ADVERTISEMENT

ಶಿವಮೊಗ್ಗ: ನಗರದಲ್ಲಿ ಕ್ಯಾನ್ಸರ್ ಆಸ್ಪತ್ರೆಗೆ ಶೀಘ್ರ ಶಿಲಾನ್ಯಾಸ

​ಪ್ರಜಾವಾಣಿ ವಾರ್ತೆ
Published 3 ಮೇ 2022, 5:18 IST
Last Updated 3 ಮೇ 2022, 5:18 IST
ಶಿವಮೊಗ್ಗ ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ವಿವಿಧ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಕಾರ್ಯಕ್ರಮವನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್‌ ಉದ್ಘಾಟಿಸಿದರು. ಗೃಹಸಚಿವ ಆರಗ ಜ್ಞಾನೇಂದ್ರ, ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ, ಸಚಿವ ಬೈರತಿ ಬಸವರಾಜ, ಸಂಸದ ಬಿ.ವೈ. ರಾಘವೇಂದ್ರ, ಡಾ.ವಾಣಿಕೋರಿ ಇದ್ದರು.
ಶಿವಮೊಗ್ಗ ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ವಿವಿಧ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಕಾರ್ಯಕ್ರಮವನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್‌ ಉದ್ಘಾಟಿಸಿದರು. ಗೃಹಸಚಿವ ಆರಗ ಜ್ಞಾನೇಂದ್ರ, ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ, ಸಚಿವ ಬೈರತಿ ಬಸವರಾಜ, ಸಂಸದ ಬಿ.ವೈ. ರಾಘವೇಂದ್ರ, ಡಾ.ವಾಣಿಕೋರಿ ಇದ್ದರು.   

ಶಿವಮೊಗ್ಗ: ಶಿವಮೊಗ್ಗದಲ್ಲಿ ಸದ್ಯದಲ್ಲೇ ಕ್ಯಾನ್ಸರ್ ಆಸ್ಪತ್ರೆಗೆ ಶಿಲಾನ್ಯಾಸ ನಡೆಯಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಹೇಳಿದರು.

ಇಲ್ಲಿನ ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ವಿವಿಧ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಶಿವಮೊಗ್ಗದಲ್ಲಿ ಕಾಲೇಜು ಉದ್ಘಾಟನೆಗೊಂಡು 100 ನರ್ಸಿಂಗ್ ವಿದ್ಯಾರ್ಥಿಗಳ ದಾಖಲಾತಿಗೆ ಕೇಂದ್ರದಿಂದ ಅನುಮೋದನೆ ದೊರೆತಿದೆ. ಅನೇಕ ಸಮಸ್ಯೆಗಳಿಗೆ ಉಪಯುಕ್ತವಾದ 128 ಸ್ಲೈಸ್ ಸಿಟಿ ಯಂತ್ರ ಉದ್ಘಾಟನೆಗೊಂಡಿದೆ ಎಂದು ತಿಳಿಸಿದರು.

ADVERTISEMENT

ರಾಜ್ಯದಲ್ಲಿ 30 ಸಾವಿರಕ್ಕೂ ಹೆಚ್ಚು ಹಾಸಿಗೆಗಳಿಗೆ ಆಕ್ಸಿಜನ್ ಅಳವಡಿಕೆ ಆಗಿರುವುದು ದಾಖಲೆ. ಲಿಕ್ವಿಡ್ ಆಕ್ಸಿಜನ್ ಫಿಲ್ಲಿಂಗ್ ಸ್ಟೇಷನ್ ಶಿವಮೊಗ್ಗದ ವಿಶೇಷ. ಶಿವಮೊಗ್ಗದ ಸಂಸ್ಥೆಗೆ 130 ಐಸಿಯು ಬೆಡ್, 108 ಎಚ್‍ಡಿಡಿ ಮತ್ತು 120 ವೆಂಟಿಲೇಟರ್ ನೀಡಲಾಗಿದೆ. ಎನ್‍ಐಸಿಯು ಘಟಕ, ಸ್ಕಿಲ್ ಲ್ಯಾಲ್ ಸೇರಿ ಎಲ್ಲ ರೀತಿಯ ಸೌಕರ್ಯ ಒದಗಿಸಲಾಗಿದೆ ಎಂದರು.

