ಶಿಕಾರಿಪುರ:ಸಂವಿಧಾನದ ಮೂಲಕ ಸಮಾನತೆಯ ಸಂದೇಶ ಸಾರಿದ ಮಹಾನ್ ಚೇತನ ಡಾ.ಅಂಬೇಡ್ಕರ್ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.
ಪಟ್ಟಣದ ಸಾಂಸ್ಕೃತಿಕ ಭವನದಲ್ಲಿ ಗುರುವಾರ ತಾಲ್ಲೂಕು ಆಡಳಿತ, ಸಮಾಜ ಕಲ್ಯಾಣ ಇಲಾಖೆ ಹಾಗೂ ದಲಿತ ಸಂಘಟನೆಗಳ ಆಶ್ರಯದಲ್ಲಿ ನಡೆದ ಡಾ.ಬಿ.ಆರ್. ಅಂಬೇಡ್ಕರ್ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಶೋಷಿತರ ಧ್ವನಿಯಾಗಿ ಹಾಗೂ ದಲಿತರ ಸರ್ವಾಂಗೀಣ ಅಭಿವೃದ್ಧಿಗೆ ಅಂಬೇಡ್ಕರ್ ಶ್ರಮಿಸಿದ್ದಾರೆ. ಬಾಬು ಜಗಜೀವನ್ ರಾಂ ಹಸಿರು ಕ್ರಾಂತಿಯ ಹರಿಕಾರರಾಗಿ ಅರ್ಧ ಶತಮಾನಗಳ ಕಾಲ ರಾಜಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದಾರೆ. ಅಂಬೇಡ್ಕರ್ ಹಾಗೂ ಬಾಬು ಜಗಜೀವನರಾಂ ಜೀವನ ಚರಿತ್ರೆ ಪುಸ್ತಕಗಳನ್ನು ಯುವ ಸಮುದಾಯ ಓದಬೇಕು ಎಂದು ಸಲಹೆ ನೀಡಿದರು.
ಸಂಸದ ಬಿ.ವೈ. ರಾಘವೇಂದ್ರ ಮಾತನಾಡಿ, ‘ಸಮಾನತೆ ಸಂದೇಶ ಸಾರಿದ ಅಂಬೇಡ್ಕರ್ ದೇಶಕ್ಕೆ ಉತ್ತಮ ಸಂವಿಧಾನವನ್ನು ನೀಡಿದ್ದಾರೆ. ಆದರೆ ಅಂಬೇಡ್ಕರ್ ಅಂತ್ಯಸಂಸ್ಕಾರಕ್ಕೆ ದೆಹಲಿಯಲ್ಲಿ ಸ್ಥಳ ದೊರೆಯಲಿಲ್ಲ ಎಂಬುದು ದುರಂತದ ಸಂಗತಿ’ ಎಂದು ಶ್ಲಾಘಿಸಿದರು.
ಅಂಬೇಡ್ಕರ್ ಜೀವನ ಕುರಿತು ಶಿವಮೊಗ್ಗ ಡಿವಿಎಸ್ ಕಾಲೇಜು ನಿವೃತ್ತ ಪ್ರಾಂಶುಪಾಲ ಎಚ್. ರಾಚಪ್ಪ ಮಾತನಾಡಿದರು.
ಬಾಬು ಜಗಜೀವನ ರಾಂ ಜೀವನ ಕುರಿತು ಹೊನ್ನಾಳಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಉಪನ್ಯಾಸಕ ಎಂ.ಸಿ. ಮೋಹನ್ ಕುಮಾರ್ ಮಾತನಾಡಿದರು.
ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಕೆ.ಎಸ್. ಗುರುಮೂರ್ತಿ, ಅರಣ್ಯ ಅಭಿವೃದ್ಧಿ ನಿಗಮ ಉಪಾಧ್ಯಕ್ಷ ಕೊಳಗಿ ರೇವಣಪ್ಪ, ವಿವಿಧ ನಿಗಮ ಮಂಡಳಿ ನಿರ್ದೇಶಕರಾದ ಭದ್ರಾಪುರ ಹಾಲಪ್ಪ, ತೊಗರ್ಸಿ ಹನುಮಂತಪ್ಪ, ಗಾಯತ್ರಿದೇವಿ, ಸವಿತಾ ಶಿವಕುಮಾರನಾಯ್ಕ್, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಂ.ಬಿ. ಚನ್ನವೀರಪ್ಪ, ಪುರಸಭೆ ಅಧ್ಯಕ್ಷೆ ಲಕ್ಷ್ಮಿ ಮಹಾಲಿಂಗಪ್ಪ, ಸ್ಥಾಯಿ ಸಮಿತಿ ಅಧ್ಯಕ್ಷ ರೇಣುಕಾಸ್ವಾಮಿ, ತಹಶೀಲ್ದಾರ್ ಎಂ.ಪಿ. ಕವಿರಾಜ್, ತಾಲ್ಲೂಕು ಪಂಚಾಯಿತಿ ಇಒ ಪರಮೇಶ್, ಡಿವೈಎಸ್ಪಿ ಶಿವಾನಂದ ಮದರಖಂಡಿ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಶ್ರೀನಿವಾಸ್, ದಲಿತ ಸಮಾಜ ಮುಖಂಡರು ಇದ್ದರು.
ಕಾರ್ಯಕ್ರಮಕ್ಕೂ ಮುನ್ನ ಅಂಬೇಡ್ಕರ್ ಹಾಗೂ ಬಾಬು ಭಾವಚಿತ್ರ ಮೆರವಣಿಗೆ ನಡೆಯಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.