ಭದ್ರಾವತಿ: ಶಿವಮೊಗ್ಗ, ಚಿಕ್ಕಮಗಳೂರು ಮತ್ತು ದಾವಣಗೆರೆ ಜಿಲ್ಲೆಗಳ ರೈತರ ಜೀವನಾಡಿ ಭದ್ರಾ ಜಲಾಶಯ ಈ ಬಾರಿ ನಿರೀಕ್ಷೆಗೂ ಮೀರಿ ಶೀಘ್ರವೇ ಭರ್ತಿಯಾಗುವ ಲಕ್ಷಣಗಳು ಕಂಡು ಬರುತ್ತಿದೆ. ಆದರೆ ರೈತರ ಮುಖದಲ್ಲಿ ಒಂದೆಡೆ ಸಂತಸ ತುಂಬಿದ್ದರೇ, ಮತ್ತೊಂದೆಡೆ ಆತಂಕದ ಕಾರ್ಮೋಡ ಕವಿದಿದೆ.
ಜಲಾಶಯದ ವ್ಯಾಪ್ತಿಯಲ್ಲಿ ನಿರಂತರ ಮಳೆಯಾಗುತ್ತಿದ್ದು, ಇದರಿಂದಾಗಿ ಜಲಾಶಯಕ್ಕೆ ಹರಿದು ಬರುತ್ತಿರುವ ನೀರಿನ ಪ್ರಮಾಣ ಕ್ಷಣ ಕ್ಷಣಕ್ಕೂ ಏರಿಕೆಯಾಗುತ್ತಿದೆ. ಗುರುವಾರ ಅಂದಾಜು 20 ಸಾವಿರ ಕ್ಯೂಸೆಕ್ ನೀರಿನ ಒಳಹರಿವು ಹೊಂದಿದ್ದು, ಶುಕ್ರವಾರ ಬೆಳಿಗ್ಗೆ ಅಂದಾಜು 21,982 ಕ್ಯೂಸೆಕ್ ತಲುಪಿದೆ. ಕೇವಲ 12 ಗಂಟೆಗಳಲ್ಲಿ 1,982 ಕ್ಯೂಸೆಕ್ ನೀರು ಏರಿಕೆಯಾಗಿದೆ.
ಜಲಾಶಯದ ನೀರಿನ ಮಟ್ಟ 177.1 ಅಡಿಗೆ ತಲುಪಿದ್ದು, ಪೂರ್ಣ ಭರ್ತಿಯಾಗಲು ಕೇವಲ 19 ಅಡಿ ನೀರು ಮಾತ್ರ ಬಾಕಿ ಉಳಿದಿದೆ. ಈ ನಡುವೆ ಹೊರ ಹರಿವು 3394 ಕ್ಯೂಸೆಕ್ ಇದ್ದು, ಕಳೆದ ವರ್ಷ ಇದೇ ದಿನ ಅಂದಾಜು 127 ಅಡಿ ನೀರು ಸಂಗ್ರಹವಾಗಿತ್ತು.
ಈ ವರ್ಷ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಭದ್ರಾ ಜಲಾಶಯ ಶೀರ್ಘವೇ ಭರ್ತಿಯಾಗುವ ಆಶಾಭಾವನೆಯನ್ನು ರೈತರು ಹೊಂದಿದ್ದಾರೆ. ಆದರೂ ಸಹ ರೈತರ ಬೆಳೆಗಳಿಗೆ ನೀರು ಲಭ್ಯವಾಗುವ ಯಾವ ಲಕ್ಷಣಗಳು ಕಂಡು ಬರುತ್ತಿಲ್ಲ. ಜಲಾಶಯದಲ್ಲಿ ಕಾಮಗಾರಿ ಕೈಗೊಳ್ಳುತ್ತಿರುವ ಕಾರಣ ನಿಗದಿತ ಸಮಯದಲ್ಲಿ ಬಲ ಮತ್ತು ಎಡ ನಾಲೆಗಳಲ್ಲಿ ನೀರು ಹರಿಸುವ ಸಾಧ್ಯತೆ ಕಡಿಮೆ ಇದ್ದು, ರೈತರಲ್ಲಿ ಆತಂಕ ಹೆಚ್ಚಾಗಿದೆ.
ಈ ನಡುವೆ ರೈತರು ನಿರಂತರ ಹೋರಾಟ ನಡೆಸುತ್ತಿದ್ದು, ಹೋರಾಟಕ್ಕೆ ಇದುವರೆಗೂ ಯಾವುದೇ ಪ್ರತಿಫಲ ದೊರಕಿಲ್ಲ. ಇದರಿಂದ ಮುಂದಿನ ದಿನಗಳಲ್ಲಿ ಹೋರಾಟ ಇನ್ನೂ ತೀವ್ರಗೊಳ್ಳುವ ಸಾಧ್ಯತೆ ಇದೆ.
ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ:
ತಾಲ್ಲೂಕಿನಾದ್ಯಂತ ವ್ಯಾಪಕವಾಗಿ ಮಳೆಯಾಗುತ್ತಿರುವ ಕಾರಣ ಹವಮಾನ ಇಲಾಖೆ ಮುನ್ಸೂಚನೆಯಂತೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆಯವರು ಶುಕ್ರವಾರ ತಾಲ್ಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ್ದರು.
ಕಳೆದ ಎರಡು ಮೂರು ದಿನಗಳಿಂದ ಜಿಟಿ ಜಿಟಿ ಮಳೆಯಾಗುತ್ತಿದ್ದು, ಎಲ್ಲೆಡೆ ಶೀತ, ಗಾಳಿಯ ವಾತಾವರಣ ಆವರಿಸಿಕೊಂಡಿದೆ. ಮುಂದಿನ ದಿನಗಳಲ್ಲಿ ಮಳೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದ್ದು, ನಗರಸಭೆ, ತಾಲ್ಲೂಕು ಪಂಚಾಯಿತಿ ಮತ್ತು ತಾಲ್ಲೂಕು ಆಡಳಿತ ಅಗತ್ಯ ತುರ್ತು ಕ್ರಮಗಳಿಗೆ ಮುಂದಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.