ADVERTISEMENT

ಸಿಗಂದೂರು ಸೇತುವೆ ಉದ್ಘಾಟನೆಗೆ ಪ್ರಧಾನಿ ಕರೆಸುವ ಪ್ರಯತ್ನ: ಬಿ.ವೈ.ರಾಘವೇಂದ್ರ

ಸಂಸದ ಬಿ.ವೈ.ರಾಘವೇಂದ್ರ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 28 ಏಪ್ರಿಲ್ 2025, 13:58 IST
Last Updated 28 ಏಪ್ರಿಲ್ 2025, 13:58 IST
ಬಿ.ವೈ.ರಾಘವೇಂದ್ರ
ಬಿ.ವೈ.ರಾಘವೇಂದ್ರ   

ಸಾಗರ: ಶರಾವತಿ ಮುಳುಗಡೆ ಸಂತ್ರಸ್ತರ ತ್ಯಾಗದ ಪ್ರತೀಕವಾಗಿ ತಾಲ್ಲೂಕಿನ ಅಂಬಾರಗೋಡ್ಲು-ಕಳಸವಳ್ಳಿ ನಡುವೆ ಶರಾವತಿ ಹಿನ್ನೀರಿನಲ್ಲಿ ನಿರ್ಮಾಣಗೊಂಡಿರುವ ಸಿಗಂದೂರು ಸೇತುವೆ ಉದ್ಘಾಟನೆಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕರೆಸುವ ಪ್ರಯತ್ನ ನಡೆದಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ತಿಳಿಸಿದರು.

‘₹ 400 ಕೋಟಿಗೂ ಅಧಿಕ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಸಿಗಂದೂರು ಸೇತುವೆ ಕಾಮಗಾರಿ ಮುಕ್ತಾಯ ಹಂತಕ್ಕೆ ಬಂದಿದೆ. ಮುಂದಿನ ಮಳೆಗಾಲದೊಳಗೆ ಸೇತುವೆ ಸಂಚಾರಕ್ಕೆ ಮುಕ್ತಗೊಳ್ಳಲಿದೆ’ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದರು.

ಸಿಗಂದೂರು ಸೇತುವೆ ನಿರ್ಮಾಣದ ಯಶಸ್ಸಿನ ಹಿಂದೆ ಸ್ಥಳೀಯರ ಹೋರಾಟದ ಜೊತೆಗೆ ಹಲವರ ಪರಿಶ್ರಮವಿದೆ. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಈ ಸೇತುವೆ ಅಗತ್ಯದ ಬಗ್ಗೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಪರಿಣಾಮಕಾರಿಯಾಗಿ ಮನದಟ್ಟು ಮಾಡಿದ್ದು ಫಲ ನೀಡಿದೆ ಎಂದು ತಿಳಿಸಿದರು.

ADVERTISEMENT

ಸಿಗಂದೂರು ಸೇತುವೆ ನಿರ್ಮಾಣದ ಭಾಗವಾಗಿರುವ ನಗರದ ಶಿವಪ್ಪನಾಯಕ ವೃತ್ತದಿಂದ ಮರಕುಟುಕದವರೆಗಿನ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಕಾಮಗಾರಿಗೆ ₹ 700 ಕೋಟಿ ಮಂಜೂರಾಗಿದೆ. ಶೀಘ್ರದಲ್ಲೇ ಕಾಮಗಾರಿ ಆರಂಭಗೊಳ್ಳಲಿದೆ ಎಂದು ಹೇಳಿದರು.

ರಾಣೆಬೆನ್ನೂರು, ಶಿಕಾರಿಪುರ, ಆನಂದಪುರ, ಹೊಸನಗರ, ಬೈಂದೂರು ರಸ್ತೆ ನಿರ್ಮಾಣ ಕಾಮಗಾರಿ ಭರದಿಂದ ಸಾಗಿದೆ. ಕೊಲ್ಲೂರು ಘಾಟಿಯಲ್ಲಿ ಹೆಚ್ಚಿನ ತಿರುವುಗಳು ಇರುವುದರಿಂದ ಆ ಭಾಗದಲ್ಲಿ ಕಾಮಗಾರಿ ವಿಳಂಬವಾಗುತ್ತಿದೆ ಎಂದರು.

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕರ ದಾಳಿ ಅಮಾನುಷವಾದದ್ದು. ಈ ಕೃತ್ಯದ ಹಿಂದಿರುವ ಪಾಕಿಸ್ತಾನಕ್ಕೆ ಸರಿಯಾದ ಬುದ್ಧಿ ಕಲಿಸಲು ಪ್ರಧಾನಿ ಮುಂದಾಗಿದ್ದಾರೆ. ಇಡೀ ದೇಶದ ಜನ ಸರ್ಕಾರದ ಜೊತೆ ನಿಲ್ಲಬೇಕಾದ ಸಂದರ್ಭವಿದು ಎಂದು ಹೇಳಿದರು.

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಜಗದೀಶ್, ಪ್ರಮುಖರಾದ ಟಿ.ಡಿ. ಮೇಘರಾಜ್, ಹು.ಭಾ. ಅಶೋಕ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.