ಶಿವಮೊಗ್ಗ: ಮುಂದಿನ ಚುನಾವಣೆಯಲ್ಲಿ ಭದ್ರಾವತಿಯೂ ಸೇರಿ ಎಲ್ಲ ಕ್ಷೇತ್ರದಲ್ಲೂ ಬಿಜೆಪಿ ಅಭ್ಯರ್ಥಿಗಳು ಜಯ ಸಾಧಿಸಲಿದ್ದಾರೆ. ಇದಕ್ಕಾಗಿ ವಿಶೇಷ ಪ್ರಯತ್ನಗಳು ನಡೆಯುತ್ತಿವೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.
ಶಿವಮೊಗ್ಗದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಬರುವ ವಿಧಾನಸಭೆ ಚುನಾವಣೆಯಲ್ಲಿ 150ಕ್ಕೂ ಹೆಚ್ಚು ಕ್ಷೇತ್ರಗಳನ್ನು ಗೆಲ್ಲಬೇಕು ಎಂಬ ಗುರಿ ಹಾಕಿಕೊಂಡಿದ್ದೇವೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಕ್ಷೇತ್ರವನ್ನೂ ಈ ಬಾರಿ ಗೆಲ್ಲುತ್ತೇವೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ರಾಜ್ಯ ಪ್ರವಾಸ: ‘ವಿಧಾನಸಭೆ ಚುನಾವಣೆಯಲ್ಲಿ 150 ಸ್ಥಾನ ಗೆಲುವಿಗಾಗಿ ರಾಜ್ಯದಾದ್ಯಂತ ಪ್ರವಾಸ ಪ್ರಾರಂಭವಾಗುತ್ತಿದೆ. ಪಕ್ಷದ ಸ್ಥಿತಿಗತಿ ತಿಳಿದುಕೊಂಡು ಸಂಘಟನೆ ಬಲಪಡಿಸುತ್ತೇವೆ. ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ಪ್ರತಿ ಕುಟುಂಬಕ್ಕೆ ಒಂದಲ್ಲೊಂದು ಸೌಲಭ್ಯ ಒದಗಿಸಿದೆ. ಅದರ ಆಧಾರದ ಮೇಲೆ ಚುನಾವಣೆಗೆ ಹೋಗುತ್ತೇವೆ’ ಎಂದರು.
ಮೇ 2ರಂದು ಸಂಪುಟ ವಿಸ್ತರಣೆ ಚರ್ಚೆ: ಏ.30ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದೆಹಲಿ ಪ್ರವಾಸ ಕೈಗೊಂಡಿದ್ದಾರೆ. ಮೇ 2ರಂದು ಕೇಂದ್ರ ಗೃಹಸಚಿವ ಅಮಿತ್ ಷಾ ಅವರು ರಾಜ್ಯ ಪ್ರವಾಸ ಕೈಗೊಂಡಿದ್ದಾರೆ. ಆ ಸಂದರ್ಭದಲ್ಲಿ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ನಡೆಸಲಾಗುವುದು ಎಂದು ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.