ಶಿವಮೊಗ್ಗ: ‘ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಪಕ್ಷದ ಹಿರಿಯ ಮುಖಂಡರು. ಅವರಿಗೆ ನನ್ನ ಮೇಲೆ ವಿಶೇಷ ಪ್ರೀತಿ ಇದೆ. ಅವರ ಟೀಕೆಗಳಿಗೆ ಪ್ರತಿಕ್ರಿಯಿಸಲಾರೆ’ ಎಂದು ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.
ನಗರದಲ್ಲಿ ಸೋಮವಾರ ಸುದ್ದಿಗಾರರ ಜತೆ ಅವರು ಮಾತನಾಡಿದರು.
ಫಲಾಪೇಕ್ಷೆ ಇಲ್ಲದೇ ಪಕ್ಷದ ಸಂಘಟನೆಯ ಕೆಲಸ ಮಾಡುವೆ. ಯಾವುದೇ ಆಕಾಂಕ್ಷಿಯಲ್ಲ. ಸ್ಥಾನ ಬಯಸಿಲ್ಲ. ತಂದೆ ಯಡಿಯೂರಪ್ಪ ಅವರ ಆಶಯದಂತೆ ಪಕ್ಷದ ಸಂಘಟನೆಯಲ್ಲಿ ತೊಡಗಿರುವೆ. ಹಳೆ ಮೈಸೂರು ಭಾಗದಲ್ಲಿ ಪಕ್ಷ ಸಂಘಟಿಸಲು ಹೈಕಮಾಂಡ್ ಸೂಚಿಸಿತ್ತು. ತಂದೆ ಹಲವು ಹೋರಾಟಗಳ ಮೂಲಕ ಪಕ್ಷ ಬೆಳೆಸಿದರು. ಅವರಿಗೆ ಸಂಪೂರ್ಣ ಸಾಥ್ ನೀಡುವೆ. ಮೈಸೂರು ಭಾಗದಲ್ಲಿ ಪಕ್ಷ ಬಲಪಡಿಸಲು ಒತ್ತು ನೀಡುತ್ತಿರುವೆ ಎಂದು ಮಾಹಿತಿ ನೀಡಿದರು.
ಹಲವು ಬಾರಿ ಪಕ್ಷ ಬಹುಮತದ ಹೊಸ್ತಿಲಲ್ಲಿ ಬಂದು ನಿಂತಿದೆ. ಮುಂದಿನ ಚುನಾವಣೆಯಲ್ಲಿ ಸ್ಪಷ್ಟ ಬಹುಮತ ಪಡೆಯಲಿದೆ. ಅದಕ್ಕಾಗಿ ಯಡಿಯೂರಪ್ಪ ಅವರು ಮುಖ್ಯಮಂತ್ರಿ ಸ್ಥಾನ ತ್ಯಜಿಸಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಪಕ್ಷವೂ ತಂದೆಗೆ ಉನ್ನತ ಸ್ಥಾನಮಾನ ನೀಡಿ ಗೌರವಿಸಿದೆ ಎಂದು ಸ್ಮರಿಸಿದರು.
ಇಂದಿರಾ ಕ್ಯಾಂಟೀನ್ ಹೆಸರು ಬದಲಾವಣೆ ಕುರಿತು ಪಕ್ಷದ ಚೌಕಟ್ಟಿನಲ್ಲಿ ಚರ್ಚೆ ನಡೆಯುತ್ತಿದೆ. ಕಾಂಗ್ರೆಸ್ನ ಕೆಲವು ಮುಖಂಡರು ವಾಜಪೇಯಿ ಕುರಿತು ಟೀಕೆ ಮಾಡಿದ್ದಾರೆ. ಟೀಕೆ ಮಾಡಿದರೆ ದೊಡ್ಡ ನಾಯಕರಾಗುತ್ತೇವೆ ಎಂಬ ಭ್ರಮೆಯಲ್ಲಿ ಇದ್ದಾರೆ. ಪ್ರಚಾರದ ಹೇಳಿಕೆಗಳಿಂದ ಯಾರೂ ನಾಯಕರಾಗಲು ಸಾಧ್ಯವಿಲ್ಲ ಎಂದು ಕುಟುಕಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.