ಶಿಕಾರಿಪುರ: ‘ರಾಜಕೀಯ ಕ್ಷೇತ್ರದಿಂದ ಸ್ವಯಂ ನಿವೃತ್ತಿ ಹೊಂದುತ್ತಿದ್ದೇನೆ’ ಎಂದು ಬಿಜೆಪಿ ನಗರ ಘಟಕದ ಮಾಜಿ ಅಧ್ಯಕ್ಷ ಹಾಗೂ ಕುರುಬ ಸಮಾಜದ ತಾಲ್ಲೂಕು ಘಟಕದ ಅಧ್ಯಕ್ಷ ಕಬಾಡಿ ರಾಜಣ್ಣ ತಿಳಿಸಿದರು.
ಹಲವು ವರ್ಷಗಳಿಂದ ರಾಜಕಾರಣದಲ್ಲಿ ಸೇವೆ ಸಲ್ಲಿಸಿದ್ದೇನೆ. ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಅವರ ಶಿಷ್ಯನಾಗಿ ಗುರುತಿಸಿಕೊಂಡು ಅವರ ಜತೆಯಲ್ಲಿ ಕಾಂಗ್ರೆಸ್, ಕೆಸಿಪಿ, ಸಮಾಜವಾದಿ ಪಕ್ಷದಲ್ಲಿ ಸೇವೆ ಸಲ್ಲಿಸಿದ್ದೇನೆ. ನಂತರ ಬಿಜೆಪಿ ಸೇರ್ಪಡೆಯಾಗಿ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾದ ಸಂದರ್ಭದಲ್ಲಿ ಬಿಜೆಪಿ ನಗರ ಘಟಕದ ಅಧ್ಯಕ್ಷನಾಗಿ ಜವಾಬ್ದಾರಿಯಿಂದ ಕೆಲಸ ನಿರ್ವಹಿಸಿದ್ದೇನೆ’ ಎಂದು ಈಚೆಗೆ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
‘ಪ್ರಸ್ತುತ ವಯಸ್ಸು ಹಾಗೂ ವೈಯಕ್ತಿಕ ಸಮಸ್ಯೆ ಕಾರಣ ರಾಜಕೀಯಕ್ಕೆ ನಿವೃತ್ತಿ ಘೋಷಿಸುತ್ತಿದ್ದೇನೆ. ಕುರುಬ ಸಮಾಜದ ಅಧ್ಯಕ್ಷನಾಗಿ ಮುಂದುವರಿಯುತ್ತೇನೆ. ಪಕ್ಷೇತರ ಅಭ್ಯರ್ಥಿ ಈಶ್ವರಪ್ಪನವರ ಪರ ಪ್ರಚಾರದಲ್ಲಿ ಪಾಲ್ಗೊಳ್ಳಲು ಪುತ್ರ ಕಾಂತೇಶ್ ಆಹ್ವಾನ ನೀಡಿದ್ದರು. ಆದರೆ, ಆಹ್ವಾನವನ್ನು ತಿರಸ್ಕರಿಸಿದ್ದೇನೆ. ಲೋಕಸಭೆ ಚುನಾವಣೆಯಲ್ಲಿ ನಿರ್ದಿಷ್ಟ ಅಭ್ಯರ್ಥಿಯನ್ನು ಬೆಂಬಲಿಸುವಂತೆ ಸಮುದಾಯದವರಿಗೆ ಸೂಚಿಸುವುದಿಲ್ಲ. ಪ್ರತಿಯೊಬ್ಬರೂ ಸ್ವಂತ ನಿರ್ಣಯ ಕೈಗೊಳ್ಳಲು ಸಮರ್ಥರಿದ್ದಾರೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.