ADVERTISEMENT

ಅಭಿವೃದ್ಧಿ ಕಾರ್ಯಗಳೇ ವಿಧಾನ ಪರಿಷತ್ ಚುನಾವಣಾ ಅಸ್ತ್ರ: ಈಶ್ವರಪ್ಪ

​ಪ್ರಜಾವಾಣಿ ವಾರ್ತೆ
Published 18 ನವೆಂಬರ್ 2021, 16:09 IST
Last Updated 18 ನವೆಂಬರ್ 2021, 16:09 IST

ಶಿವಮೊಗ್ಗ: ಕೇಂದ್ರ, ರಾಜ್ಯ ಸರ್ಕಾರಗಳು ಮಾಡಿದ ಅಭಿವೃದ್ಧಿ, ಜನಪರ ಕಾರ್ಯಗಳು. ಸ್ಥಳೀಯ ಸಂಸ್ಥೆಗಳಿಗೆ ಈಚೆಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತರೇ ಹೆಚ್ಚಿನ ಸಂಖ್ಯೆಯಲ್ಲಿ ಆಯ್ಕೆಯಾಗಿರುವುದು ಈ ಬಾರಿಯ ವಿಧಾನ ಪರಿಷತ್ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳಿಗೆ ಅನುಕೂಲವಾಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ವಿಶ್ವಾಸ ವ್ಯಕ್ತಪಡಿಸಿದರು.

ಉದ್ಯೋಗ ಖಾತ್ರಿ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲಾಗಿದೆ. ಕೂಲಿಯ ದಿನಗಳನ್ನು 100ರಿಂದ 150 ದಿನಗಳಿಗೆ ವಿಸ್ತರಿಸಲಾಗಿದೆ. ಪರಿಶಿಷ್ಟ ಕೂಲಿ ಕಾರ್ಮಿಕರ ಕೂಲಿ ವಾರದೊಳಗೆ ಖಾತೆಗೆ ಜಮೆ ಮಾಡಲಾಗುತ್ತಿದೆ. ಸಾಮನ್ಯ ವರ್ಗದವರ ಕೂಲಿ ಕಾರ್ಮಿಕರಿಗೂ ತ್ವರಿತವಾಗಿ ಹಣ ಜಮೆ ಮಾಡಲಾಗುತ್ತಿದೆ. ಕೇಂದ್ರ, ರಾಜ್ಯಗಳು ಜನರಿಗೆ ಸಾಕಷ್ಟು ಅನುಕೂಲ ಮಾಡಿವೆ ಎಂದು ಗುರುವಾರ ಪತ್ರಿಕಾಗೊಷ್ಠಿಯಲ್ಲಿ ವಿವರ ನೀಡಿದರು.

100 ಕೋಟಿ ಜನರಿಗೆ ಲಸಿಕೆ ನೀಡಿದ್ದು, ಬಡವರಿಗೆ ಆವಶ್ಯಕತೆ ಇರುವಷ್ಟು ಪಡಿತರ ನೀಡುತ್ತಿರುವುದು ಬಿಜೆಪಿಗೆ ಲಾಭ ತರಲಿದೆ. ಬೆಲೆ ಏರಿಕೆ, ಇಳಿತ ಸಹಜ ಪ್ರಕ್ರಿಯೆ ರಾಜಕಾರಣಕ್ಕೂ, ಚುನಾವಣೆಗೂ ಬೆಲೆ ಏರಿಕೆಗೂ ಸಂಬಂಧವಿಲ್ಲ ಎಂದು ಪ್ರತಿಕ್ರಿಯಿಸಿದರು.

ADVERTISEMENT

ಅಭ್ಯರ್ಥಿಗಳು, ಪಕ್ಷದ ಮುಖಂಡರು, ಕಾರ್ಯಕರ್ತರು ಸರ್ಕಾರಗಳ ಸಾಧನೆ, ಜನಪರ ಯೋಜನೆಗಳನ್ನು ಜನರಿಗೆ ತಲುಪಿಸುವ ಕೆಲಸ ಮಾಡಬೇಕು. ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳು ಬಹುಮತದಿಂದ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಬೇಕು ಎಂದು ಮನವಿ ಮಾಡಿದರು.

ಪತ್ರಿಕಾಗೋಷ್ಠಿಯಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಸಹಕಾರ ಸಚಿವ ಎಸ್‌.ಟಿ.ಸೋಮಶೇಖರ್, ಮಾಜಿ ಸಚಿವ ಸದಾನಂದ ಗೌಡ, ಸಂಸದ ಬಿ.ವೈ.ರಾಘವೇಂದ್ರ, ಶಾಸಕರಾದ ಹಾಲಪ್ಪ ಎಚ್‌.ಹರತಾಳು, ಕೆ.ಬಿ.ಆಶೋಕ್‌ ನಾಯ್ಕ, ಮಾಡಾಳ್ ವಿರೂಪಾಕ್ಷಪ್ಪ, ವಿಧಾನ ಪರಿಷತ್ ಸದಸ್ಯರಾದ ರುದ್ರೇಗೌಡ, ಆಯನೂರು ಮಂಜುನಾಥ್, ಭಾರತಿ ಶೆಟ್ಟಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.