‘ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆ ಮೂಲಕ 50 ಕೋಟಿ ಜನರಿಗೆ ಉಚಿತವಾಗಿ ಆರೋಗ್ಯ ವಿಮೆ ನೀಡಿದ ಏಕೈಕ ದೇಶ ನಮ್ಮದು. ಪ್ರಾಥಮಿಕ ಮತ್ತು ದ್ವಿತೀಯ ಹಂತದ ಚಿಕಿತ್ಸೆಗಳು ಇತರೆ ಆಸ್ಪತ್ರೆಗಳಲ್ಲಿ ದೊರೆತರೆ ತೃತೀಯ ಹಂತದ ಚಿಕಿತ್ಸೆ ವೈದ್ಯಕೀಯ ಕಾಲೇಜುಗಳಿರುವೆಡೆ ಲಭಿಸುತ್ತದೆ. ಗುಣಮಟ್ಟದ ಸೇವೆ ನೀಡದಿದ್ದಲ್ಲಿ ಜನರು ಖಾಸಗಿ ಆಸ್ಪತ್ರೆಗೆ ಹೋಗುತ್ತಾರೆ. ಹಾಗಾಗದಂತೆ ನೋಡಿಕೊಳ್ಳಬೇಕು’ ಎಂದು ಸೂಚಿಸಿದರು.

ಗೃಹ ಸಚಿವ ಆರಗ ಜ್ಞಾನೇಂದ್ರ ಮಾತನಾಡಿ, ‘ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಬಡವರ ಆರೋಗ್ಯ ರಕ್ಷಣೆಯ ಕನಸು ನನಸಾಗಬೇಕು. ಮೆಡಿಕಲ್ ಕಾಲೇಜು ಮತ್ತಷ್ಟು ಬೆಳೆಯಬೇಕು. ಪ್ರಸ್ತುತ ನೀಡಿರುವ ಸೌಲಭ್ಯಗಳ ಉಪಯೋಗದ ಆತ್ಮಾವಲೋಕನ ಮಾಡಿಕೊಳ್ಳಬೇಕು’ ಎಂದು ಹೇಳಿದರು.

ಸಂಸದ ಬಿ.ವೈ. ರಾಘವೇಂದ್ರ ಮಾತನಾಡಿ, ‘ಮೆಗ್ಗಾನ್ ಆಸ್ಪತ್ರೆಯಲ್ಲಿ ನರ್ಸಿಂಗ್ ಕಾಲೇಜು ಉದ್ಘಾಟನೆಯೊಂದಿಗೆ ₹ 38.67 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ₹ 29.62 ಕೋಟಿ ವೆಚ್ಚದಲ್ಲಿ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಕಾರ್ಯಕ್ರಮ ನೆರವೇರಿದೆ. ಕ್ಯಾನ್ಸರ್ ಆಸ್ಪತ್ರೆ ಮಂಜೂರಾಗಿದ್ದು, ಮೆಗ್ಗಾನ್ ಆವರಣದಲ್ಲಿ ನಿರ್ಮಿಸುವುದಕ್ಕೆ ಯೋಜನೆ ತಯಾರಿಸಲಾಗುತ್ತಿದೆ’ ಎಂದು ತಿಳಿಸಿದರು.

ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ ಮಾತನಾಡಿ, ‘ನಮ್ಮ ಸರ್ಕಾರ ಅಭಿವೃದ್ಧಿ ಮತ್ತು ಜನಪರ ಕೆಲಸಗಳನ್ನು ಮಾಡುತ್ತಿದ್ದು, ಜನರ ಆಶೋತ್ತರಗಳನ್ನು ಈಡೇರಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ. ಕಾಲೇಜಿಗೆ ಅಗತ್ಯವಾದ ಯುಜಿಡಿ ಸೇರಿ ಇತರೆ ಕೆಲಸಗಳನ್ನು ತ್ವರಿತಗತಿಯಲ್ಲಿ ಮಾಡಲಾಗುವುದು’ ಎಂದು ಭರವಸೆ ನೀಡಿದರು. ಮಹಾನಗರ ಪಾಲಿಕೆ ಆಯುಕ್ತೆ ಸುನೀತ ಅಣ್ಣಪ್ಪ, ಜಿಲ್ಲಾಧಿಕಾರಿ ಡಾ.ಸೆಲ್ವಮಣಿ, ಜಿಲ್ಲಾ ಪಂಚಾಯಿತಿ ಸಿಇಒ ಎಂ.ಎಲ್. ವೈಶಾಲಿ, ಸಿಮ್ಸ್ ನಿರ್ದೇಶಕ ಡಾ.ಸಿದ್ದಪ್ಪ, ಡಾ.ಶ್ರೀಧರ್, ಡಾ.ರಾಜೇಶ್ ಸುರಗಿಹಳ್ಳಿ, ಡಾ.ಸಿದ್ದನಗೌಡ ಪಾಟೀಲ್, ಸಿಮ್ಸ್ ಆಡಳಿತ ಮಂಡಳಿ ಸದಸ್ಯ ಡಾ.ವಾಣಿ ಕೋರಿ, ಡಾ.ಗೌತಮ್, ದಿವಾಕರ್ ಶೆಟ್ಟಿ ಇದ್ದರು.

