ಶಿವಮೊಗ್ಗ:ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರ ಮನೆಯಲ್ಲೂ ಮೋದಿಗೆ ಮತ ಹಾಕುವವರಿದ್ದಾರೆ. ಮೋದಿ ಅವರ ವ್ಯಕ್ತಿತ್ವ ಕೆಲಸದಿಂದ ವಿರೋಧ ಪಕ್ಷದವರ ಮನೆಯಲ್ಲೂ ಮತ ಪಡೆಯುವ ಕೆಲಸ ಮಾಡಿದ್ದಾರೆ. ತೋರಿಕೆಗೆ ಕೆಲವರು ಮೋದಿಯನ್ನ ವಿರೋಧಿಸುತ್ತಾರೆ. ಆದರೆ, ಪರೋಕ್ಷವಾಗಿ ಅವರನ್ನು ಬೆಂಬಲಿಸುತ್ತಾರೆ ಎಂದುಬಿಜೆಪಿ ರಾಷ್ಟ್ರೀಯ ಸಹ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ವಿಶ್ವಾಸ ವ್ಯಕ್ತಪಡಿಸಿದರು.
ಗಾಜನೂರಿನಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಬಿಜೆಪಿ ಕಾರ್ಯಕರ್ತರ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ದೇವೇಗೌಡರ ಕುಟುಂಬ ರಾಜಕಾರಣದಲ್ಲಿ ನೆಲೆಯೂರಿದೆ. ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಆರೋಗ್ಯ ಸರಿಯಿಲ್ಲ. ಎಷ್ಟು ದಿನ ಬದುಕುತ್ತೇನೋ ಗೊತ್ತಿಲ್ಲ. ಹಾಗಾಗಿ, ಮತ ಕೊಡಿ ಎಂದು ಮನವಿ ಮಾಡುತ್ತಿದ್ದಾರೆ. ಚುನಾವಣೆಗೆ ಎರಡು ದಿನ ಇರುವಾಗ ಮುಖ್ಯಮಂತ್ರಿ ಅನಾರೋಗ್ಯದ ಕಥೆ ಹೇಳಿ ಹಾಸಿಗೆ ಹಿಡಿಯಬಹುದು. ಏ.18ರ ನಂತರ ಆರೋಗ್ಯವಾಗಿ ಓಡಾಡಿಕೊಂಡು ಇರುತ್ತಾರೆ ಎಂದು ವ್ಯಂಗ್ಯವಾಡಿದರು.
ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಅವರಿಗೆ ಮತ ನೀಡುವ ಮೂಲಕ ಮೋದಿಯನ್ನು ಮತ್ತೊಮ್ಮೆ ಪ್ರಧಾನಿ ಮಾಡಬೇಕು.ಪೆಟ್ರೋಲ್ ಬಂಕ್ ಮಾಲೀಕರು, ದೇವಸ್ಥಾನದ ಅರ್ಚಕರು ಮತದಾನ ಜಾಗೃತಿ ಮಾಡುತ್ತಿದ್ದಾರೆ. ಮೋದಿ ಅವರನ್ನು ಗೆಲ್ಲಿಸಿ ಪ್ರಧಾನಿ ಮಾಡಬೇಕು ಎಂಬ ಆಶಯ ಹೊಂದಿದ್ದಾರೆ. ಮೋದಿ ಖಡಕ್ ನಾಯಕ ಎಂದು ಜನರು ಮೆಚ್ಚಿದ್ದಾರೆ. ಹಾಗಾಗಿ ಹೆಚ್ಚಿನ ಬೆಂಬಲ ವ್ಯಕ್ತವಾಗಿದೆ ಎಂದರು.
ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತಕ್ಕೆ ಹೆಚ್ಚಿನ ಗೌರವ, ಮನ್ನಣೆ ದೊರೆತಿದೆ. ಪಾಕ್ ಮೇಲೆ ದಾಳಿ ನಡೆಸಲು ಸಮಾಜಘಾತುಕ ಶಕ್ತಿ ನಿಗ್ರಹಿಸಲು ಪ್ರಬಲ ನಾಯಕತ್ವ ಬೇಕು. ಅದನ್ನ ಮೋದಿ ತೋರಿದ್ದಾರೆ ಎಂದು ಶ್ಲಾಘಿಸಿದರು.
ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ, ವಿಧಾನ ಪರಿಷತ್ ಮಾಜಿ ಸದಸ್ಯ ಎಂ.ಬಿ. ಭಾನುಪ್ರಕಾಶ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಸ್.ಎನ್.ಚನ್ನಬಸಪ್ಪ, ಡಿ.ಎಸ್ ಅರುಣ್, ಗಿರೀಶ್ ಪಟೇಲ್, ಜಿಲ್ಲಾ ಪಂಚಾಯಿತಿ ಸದಸ್ಯೆ ಹೇಮಾವತಿ ಶಿವನಂಜಪ್ಪ ಉಪಸ್ಥಿತರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.