ADVERTISEMENT

ಚರ್ಚೆ ಬಳಿಕ ಮತಾಂತರ ನಿಷೇಧ ಕಾಯ್ದೆ ಜಾರಿ ಸೂಕ್ತ: ಶಾಂತಕುಮಾರ್ ಕೆನಡಿ

​ಪ್ರಜಾವಾಣಿ ವಾರ್ತೆ
Published 14 ಮೇ 2022, 2:32 IST
Last Updated 14 ಮೇ 2022, 2:32 IST

ಶಿವಮೊಗ್ಗ: ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆ ಜಾರಿಗೊಳಿಸುತ್ತಿರುವುದಕ್ಕೆ ಸ್ವಾಗತವಿದೆ. ಆದರೆ, ಈ ಬಗ್ಗೆ ಚರ್ಚೆ ನಡೆದ ಬಳಿಕ ಜಾರಿಗೊಳಿಸುವುದು ಸೂಕ್ತ ಎಂದು ರಾಜ್ಯ ಕ್ರೈಸ್ತ ಅಭಿವೃದ್ಧಿ ಸಮಿತಿ ಅಧ್ಯಕ್ಷ ಶಾಂತಕುಮಾರ್ ಕೆನಡಿ ಹೇಳಿದರು.

ಇಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಬಿಜೆಪಿ ಸರ್ಕಾರ ಯಾವುದೇ ಸಮುದಾಯವನ್ನು ನಿರ್ಲಕ್ಷಿಸುತ್ತಿಲ್ಲ. ಕ್ರೈಸ್ತ ಸಮುದಾಯ ಸದೃಢವಾಗಿದೆ. ಕಾಯ್ದೆ ಜಾರಿ ಬಗ್ಗೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ವಿರೋಧವೂ ಇಲ್ಲ. ಸರ್ಕಾರದ ನಿರ್ಧಾರಗಳನ್ನು ಗೌರವಿಸಬೇಕಾಗಿದೆ’ ಎಂದರು.

ಕ್ರೈಸ್ತ ಸಮುದಾಯದ ಅಭಿವೃದ್ಧಿಗಾಗಿ ಯಾವುದೇ ಸರ್ಕಾರ ಕ್ರೈಸ್ತ ಅಭಿವೃದ್ಧಿ ಸಮಿತಿ ರಚಿಸಲು ಕಾಳಜಿ ವಹಿಸಿರಲಿಲ್ಲ. ಆದರೆ, ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ ಕ್ರೈಸ್ತ ಸಮುದಾಯದ ಅಭಿವೃದ್ಧಿಗಾಗಿ ಸಮಿತಿ ರಚಿಸಿ ₹ 50 ಕೋಟಿ ಅನುದಾನ ನೀಡಿದ್ದರು. ಈ ಹಣವನ್ನು ಸಮಾಜದ ಅಭಿವೃದ್ಧಿಗಾಗಿ ಸದ್ಬಳಕೆ ಮಾಡಿಕೊಳ್ಳಲಾಯಿತು ಎಂದು ತಿಳಿಸಿದರು.

ADVERTISEMENT

ಕೊರೊನಾ ಸಂದರ್ಭದಲ್ಲಿ 2021ರಲ್ಲಿ ₹ 50 ಕೋಟಿ ಹಾಗೂ ಪ್ರಸಕ್ತ ಸಾಲಿನಲ್ಲಿ ₹ 50 ಕೋಟಿ ಬಿಜೆಪಿ ಸರ್ಕಾರ ಅನುದಾನ ನೀಡಿದೆ. ಈ ಅನುದಾನದಲ್ಲಿ ಚರ್ಚ್‌ಗಳ ದುರಸ್ತಿ ಹಾಗೂ ಅಭಿವೃದ್ಧಿ, ಸಮುದಾಯ ಭವನ ನಿರ್ಮಾಣ ಸಂಘ, ಸಂಸ್ಥೆಗಳು ನಡೆಸುವ ವೃದ್ಧಾಶ್ರಮ ಹಾಗೂ ಅನಾಥಾಲಯಗಳಿಗೆ, ಸಮಾಜದ ವಿದ್ಯಾರ್ಥಿಗಳು ವಿದೇಶದಲ್ಲಿ ವಿದ್ಯಾಭ್ಯಾಸ ಮಾಡಲು, ಸ್ಮಶಾನಗಳ ಅಭಿವೃದ್ಧಿ ಸೇರಿ ಇತರೆ ಯೋಜನೆಗಳಿಗೆ ಬಳಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಪತ್ರಿಕಾಗೋಷ್ಠಿಯಲ್ಲಿ ವಿನ್ಸೆಂಟ್ ರೋಡ್ರಿಗಸ್, ಮೊಹಮ, ಮದ್ ಶಫೀವುಲ್ಲಾ, ನವೀನ್ ಆಂತೋಣಿ, ಕ್ಲೆಮೆಂಟ್ ರಾಯನ್, ಮಾರ್ಟಿನ್ ವೀನಸ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.