ಮೋದಿ ಅವರನ್ನು ವಿಮಾನದಲ್ಲೇ ಕರೆಸಿ ಉದ್ಘಾಟನೆ
‘ಶಿವಮೊಗ್ಗ ನಿರೀಕ್ಷೆ ಮೀರಿ ಒಳ್ಳೆಯ ರೀತಿಯಲ್ಲಿ ಬೆಳೆಯುತ್ತಿದೆ. ಇನ್ನು ಆರೇಳು ತಿಂಗಳಲ್ಲಿ ವಿಮಾನ ನಿಲ್ದಾಣ ಕಾಮಗಾರಿ ಮುಗಿಯಲಿದ್ದು, ಪ್ರಧಾನಿ ಮೋದಿಯವರನ್ನು ಬೆಂಗಳೂರಿನಿಂದ ಶಿವಮೊಗ್ಗಕ್ಕೆ ವಿಮಾನದಲ್ಲೇ ಕರೆತಂದು ಉದ್ಘಾಟನೆ ಮಾಡಿಸುವ ಅಪೇಕ್ಷೆ ಇದೆ’ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂಪ್ಪ ಅವರು ತಿಳಿಸಿದರು.

‘ನಾನು ಉಪಮುಖ್ಯಮಂತ್ರಿಯಾಗಿದ್ದ ವೇಳೆಯಲ್ಲಿ ಮಂಜೂರಾದ ಶಿವಮೊಗ್ಗ ಮೆಡಿಕಲ್ ಕಾಲೇಜು ಇಂದು ರಾಜ್ಯದಲ್ಲೇ ಟಾಪ್ ಕಾಲೇಜಾಗಿದೆ. ಕೋವಿಡ್ ಸಂಕಷ್ಟದ ಸಮಯದಲ್ಲಿ ಉತ್ತಮ ಸೇವೆ ನೀಡಿದೆ. ಹಿಂದೆ ಹೆಚ್ಚಿನ ಚಿಕಿತ್ಸೆಗಾಗಿ ಜನರು ಮಣಿಪಾಲಕ್ಕೆ ಹೋಗುತ್ತಿದ್ದರು. ಈಗ ಅದು ಶೇ 90 ಕಡಿಮೆ ಆಗಿದೆ. ಆ ರೀತಿಯ ವ್ಯವಸ್ಥೆಗಳು, ಸೌಲಭ್ಯ ಶಿವಮೊಗ್ಗದಲ್ಲೇ ದೊರಕುತ್ತಿದವೆ. ಯಾವುದೇ ರೋಗಿಗೆ ಅಗತ್ಯ ಚಿಕಿತ್ಸೆ ನೀಡುವ ಪ್ರಾಮಾಣಿಕ ಪ್ರಯತ್ನವನ್ನು ವೈದ್ಯರು ಸೇರಿ ಎಲ್ಲ ಸಿಬ್ಬಂದಿ ಮಾಡಬೇಕು ಎಂದು ಮನವಿ ಮಾಡಿದರು.

*
ಸರ್ಕಾರಿ ಆಸ್ಪತ್ರೆಗಳು ಮತ್ತು ವೈದ್ಯಕೀಯ ಕಾಲೇಜಿನ ಆಸ್ಪತ್ರೆಗಳು ಸಂಜೀವಿನಿಯಾಗಿ ಸೇವೆ ಸಲ್ಲಿಸಬೇಕು. ಜನರು ಸ್ಮರಣೆ ಮಾಡುವ ರೀತಿಯಲ್ಲಿ ವೈದ್ಯರು ಮತ್ತು ಆರೋಗ್ಯ ಸಿಬ್ಬಂದಿ ಕೆಲಸ ಮಾಡಬೇಕು.
-ಡಾ.ಕೆ. ಸುಧಾಕರ್, ವೈದ್ಯಕೀಯ ಶಿಕ್ಷಣ ಸಚಿವ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.