ADVERTISEMENT

ಶಿವಮೊಗ್ಗ: ಬೀದಿ ನಾಯಿಗಳ ಹಾವಳಿ ತಪ್ಪಿಸಲು ಮನವಿ

​ಪ್ರಜಾವಾಣಿ ವಾರ್ತೆ
Published 2 ನವೆಂಬರ್ 2023, 15:40 IST
Last Updated 2 ನವೆಂಬರ್ 2023, 15:40 IST
ಹಲಗೂರಿನಲ್ಲಿ ಬೀದಿ ನಾಯಿಗಳ ಕಾಟ ಹೆಚ್ಚಾಗಿರುವುದು
ಹಲಗೂರಿನಲ್ಲಿ ಬೀದಿ ನಾಯಿಗಳ ಕಾಟ ಹೆಚ್ಚಾಗಿರುವುದು   

ಶಿವಮೊಗ್ಗ: ಬೀದಿ ನಾಯಿಗಳ ಹಾವಳಿ ನಿಯಂತ್ರಿಸಲು ಆಗ್ರಹಿಸಿ ಕೆಪಿಸಿಸಿ ಬೀದಿ ಬದಿ ವ್ಯಾಪಾರಿಗಳ ವಿಭಾಗದಿಂದ ಗುರುವಾರ ಮಹಾನಗರ ಪಾಲಿಕೆ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು.

‘ನಗರದ ಜಯನಗರ, ಬಸವನಗುಡಿ, ನೆಹರು ಸ್ಟೇಡಿಯಂ, ರವೀಂದ್ರನಗರ, ಗಾಂಧಿನಗರ ಸೇರಿದಂತೆ ವಿವಿಧ ಬಡಾವಣೆಗಳಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದೆ. ಸಾರ್ವಜನಿಕರು ವಯೋವೃದ್ಧರು, ಮಕ್ಕಳು ಓಡಾಡುವುದೇ ಕಷ್ಟವಾಗಿದೆ. ಅದರಲ್ಲೂ ಬೈಕ್ ಸವಾರರನ್ನು ಈ ನಾಯಿಗಳು ಅಟ್ಟಿಸಿಕೊಂಡು ಹೋಗಿ ಭಯ ಹುಟ್ಟಿಸುವುದಲ್ಲದೆ ಕಚ್ಚುತ್ತವೆ. ಭಯಗೊಂಡ ಅನೇಕರು ಅಪಘಾತಕ್ಕೂ ಒಳಗಾಗಿದ್ದಾರೆ’ ಎಂದು ದೂರಿದರು.

‘ಮಹಾನಗರ ಪಾಲಿಕೆಯ ಅಧಿಕಾರಿಗಳು ಬೀದಿನಾಯಿಗಳನ್ನು ನಿಯಂತ್ರಿಸುವಲ್ಲಿ ವಿಫಲರಾಗಿದ್ದಾರೆ. ಪ್ರತಿ ವರ್ಷ ಪಾಲಿಕೆ ವತಿಯಿಂದಲೇ ನಾಯಿಗಳ ಸಂತಾನ ಶಕ್ತಿ ಹರಣ ಚಿಕಿತ್ಸೆ ಮಾಡಲಾಗುತ್ತಿತ್ತು. ಆದರೆ ಇತ್ತೀಚಿನ ವರ್ಷಗಳಲ್ಲಿ ಈ ಚಿಕಿತ್ಸೆ ಮಾಡದಿರುವುದರಿಂದ ಬೀದಿ ನಾಯಿಗಳ ಸಂಖ್ಯೆ ದಿನೇದಿನೇ ಹೆಚ್ಚಾಗುತ್ತಿದೆ. ಮಕ್ಕಳಿಗೂ ಬೀದಿನಾಯಿ ಕಚ್ಚಿವೆ. ಆದ್ದರಿಂದ ಪಾಲಿಕೆ ಅಧಿಕಾರಿಗಳು ನಾಯಿಗಳ ಹಾವಳಿ ನಿಯಂತ್ರಿಸಿ ಸಾರ್ವಜನಿಕರ ಪ್ರಾಣ ರಕ್ಷಿಸಬೇಕು’ ಎಂದು ಮನವಿಯಲ್ಲಿ ಒತ್ತಾಯಿಸಲಾಯಿತು.

ADVERTISEMENT

ಬೀದಿಬದಿ ವ್ಯಾಪಾರಿಗಳ ವಿಭಾಗದ ರಾಜ್ಯ ಘಟಕದ ಉಪಾಧ್ಯಕ್ಷ ಮಣಿ ಗೌಂಡರ್, ಜಿಲ್ಲಾ ಘಟಕದ ಅಧ್ಯಕ್ಷ ಎಂ. ದಿನೇಶ್, ಜಿ.ಮಂಜುನಾಥ್, ಮೊಹಮ್ಮದ್ ಮೌಸೀನ್ ಇದ್ದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.