾಧ್ಯಮವೊಂದರಲ್ಲಿ ಭಾನುವಾರ ಬಿತ್ತರವಾದ ಕೊರೊನಾ ಸೋಂಕಿತ ವ್ಯಕ್ತಿ ಪರಾರಿ ಎಂಬ ಸುದ್ದಿ ನಗರದ ಜನರ ಆತಂಕಕ್ಕೆ ಕಾರಣವಾಗಿತ್ತು.
ಕೊರೊನಾ ಸೋಂಕಿತರೊಬ್ಬರು ತಮ್ಮ ಮೊಬೈಲ್ ಸ್ವಿಚ್ ಆಫ್ ಮಾಡಿದ್ದ ಹಿನ್ನೆಲೆಯಲ್ಲಿ ಸೋಂಕಿತ ವ್ಯಕ್ತಿ ಪರಾರಿ ಎಂಬ ಸುದ್ದಿ ಮಾಧ್ಯಮವೊಂದರಲ್ಲಿ ಪ್ರಸಾರವಾಗಿತ್ತು.
ನಗರದ ವ್ಯಕ್ತಿಯೊಬ್ಬರಿಗೆ ಶೀತ, ಕೆಮ್ಮು, ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರು ಕಳೆದ 3 ದಿನಗಳ ಹಿಂದೆ ಮೆಗ್ಗಾನ್ ಆಸ್ಪತ್ರೆಯಲ್ಲಿ ಗಂಟಲು ದ್ರವ ಮಾದರಿಯನ್ನು ನೀಡಿ, ಬಳಿಕ ಮನೆಗೆ ತೆರಳಿದ್ದರು. ನಂತರ ಪರೀಕ್ಷೆಯಲ್ಲಿ ಅವರಿಗೆ ಶನಿವಾರ ರಾತ್ರಿ ಪಾಸಿಟಿವ್ ಎಂದು ವರದಿ ಬಂದಿದೆ. ಪಾಸಿಟಿವ್ ಕಾಣಿಸಿಕೊಂಡ ಹಿನ್ನೆಲೆ ಆ ವ್ಯಕ್ತಿಗೆ ಫೋನ್ ಮಾಡಲಾಗಿದೆ ಆದರೆ, ಆ ಸಂದರ್ಭದಲ್ಲಿ ಅವರ ಮೊಬೈಲ್ ಸ್ವಿಚ್ ಆಫ್ ಆಗಿತ್ತು. ಇದರಿಂದ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಆತಂಕ ಎದುರಾಗಿತ್ತು. ತಕ್ಷಣವೇ ಸೋಂಕಿತರ ಮನೆಯ ವಿಳಾಸ ಪತ್ತೆ ಹಚ್ಚಿ ಮನೆಗೆ ತೆರಳಿದ್ದಾರೆ. ವ್ಯಕ್ತಿ ಮನೆಯಲ್ಲಿಯೇ ಇದ್ದಿದ್ದರಿಂದ ನೆಮ್ಮದಿಯ ನಿಟ್ಟುಸಿರು ಬಿಟ್ಟರು.
ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಮನೆಯಲ್ಲಿದ್ದ ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ಕರೆದುಕೊಂಡು ಬಂದು ಚಿಕಿತ್ಸೆ ನೀಡುತ್ತಿದ್ದಾರೆ.
‘ಸೋಂಕಿತ ವ್ಯಕ್ತಿ ತಪ್ಪಿಸಿಕೊಂಡಿಲ್ಲ. ಗಾಬರಿಯಿಂದ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡಿದ್ದಾರೆ. ಅವರನ್ನು ಸಂಪರ್ಕಿಸಿ ಆಸ್ಪತ್ರೆಗೆ ಕರೆದುಕೊಂಡು ಬರಲಾಗಿದೆ’ ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಸ್ಪಷ್ಟನೆ ನೀಡಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.